ಚಾಮರಾಜನಗರದಲ್ಲಿ ನಡೆದ ಕೋವಿಡ್ ಸಾವುಗಳು ಸರಕಾರಿ ಪ್ರಾಯೋಜಿತ ಕೊಲೆ : ಪಾಪ್ಯುಲರ್ ಫ್ರಂಟ್

Prasthutha|

ಚಾಮರಾಜನಗರದಲ್ಲಿ ನಡೆದ ಕೋವಿಡ್ ಸಾವುಗಳು ಸರಕಾರಿ ಪ್ರಾಯೋಜಿತ ಕೊಲೆಯಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಹೇಳಿದ್ದಾರೆ.

- Advertisement -

ರಾಜ್ಯದಲ್ಲಿ ಕೋವಿಡ್ 2ನೇ ಅಲೆಯು ಅನಾಹುತಕಾರಿಯಾಗಿ ಪಸರಿಸುತ್ತಿದೆ. ಈ ಮಧ್ಯೆ ಆಮ್ಲಜನಕ, ಹಾಸಿಗೆ, ವೆಂಟಿಲೇಟರ್ ಕೊರತೆಯಿಂದಾಗಿ ಜನರು ರೋದಿಸುತ್ತಿರುವ ದೃಶ್ಯಗಳು ಕೇಳಿಬರುತ್ತಿವೆ. ಸಾವಿನ ಸರಣಿಗಳು ದಿನಪ್ರಂತಿ ಹೆಚ್ಚುತ್ತಾ ಹೋಗುತ್ತಿವೆ. ಆದರೂ ರಾಜ್ಯ ಸರಕಾರ ಕೋವಿಡ್ ನಿರ್ವಹಣೆಗೆ ಸಂಬಂಧಿಸಿ ಇನ್ನೂ ಎಚ್ಚೆತ್ತುಕೊಂಡಿಲ್ಲ. ಆರೋಗ್ಯ ಸಚಿವ ಡಾ.ಸುಧಾಕರ್ ರಾಜ್ಯದಲ್ಲಿ ಆಮ್ಲಜನಕದ ಕೊರತೆ ಇಲ್ಲ ಎಂದು ಬಹಿರಂಗವಾಗಿ ಹೇಳಿಕೆ ನೀಡುತ್ತಿರುವಾಗಲೇ ಚಾಮರಾಜನಗರದಲ್ಲಿ ನಡೆದ ದಾರುಣ ಘಟನೆಯು ಆಡಳಿತ ವ್ಯವಸ್ಥೆಯ ನಿಷ್ಕ್ರಿಯತೆಯನ್ನು ಜನರ ಮುಂದೆ ತೆರೆದಿಟ್ಟಿದೆ.

ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಮ್ಲಜನಕ ಪೂರೈಕೆ ಇಲ್ಲದೆ ಕಳೆದ 24 ಗಂಟೆಗಳಲ್ಲಿ 23 ಕೋವಿಡ್ ಸಾವಿನ ಪ್ರಕರಣಗಳು ದಾಖಲಾಗಿವೆ. ಈ ನಡುವೆ ಆಸ್ಪತ್ರೆಯಲ್ಲಿ ಆಮ್ಲಜನಕ ಕೊರತೆ ಇದೆ, ಪರಿಸ್ಥಿತಿ ಹೀಗೆ ಮುಂದುವರಿದರೆ ಸಾವು-ನೋವು ಸಂಭವಿಸಬಹುದು ಎಂದು ಮಾಜಿ ಸಂಸದರೊಬ್ಬರು ಸರಕಾರವನ್ನು ಎಚ್ಚರಿಸಿದ್ದರು. ಅದೇ ರೀತಿ ಸಮಸ್ಯೆಯನ್ನು ಸರಕಾರದ ಗಮನಕ್ಕೆ ತರಲಾಗಿದೆ, ಸಮರ್ಪಕ ಆಮ್ಲಜನಕ ಪೂರೈಕೆಗೆ ಸಂಬಂಧಿಸಿ ಸರಕಾರದಿಂದ ಸಕಾಲಿಕ ಸ್ಪಂದನೆ ಸಿಗುತ್ತಿಲ್ಲ ಎಂದು ಸ್ವತಃ ಜಿಲ್ಲಾಧಿಕಾರಿಯವರೂ ಹೇಳಿದ್ದಾರೆನ್ನಲಾಗಿದೆ. ಇಷ್ಟಾದರೂ ಪರಿಸ್ಥಿತಿಯ ಗಂಭೀರತೆಯನ್ನು ಅರಿತುಕೊಂಡು ಆಮ್ಲಜನಕ ವ್ಯವಸ್ಥೆ ಕಲ್ಪಿಸಬೇಕಾಗಿದ್ದ ಸರಕಾರವು ಅದರ ಗೊಡವೆಗೇ ಹೋಗಿಲ್ಲ. ಈ ನಿಟ್ಟಿನಲ್ಲಿ ಇದು ಸರಕಾರವು ನಡೆಸಿದ ಘೋರ ಅಪರಾಧವಾಗಿದೆ. ಘಟನೆ ನಡೆದ ಬಳಿಕ ಬಿಜೆಪಿಯ ಹಿರಿಯ ನಾಯಕ ಹಾಗೂ ಚಾಮರಾಜನಗರ ಉಸ್ತುವಾರಿ ಸಚಿವ ರಮೇಶ್ ಕುಮಾರ್ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಕಾಟಾಚಾರಕ್ಕೆ ಸುದ್ದಿಗೋಷ್ಠಿ ನಡೆಸಿ ತೆರಳಿರುವುದು ವರದಿಯಾಗಿದೆ. ಜೊತೆಗೆ ಕ್ಷೇತ್ರದ ಸಂಸದರು, ಉಸ್ತುವಾರಿ ಸಚಿವರು ಜನರ ದಿಕ್ಕು ತಪ್ಪಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ.

- Advertisement -

ಹತ್ತಾರು ಜನರ ಸಾವಿಗೆ ಕಾರಣವಾದ ಈ ಭೀಕರ ಘಟನೆಗೆ ರಾಜ್ಯ ಸರಕಾರವೇ ನೇರ ಹೊಣೆಯಾಗಿದೆ. ಸಮಸ್ಯೆ ಬಗ್ಗೆ ಗಂಭೀರ ನಿರ್ಲಕ್ಷ್ಯ ತೋರಿದ ಜಿಲ್ಲಾ ಉಸ್ತುವಾರಿ ಸಚಿವರು, ಸಂಬಂಧಪಟ್ಟ ಅಧಿಕಾರಿಗಳು ಘಟನೆಯ ಹೊಣೆಹೊತ್ತು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ಘಟನೆಯನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಹಾಗೂ ತಪ್ಪಿತಸ್ಥರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು, ಸಂತ್ರಸ್ತರಿಗೆ ತಲಾ 1 ಕೋಟಿ ರೂಪಾಯಿ ಪರಿಹಾರ ನೀಡಬೇಕೆಂದು ಯಾಸಿರ್ ಹಸನ್ ಒತ್ತಾಯಿಸಿದ್ದಾರೆ.

Join Whatsapp