ಯುವ ಕಾಂಗ್ರೆಸ್ ಮುಖಂಡರೊಂದಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಂವಾದ | ಸಂಕಷ್ಟ ಕಾಲದಲ್ಲಿ ಸೇನಾನಿಗಳಾಗಿ ಕೆಲಸ ಮಾಡುವಂತೆ ಕರೆ

Prasthutha|

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ತೀವ್ರಗೊಂಡಿದ್ದು, ಸೋಂಕು ನಿಯಂತ್ರಣ, ರೋಗಿಗಳ ರಕ್ಷಣೆ, ಜನ ಸಾಮಾನ್ಯರಿಗೆ ಪ್ರದೇಶ ಯುವ ಕಾಂಗ್ರೆಸ್ ತಂಡ ನೆರವು ನೀಡಲು ಸದಾ ಸಜ್ಜಾಗಿರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.

- Advertisement -

ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷರುಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಜಿಲ್ಲಾ ಮತ್ತು ಬ್ಲಾಕ್ ಯುವ ಕಾಂಗ್ರೆಸ್ ಪದಾಧಿಕಾರಿಗಳೊಂದಿಗೆ ಡಿ.ಕೆ. ಶಿವಕುಮಾರ್ ಝೂಮ್ ಮೂಲಕ ಸಂವಾದ ನಡೆಸಿದರು.

ಕೋವಿಡ್ ಕಾಲದಲ್ಲಿ ಪಕ್ಷದ ವಿವಿಧ ಘಟಕಗಳು ನಡೆಸುತ್ತಿರುವ ಚಟುವಟಿಕೆಗಳು, ಜನ ಸಾಮಾನ್ಯರಿಗೆ ನೆರವಾಗುತ್ತಿರುವ ಕುರಿತು ಮಾಹಿತಿ ಪಡೆದರು.

- Advertisement -

ಸಭೆಯಲ್ಲಿ ರಕ್ಷಾ ರಾಮಯ್ಯ ಮಾತನಾಡಿ, ಎಲ್ಲಾ ಜಿಲ್ಲೆಗಳಲ್ಲಿ ಕೋವಿಡ್ ಸೋಂಕಿತರಿಗೆ ಹೋಂ ಐಸೋಲೇಷನ್ ಕಿಟ್ ಗಳನ್ನು ಅವರ ಮನೆಗಳಿಗೆ ತಲುಪಿಸುತ್ತಿದ್ದೇವೆ. ಅತಿ ಅವಶ್ಯಕತೆ ಇರುವವರಿಗೆ ಆಮ್ಲಜನಕ ಸಿಲೆಂಡರ್ ಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ಬೆಂಗಳೂರಿನಲ್ಲಿ ಸಹಸ್ರಾರು ಜನರಿಗೆ ಆಹಾರ ಒದಗಿಸುತ್ತಿದ್ದು, ಕೋವಿಡ್ ಲಸಿಕೆಗೆ ನೋಂದಣಿ ಮಾಡಿಕೊಳ್ಳುವುದು ಸೇರಿ ಎಲ್ಲಾ ರೀತಿಯಲ್ಲೂ ಯುವ ಕಾಂಗ್ರೆಸ್ ನೆರವಾಗುತ್ತಿದೆ ಎಂದು ಮಾಹಿತಿ ನೀಡಿದರು.

ಸಭೆಯ ನಂತರ ಈ ಕುರಿತು ಮಾಹಿತಿ ನೀಡಿದ ಎಂ.ಎಸ್. ರಕ್ಷಾ ರಾಮಯ್ಯ, ಸಭೆ ಅತ್ಯಂತ ಫಲಪ್ರದವಾಗಿತ್ತು. ಕೆಪಿಸಿಸಿ ಅಧ್ಯಕ್ಷರು ಕೋವಿಡ್ ಸಂಕಷ್ಟ ಸಂದರ್ಭದಲ್ಲಿ ಎಲ್ಲರೂ ಸೇನಾನಿಗಳಾಗಿ ಕೆಲಸ ಮಾಡಬೇಕು. ಜನರಿಗೆ ಕೋವಿಡ್ ಕುರಿತ ಮಾಹಿತಿ ಮತ್ತು ಸರ್ಕಾರದ ಮಟ್ಟದಲ್ಲಿ ಇರುವ ಸೌಲಭ್ಯದ ಬಗ್ಗೆ ಮಾಹಿತಿ ನೀಡಬೇಕು. ಎಲ್ಲಾ ಜಿಲ್ಲೆಗಳಲ್ಲಿ ಕಾಂಗ್ರೆಸ್ ಆರಂಭಿಸಿರುವ ಪ್ರದೇಶ ಕಾಂಗ್ರೆಸ್ ಕೇರ್ ಕೇಂದ್ರಗಳಿಗೆ ಯುವ ಕಾಂಗ್ರೆಸ್ ಸೂಕ್ತ ರೀತಿಯಲ್ಲಿ ಸಹಾಯ ಮಾಡಬೇಕು ಎಂದು ಸೂಚಿಸಿರುವುದಾಗಿ ತಿಳಿಸಿದರು.

ಕೊರೋನಾ ಸಮಸ್ಯೆ ನಿವಾರಿಸಲು ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದ್ದು, ಸರ್ಕಾರದ ವೈಫಲ್ಯಗಳನ್ನು ವೀಡಿಯೊ ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಬೇಕು. ಎಲ್ಲಾ ಹಂತಗಳಲ್ಲಿ ಮಾಧ್ಯಮಗಳಿಗೆ ಬೆಂಬಲವಾಗಿ ನಿಲ್ಲಬೇಕು. ಮಾಧ್ಯಮಗಳಲ್ಲಿ ವರದಿಯಾಗುವ ಸಮಸ್ಯೆಗಳು, ವೈಫಲ್ಯಗಳ ವಿರುದ್ಧ ಜನ ಜಾಗೃತಿ ಮೂಡಿಸಬೇಕು. ಸರ್ಕಾರದ ಸೌಲಭ್ಯಗಳು ಜನರಿಗೆ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ಸಲಹೆ ಮಾಡಿರುವುದಾಗಿ ರಕ್ಷಾ ರಾಮಯ್ಯ ತಿಳಿಸಿದರು.

ಕೋವಿಡ್ ಸೋಂಕಿತರಿಗೆ ಹಾಸಿಗೆ ಸೌಲಭ್ಯ, ಆಮ್ಲಜನಕ, ಇತರೆ ಔಷಧಿಗಳನ್ನು ಒದಗಿಸಬೇಕು. ಕೊರೋನಾದಿಂದ ಮರಣ ಹೊಂದಿದವರಿಗೆ ಗೌರವಯುತವಾಗಿ ಅಂತ್ಯ ಸಂಸ್ಕಾರ ಮಾಡಲು ನೆರವಾಗಬೇಕು. ಸ್ಮಶಾನಗಳಲ್ಲಿ ಸೂಕ್ತ ವ್ಯವಸ್ಥೆ ಕಲ್ಪಿಸಲು ಮುಂದಾಗಬೇಕು ಎಂದು ನಮಗೆ ಸೂಚಿಸಿದ್ದಾರೆ ಎಂದರು.

ಪ್ರಮುಖ ಕಾಂಗ್ರೆಸ್ ನಾಯಕರು ಮರಣ ಹೊಂದಿದಾಗ ಅವರನ್ನು ಸ್ಮರಿಸುವ ಕೆಲಸ ಆಗಬೇಕು. ಸ್ಥಳೀಯವಾಗಿ ಸಂತಾಪ ಸೂಚಿಸಿ ಗೌರವ ಸಲ್ಲಿಸಬೇಕು. ಕೊರೋನಾ ಸಂಕಷ್ಟ ಸಮಯದಲ್ಲಿ ಪಕ್ಷದ ಸೇನಾನಿಗಳು ಮಾಡಿದ ಕೆಲಸ ಮಾಧ್ಯಮಗಳ ಮೂಲಕ ಜನ ಸಾಮಾನ್ಯರಿಗೆ ತಲುಪುವಂತೆ ನೋಡಿಕೊಳ್ಳಬೇಕು. ಪ್ರತಿವಾರ ತಪ್ಪದೇ ಕೆಪಿಸಿಸಿಗೆ ವರದಿ ಮಾಡಬೇಕು ಎಂದು ಡಿ.ಕೆ. ಶಿವಕುಮಾರ್ ಅವರು ಸೂಚಿಸಿದ್ದಾರೆ ಎಂದರು.

Join Whatsapp