ಪೆಟ್ರೋಲ್ ಅನ್ನು ಜಿಎಸ್ ಟಿಗೆ ಸೇರಿಸುವ ಬದಲು ಸುಂಕ ಕಡಿತ ಮಾಡಲಿ: ಕುಮಾರಸ್ವಾಮಿ ಒತ್ತಾಯ

Prasthutha|

ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಈಗ ಒಂದು ಲೀಟರ್‌ ಪೆಟ್ರೋಲ್‌ ಮೇಲೆ 60–65 ರೂ. ತೆರಿಗೆ ಹಣ ಸಿಗುತ್ತಿದೆ. ಆದರೆ, ಎರಡೂ ಸರ್ಕಾರಗಳೂ ಲೀಟರ್‌ ಪೆಟ್ರೋಲ್‌ ಮೇಲೆ ಸಂಗ್ರಹಿಸುವ ಹಣ 30 ರೂ.ಮೀರಬಾರದು. ಆಗ ಪೆಟ್ರೋಲ್‌ 65–70ಗೆ ಬಂದು ನಿಲ್ಲಲಿದೆ. ನಿಜವಾಗಿಯೂ ಆಗಬೇಕಾದ್ದು ಇದು. ಈ ನಿಟ್ಟಿನಲ್ಲಿ ನಾವೆಲ್ಲರೂ ಹೋರಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

- Advertisement -


ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ತೈಲ ಬೆಲೆ ಇಳಿಸುವ ಉದ್ದೇಶದೊಂದಿಗೆ ಪೆಟ್ರೋಲನ್ನು ಜಿಎಸ್ ಟಿಗೆ ಸೇರಿಸುವುದು ಪರಿಹಾರವಲ್ಲ. ಅದು ಶೋಷಣೆ. ಬದಲಿಗೆ ಕೇಂದ್ರ ಈಗ ವಿಧಿಸುತ್ತಿರುವ ಮಿತಿಮೀರಿದ ಸುಂಕ ಕಡಿತ ಮಾಡಲಿ. ರಾಜ್ಯ ಸರ್ಕಾರವೂ ತೆರಿಗೆ ಇಳಿಸಲಿ. ಈಗ ತೈಲದ ಮೇಲೆ ಕೇಂದ್ರ, ರಾಜ್ಯಗಳೆರಡೂ ಶೇ. 68ರಷ್ಟು ತೆರಿಗೆ ವಿಧಿಸುತ್ತಿವೆ. ಈ ತೆರಿಗೆ ಪ್ರಮಾಣ ಕಡಿಮೆಯಾಗಬೇಕಾದ್ದು ಅಗತ್ಯ ಎಂದು ತಿಳಿಸಿದ್ದಾರೆ.


ಪೆಟ್ರೋಲ್‌ ಅನ್ನು ಜಿಎಸ್ ಟಿಗೆ ತಂದರೆ ಜನರಿಗೆ ತಕ್ಷಣಕ್ಕೆ ಬೆಲೆ ಇಳಿದಂತೆ ಅನ್ನಿಸಬಹುದು. ಆದರೆ, ಪೆಟ್ರೋಲನ್ನು ಜಿಎಸ್ ಟಿಗೆ ಸೇರಿಸುತ್ತಲೇ ಅದರ ಮೇಲಿನ ತೆರಿಗೆಯಿಂದ ಬರುತ್ತಿದ್ದ ಸಂಪನ್ಮೂಲ ರಾಜ್ಯಗಳ ಕೈತಪ್ಪಿ ಹೋಗುತ್ತದೆ. ಎಲ್ಲ ತೆರಿಗೆಯೂ ಕೇಂದ್ರದ ಪಾಲಾಗಿ ರಾಜ್ಯಗಳು ಸಂಪನ್ಮೂಲ ಬರ ಎದುರಿಸುತ್ತವೆ. ರಾಜ್ಯಗಳ ಅಭಿವೃದ್ಧಿಗೆ ಪೆಟ್ಟು ಬೀಳುತ್ತದೆ.
ಕೇಂದ್ರದ ಅಧಿಕಾರದ ಮೇಲೆ ಕಣ್ಣಿಟ್ಟು ಅದರ ಸುತ್ತಲೇ ರಾಜಕಾರಣ ಮಾಡುವುದಷ್ಟೇ ರಾಷ್ಟ್ರೀಯ ಪಕ್ಷಗಳ ಅಜೆಂಡಾ. ಅವುಗಳಿಗೆ ರಾಜ್ಯಗಳ ಹಿತಾಸಕ್ತಿ, ಸ್ಥಳೀಯ ಅಗತ್ಯಗಳು ಲೆಕ್ಕಕ್ಕೇ ಇಲ್ಲ. ಪೆಟ್ರೋಲ್‌ ಅನ್ನು ಜಿಎಸ್ ಟಿಗೆ ಸೇರಿಸುವುದು ರಾಜ್ಯಗಳನ್ನು ಶೋಷಿಸಿದಂತೆ. ಈಗ ಕಾಂಗ್ರೆಸ್‌–ಬಿಜೆಪಿಗಳೆರಡೂ ಆ ಶೋಷಣೆ ಪರವಾಗಿ ನಿಂತಿವೆ ಎಂಬುದು ಬಹಿರಂಗವಾಗಿದೆ ಎಂದರು.
ಪೆಟ್ರೋಲಿಯಂ ಖಾತೆಯ ಮಾಜಿ ಸಚಿವರೂ, ಕಾಂಗ್ರೆಸ್‌ನ ಹಿರಿಯರೂ ಆಗಿರುವ ನಾಯಕರೊಬ್ಬರು ಪೆಟ್ರೋಲನ್ನು ಜಿಎಸ್ ಟಿಗೆ ಸೇರಿಸಬೇಕೆಂದು ಆಗ್ರಹಿಸಿದ್ದಾರೆ. ಪೆಟ್ರೋಲ್‌ ಮೇಲಿನ ಮಿತಿ ಇಲ್ಲದ ತೆರಿಗೆ ಇಳಿಸುವುದು ಕಾಂಗ್ರೆಸ್‌ ಉದ್ದೇಶವಲ್ಲ, ಅದನ್ನು ಜಿಎಸ್ ಟಿಗೆ ಸೇರಿಸುವುದಷ್ಟೇ ಅದರ ಉದ್ದೇಶ ಎಂಬುದು ಸಾಬೀತಾಗಿದೆ. ಆದರೆ ಅದರ ಅಪಾಯ ಕಾಂಗ್ರೆಸ್‌ಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

- Advertisement -


ಕೇಂದ್ರ ಸರ್ಕಾರ ಪೆಟ್ರೋಲ್‌ ಬೆಲೆ ಏರಿಸುತ್ತಿದೆ. ಇತ್ತ ಕಾಂಗ್ರೆಸ್‌ ದೇಶದಾದ್ಯಂತ ಹೋರಾಡುತ್ತಿದೆ. ಪೆಟ್ರೋಲ್‌ ಬೆಲೆ ಇಳಿಯಬೇಕಿದ್ದರೆ ಅದನ್ನು ಜಿಎಸ್ ಟಿಗೆ ಸೇರಿಸಬೇಕೆಂದು ಕೇಂದ್ರ ಹೇಳಿದರೆ, ಕಾಂಗ್ರೆಸ್‌ ಕೂಡ ಅದನ್ನೇ ಪ್ರತಿಪಾದಿಸಿದೆ., ಹಾಗಾದರೆ, ಕಾಂಗ್ರೆಸ್‌ ಹೋರಾಡುತ್ತಿರುವುದು ಬೆಲೆ ಇಳಿಸಲೋ, ಪೆಟ್ರೋಲ್‌ ಅನ್ನು ಜಿಎಸ್ ಟಿಗೆ ಸೇರಿಸಲೋ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

Join Whatsapp