ಉತ್ತರಪ್ರದೇಶ | ಪಂಚಾಯತ್ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ 577 ಶಿಕ್ಷಕರ ಸಾವು!
Prasthutha: April 29, 2021

ಲಕ್ನೋ: ಕೋವಿಡ್ ಸೋಂಕಿನ ಸಂದರ್ಭದಲ್ಲಿ ಉತ್ತರಪ್ರದೇಶದ ಪಂಚಾಯತ್ ಚುನಾವಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ 577 ಮಂದಿ ಶಿಕ್ಷಕರು ಸಾವನ್ನಪ್ಪಿರುವುದಾಗಿ ಉತ್ತರಪ್ರದೇಶದ ಶಿಕ್ಷಕರ ಸಂಘ ರಾಜ್ಯ ಚುನಾವಣಾ ಆಯೋಗಕ್ಕೆ ವರದಿಯನ್ನು ಸಲ್ಲಿಸಿದ್ದು, ಮೇ 2ರಂದು ನಡೆಯಲಿರುವ ಮತ ಎಣಿಕೆಯನ್ನು ಮುಂದೂಡುವಂತೆ ಮನವಿ ಮಾಡಿಕೊಂಡಿದೆ.
ಕೋವಿಡ್ ಸೋಂಕಿನ ನಡುವೆಯೇ 71 ಜಿಲ್ಲೆಗಳಲ್ಲಿ ಚುನಾವಣಾ ಕರ್ತವ್ಯ ನಿರ್ವಹಿಸಿದ್ದ 577 ಶಿಕ್ಷಕರು ಸಾವನ್ನಪ್ಪಿದ್ದು, ಅವರ ವಿವರಗಳನ್ನು ಆಯೋಗಕ್ಕೆ ನೀಡಲಾಗಿದೆ ಎಂದು ಉತ್ತರಪ್ರದೇಶದ ಶಿಕ್ಷಕ್ ಮಹಾಸಂಘದ ಅಧ್ಯಕ್ಷ ದಿನೇಶ್ ಚಂದ್ರ ಶರ್ಮಾ ತಿಳಿಸಿದ್ದಾರೆ.
ಪಂಚಾಯತ್ ಚುನಾವಣೆ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸಿದ್ದ ಸರಕಾರಿ ನೌಕರರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವರಣೆ ಕೇಳಿ ಅಲಹಾಬಾದ್ ಹೈಕೋರ್ಟ್ ರಾಜ್ಯ ಚುನಾವಣಾ ಆಯೋಗಕ್ಕೆ ಮಂಗಳವಾರ ನೋಟಿಸ್ ಜಾರಿ ಮಾಡಿತ್ತು.
ಈ ಹಿನ್ನೆಲೆಯಲ್ಲಿ ಶಿಕ್ಷಕರ ಸಾವಿನ ಕುರಿತ ವರದಿಯನ್ನು 24ಗಂಟೆಯೊಳಗೆ ಕಳುಹಿಸುಂತೆ ವಿಶೇಷ ಅಧಿಕಾರಿ ಎಸ್ ಕೆ ಸಿಂಗ್ ಅವರು ಜಿಲ್ಲಾ ಮ್ಯಾಜಿಸ್ಟ್ರೇಟ್, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಚುನಾವಣಾ ಅಧಿಕಾರಿಗಳಿಗೆ ಪತ್ರವನ್ನು ರವಾನಿಸಿದ್ದರು ಎನ್ನಲಾಗಿದೆ.
