12 ಕೋಟಿ ರೂ. ವೆಚ್ಚದಲ್ಲಿ ಹಿರಿಯ ನಟ ದಿ. ಅಂಬರೀಶ್ ಸ್ಮಾರಕ ನಿರ್ಮಾಣಕ್ಕೆ ಸಂಪುಟ ಸಭೆ ಒಪ್ಪಿಗೆ

Prasthutha|

ಬೆಂಗಳೂರು: ಹಿರಿಯ ನಟ ದಿ. ಅಂಬರೀಶ್ ಅವರ ಸ್ಮಾರಕ ನಿರ್ಮಾಣಕ್ಕೆ 12 ಕೋಟಿ ರೂ. ನೀಡಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ.

- Advertisement -

ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆ ನಂತರ ಮಾಧ್ಯಮಗೋಷ್ಠಿಯಲ್ಲಿ ಈ ಬಗ್ಗೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ನಟ ಡಾ. ಎಂ.ಎಚ್. ಅಂಬರೀಶ್ ಸ್ಮಾರಕವನ್ನು ಕಂಠೀರವ ಸ್ಟುಡಿಯೋ ಆವರಣದಲ್ಲಿ 12 ಕೋಟಿ ರೂ. ಗಳ ಅಂದಾಜು ವೆಚ್ಚದಲ್ಲಿ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.

ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆಗೊಂಡಿರುವ ಇತರ ವಿಷಯಗಳು:

- Advertisement -

ಆಯುಷ್ ಇಲಾಖೆಯಲ್ಲಿ ಖಾಲಿ ಇರುವ ಶುಶ್ರೂಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅನುಮತಿ ನೀಡಲಾಗಿದೆ.

ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನೂತನ ನ್ಯಾಯಾಲಯ, ಸಂಕೀರ್ಣ ನಿರ್ಮಾಣ ಕಾಮಗಾರಿಗೆ 19.73 ಕೋಟಿ ರೂ.ಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ.

ಜಲ ಜೀವನ್ ಮಿಷನ್: ಜಲ ಜೀವನ್ ಮಿಷನ್ ಅನುದಾನ ಮತ್ತು ವಿಶ್ವಬ್ಯಾಂಕ್ ಹಣಕಾಸಿನ ನೆರವಿನಿಂದ ರಾಜ್ಯಾದ್ಯಂತ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಗ್ರಾಮೀಣ ಮನೆಗಳಿಗೆ ಕಾರ್ಯಾತ್ಮಕ ನಳನೀರು ಸಂಪರ್ಕ ಒದಗಿಸುವ 9152 ಕೋಟಿಗಳ ಯೋಜನೆಗೆ ಅನುಮೋದನೆ ನೀಡಲಾಗಿದೆ. ಮೈಸೂರು ನಗರದಲ್ಲಿ ನಿರ್ಮಾಣವಾಗುತ್ತಿರುವ ಡಾ. ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗಳ 2ನೇ ಹಂತದಲ್ಲಿ ಒಳಾಂಗಣ ಮತ್ತು ಅಪೂರ್ಣಗೊಂಡಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಲು 16.50 ಕೋಟಿ ರೂ.ಗೆ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

300 ಎಲೆಕ್ಟ್ರಾನಿಕ್ ಬಸ್ ಖರೀದಿ: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು, ರಾಜ್ಯ ಸರ್ಕಾರದ 100 ಕೋಟಿ ರೂ. ವೆಚ್ಚದಲ್ಲಿ ಕೇಂದ್ರ ಸರ್ಕಾರ ಪ್ರತಿ ಬಸ್ ಗೆ ನೀಡುವ ಗರಿಷ್ಠ ಬೇಡಿಕೆ ಪ್ರೋತ್ಸಾಹ ಧನ ಸೇರಿಸಿಕೊಂಡು 300 Non-AC ಬಸ್ಗಳನ್ನು Gross Cost Contract ಬಿಡ್ಡಿಂಗ್ ಮೂಲಕ OPEX ಮಾದರಿಯಲ್ಲಿ ಕಾರ್ಯಾಚರಣೆ ಮಾಡಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿತ್ತು. ಆದರೆ, ಈಗ ನಾನ್ ಎಸಿ ಬಿಟ್ಟು ಎಲೆಕ್ಟ್ರಾನಿಕ್ ಬಸ್ಗಳ ಖರೀದಿಗೆ ಅನುಮೋದನೆ ನೀಡಲಾಗಿದೆ. ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ವಹಣೆ (ಎರಡನೇ ತಿದ್ದುಪಡಿ) ವಿಧೇಯಕ, 2020ಕ್ಕೆ ಘಟನೋತ್ತರ ಅನುಮೋದನೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗ್ ಜಲಪಾಶದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ DBFOT ಆಧಾರದಲ್ಲಿ ಐಷಾರಾಮಿ ಹೋಟೆಲ್ ಮತ್ತು ಶರಾವತಿ ನದಿಗೆ ಅಡ್ಡಲಾಗಿ ರೋಪ್ ವೇಯನ್ನು 116 ಕೋಟಿ ರೂ.ಗಳ ಅಂದಾಜು ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಒಪ್ಪಿಗೆ ಸೂಚಿಸಲಾಗಿದೆ.

ಮೈಸೂರಿನ ಜೆ.ಪಿ.ನಗರ 12ನೇ ಹಂತದ “ಸಿ” ಬ್ಲಾಕ್ ನಲ್ಲಿ 4732.80 ಚ.ಮೀ. ವಿಸ್ತೀರ್ಣದ ಮೈಸೂರು ನಗರಾಭಿವೃದ್ಧಿ ಸೌಲಭ್ಯ ನಿವೇಶನವನ್ನು ಶ್ರೀ ಸಿದ್ದಲಿಂಗೇಶ್ವರಸ್ವಾಮಿ ಸಮಿತಿ ಟ್ರಸ್ಟ್, ಮೈಸೂರು ಅವರಿಗೆ ದೇವಾಲಯ ನಿರ್ಮಾಣಕ್ಕಾಗಿ 30 ವರ್ಷಗಳ ಅವಧಿಗೆ ಗುತ್ತಿಗೆ ಮೇಲೆ ಹಂಚಿಕೆ ಮಾಡಲಾಗಿದೆ.

ದೇವಾಂಗ ಸಂಘ, ದಾವಣಗೆರೆ ಇವರಿಗೆ ದಾವಣಗೆರೆ ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದಿಂದ ಕುಂದವಾಡ ಗ್ರಾಮದ ರಿ.ಸ.ನಂ. 241/1,4,2 ರಲ್ಲಿನ ಅಂತಿಮ ಅನುಮೋದಿತ – ಖಾಸಗಿ ವಸತಿ ಬಡಾವಣೆಯಲ್ಲಿನ ನಾಗರಿಕ ಸೌಲಭ್ಯ ಉದ್ದೇಶಕ್ಕಾಗಿ ಕಾಯ್ದಿರಿಸಿದ ನಿವೇಶನ ಮಂಜೂರಾಗಿದ್ದು, ಪ್ರಾಧಿಕಾರಕ್ಕೆ ಪಾವತಿಸಬೇಕಾಗಿರುವ ಮೊತ್ತದಲ್ಲಿ ರಿಯಾಯಿತಿ ನೀಡಲು ಸಮ್ಮತಿ ನೀಡಲಾಗಿದೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ಧತಿ ಅಡಿಯಲ್ಲಿ 2016-17 ಸಾಲಿನಿಂದ ಕೆಲವು ತೆರಿಗೆದಾರರು ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡಿರುವ ಪ್ರಕರಣಗಳಲ್ಲಿ, ಪಾವತಿ ಮಾಡಬೇಕಾದ ವ್ಯತ್ಯಾಸದ ಮೊತ್ತಕ್ಕೆ ದುಪ್ಪಟ್ಟು ದಂಡ ಮತ್ತು ಬಡ್ಡಿಯನ್ನು ತೆರಿಗೆದಾರರು ಪಾವತಿಸಲು ಒಪ್ಪಿಗೆ ನೀಡಲಾಗಿದೆ. ಮಹಾನಗರ 2008 2013-ನೇ ಸಾಲಿನಿಂದ 2020-21ನೇ ಸಾಲಿನವರೆಗೆ ಪಾಲಿಕೆಯ ವ್ಯಾಪ್ತಿಯಲ್ಲಿರುವ ಸ್ವತ್ತುಗಳ ಮೇಲೆ ಶೇ.2 ರಷ್ಟು ನಗರ ಭೂ ಸಾರಿಗೆ ಉಪಕರವನ್ನು ವಿಧಿಸದೇ ಇರುವುದನ್ನು (ಅಂದಾಜು ರೂ. 238 ಕೋಟಿಗಳು) ಮನ್ನಾ ಮಾಡಲು ಸಮ್ಮತಿ ನೀಡಲಾಗಿದೆ.

ಬೆಂಗಳೂರು ಜಲಮಂಡಳಿಯ ತೊರೆಕಾಡನಹಳ್ಳಿ, ಹಾರೋಹಳ್ಳಿ ಮತ್ತು ತಾತಗುಣಿಯ ಕಾವೇರಿ 1ನೇ ಹಂತ, 2ನೇ ಹಂತ ಹಾಗೂ 3ನೇ ಹಂತ ಜಲರೇಚಕ ಯಂತ್ರಾಗಾರಗಳಲ್ಲಿ ವಿದ್ಯುತ್ ಸ್ವಿಚ್ ಗೇರ್ಗಳ ಪುನರ್ ನಿರ್ಮಾಣ ಕಾಮಗಾರಿಯ ರೂ. 44.50 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ ಸಿಕ್ಕಿದೆ.

ಕೋಲಾರ ಜಿಲ್ಲೆ, ಮುಳಬಾಗಿಲು ಪಟ್ಟಣದಲ್ಲಿ ನ್ಯಾಯಾಲಯ ಸಂಕೀರ್ಣ ಕಟ್ಟಡ ನಿರ್ಮಾಣ ಕಾಮಗಾರಿಯ 16.80 ಕೋಟಿ ರೂ. ಪರಿಷ್ಕೃತ ಅಂದಾಜಿಗೆ ಅನುಮೋದನೆ ನೀಡಲಾಗಿದೆ. ಉಡುಪಿ ಜಿಲ್ಲೆ, ಕಾಪು ತಾಲೂಕಿನ ಶ್ರೀ ಜನಾರ್ದನ ದೇವಾಲಯಕ್ಕೆ ಸೇರಿದ ಪಡು ಗ್ರಾಮದ ಸರ್ವೆ ನಂ. 37/10 ರಲ್ಲಿರುವ 0.10 ಎಕರೆ ಜಾಗವನ್ನು ಕಾಪು ಬಂಟರ ಸಂಘ (ರಿ)ಕ್ಕೆ ಗುತ್ತಿಗೆ ಆಧಾರದ ಮೇಲೆ ಮಂಜೂರು ಮಾಡಲು ಅನುಮೋದನೆ ನೀಡಲಾಗಿದೆ. (ಪೂರ್ವ) ತಾಲೂಕು ಕೆ.ಆರ್, ಪುರಂ ತ್ಯಾಜ್ಯ ನೀರು ಸಂಸ್ಕರಣಾ ಘಟಕದಿಂದ ಏತ ನೀರಾವರಿ ಯೋಜನೆಯ ಮೂಲಕ ಬೆಂಗಳೂರು (ಪೂರ್ವ) ತಾಲೂಕಿನ 22 ಕೆರೆಗಳಿಗೆ ನೀರು ತುಂಬಿಸುವ ಹಾಗೂ ಹೊಸಕೋಟೆ ತಾಲೂಕಿನ ದೊಡ್ಡಕೆರೆಗೆ ನೀರು ತುಂಬಿಸುವ ಏತ ನೀರಾವರಿ ಯೋಜನೆಯ ಪುನರುಜ್ಜೀವನ ಕಾಮಗಾರಿಗಳನ್ನು ಒಟ್ಟಾರೆ ರೂ. 93.50 ಕೋಟಿಗಳ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

ಮಾರುತಿ ಎಜುಕೇಷನ್ ಟ್ರಸ್ಟ್ ಗುತ್ತಿಗೆ ಆಧಾರದ ಮೇಲೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೊಡ್ಡಬಳ್ಳಾಪುರ ತಾಲೂಕು, ರಾಜಘಟ್ಟ ಗ್ರಾಮದ ಸ.ನಂ. 197 ರಲ್ಲಿನ 2-08 ಎಕರೆ/ಗುಂಟೆ ಜಮೀನಿನ ಗುತ್ತಿಗೆ ಮೊತ್ತವನ್ನು ಪರಿಷ್ಕರಿಸಲು ಒಪ್ಪಿಗೆ ನೀಡಲಾಗಿದೆ. ಮೈಸೂರು ಜಿಲ್ಲೆ, ಹುಣಸೂರು, ಮೂಕನಹಳ್ಳಿ, ಗ್ರಾಮದ ಸ.ನಂ. 90ರಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ತಾಲೂಕು ಒಕ್ಕಲಿಗರ ಸಂಘ, ಹುಣಸೂರು ಇವರಿಗೆ ಈಗಾಗಲೇ ಮಂಜೂರು ಮಾಡಿರುವ 2 ಎಕರೆ ಜಮೀನಿನ ಉಪಯೋಗದ ಉದ್ದೇಶವನ್ನು ಮಾರ್ಪಡಿಸುವುದು ಮತ್ತು ಜಮೀನಿನ ಮೌಲ್ಯವನ್ನು ಪರಿಷ್ಕರಿಸಲು ಸಮ್ಮತಿ ನೀಡಲಾಗಿದೆ.

ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲೂಕು, ಹಿರೀಸಾವೆ ಹೋಬಳಿ, ಕಬ್ಬಳಿ ಗ್ರಾಮದ ವಿವಿಧ ಸರ್ವೆ ನಂಬರ್ಗಳಲ್ಲಿ ಒಟ್ಟು 22-36 ಎಕರೆ ಜಮೀನನ್ನು ಅಧ್ಯಕ್ಷರು, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ, ಬೆಂಗಳೂರು ಇವರಿಗೆ ಮಂಜೂರು ಮಾಡಲು ಸಮ್ಮತಿ ನೀಡಲಾಗಿದೆ.

ಬಾಗಲಕೋಟೆ ಜಿಲ್ಲೆ, ಬಾಗಲಕೋಟೆ ತಾಲೂಕಿನ ಶೀಗಿಕೇರಿ ಗ್ರಾಮದ ರಿ.ಸ.ನಂ.64/ಅ/16 ರಲ್ಲಿ 5 ಎಕರೆ ಸರ್ಕಾರಿ ಗೋಮಾಳ ಜಮೀನನ್ನು ಪರಿವರ್ತನ ಸಾಮಾಜಿಕ ಸೇವಾ ಸಂಘ, ಮುಧೋಳ ಇವರಿಗೆ ಮಂಜೂರು ಮಾಡಲು ಒಪ್ಪಿಗೆ ನೀಡಲಾಗಿದೆ.

ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಚೇರಿಗಳಿಗೆ ಬಿಲ್ಟ್, ಒನ್ ಆ್ಯಂಡ್ ಆಪರೇಟ್ ಮಾದರಿಯಲ್ಲಿ (Boo Model) ಐಟಿ ಉಪಕರಣಗಳ ಪೂರೈಕೆ, ಅಳವಡಿಕೆ, ಕಾರ್ಯಾಚರಣೆ ಹಾಗೂ ನಿರ್ವಹಣೆ ಮಾಡಲು ಮತ್ತು ಅಗತ್ಯವಿರುವ ಮಾನವ ಸಂಪನ್ಮೂಲವನ್ನು ನಿಯೋಜಿಸುವ ಸಂಬಂಧ ಸೇವಾ ಪೂರೈಕೆದಾರರನ್ನು ಆಯ್ಕೆ ಮಾಡಲು ಅಗತ್ಯವಿರುವ 406.44 ಕೋಟಿ ರೂ.ಗಳ ಅನುದಾನಕ್ಕೆ ಅನುಮೋದನೆ ನೀಡಲಾಗಿದೆ.

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ವಿಧಾನಮಂಡಲದ ಉಭಯ ಸದನಗಳ – ಅಧಿವೇಶನಗಳನ್ನುಸಮಾಪನಗೊಳಿಸಲು ಅನುಮೋದನೆ ನೀಡಲಾಗಿದ್ದು, ರಾಜ್ಯಪಾಲರಿಗೆ ಕಳುಹಿಸಲಾಗಿದೆ ಎಂದು ಸಚಿವರು ತಿಳಿಸಿದರು.

Join Whatsapp