ಮತದಾರರ ಪಟ್ಟಿಯಲ್ಲಿ ಅಕ್ರಮ: ಮುಖ್ಯ ಚುನಾವಣಾ ಆಯುಕ್ತರಿಗೆ ದೂರು ನೀಡಿದ SDPI ನಿಯೋಗ

Prasthutha|

ಬೆಂಗಳೂರು: 2023 ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕ ಸರ್ಕಾರ ಸಮೀಕ್ಷೆಗಳ ನೆಪದಲ್ಲಿ ಕೆಲವು ಖಾಸಗಿ ಸಂಸ್ಥೆಗಳನ್ನು ಬಳಸಿಕೊಂಡು ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ಲಕ್ಷಾಂತರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕುತ್ತಿದೆ. ತಕ್ಷಣ ಚುನಾವಣಾ ಆಯೋಗ ಮಧ್ಯಪ್ರವೇಶಿಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿ ಎಸ್’ಡಿಪಿಐ ರಾಜ್ಯ ನಿಯೋಗ ಮಂಗಳವಾರ ಬೆಂಗಳೂರಿನಲ್ಲಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಿತು.

- Advertisement -

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್’ಡಿಪಿಐ) ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರ್ ಪ್ರಸಾದ್, ರಾಷ್ಟ್ರೀಯ ಸಮಿತಿ ಸದಸ್ಯ ಡಾ. ಮೆಹಬೂಬ್ ಅವಾದ್ ಷರೀಫ್, ಬೆಂಗಳೂರು ಜಿಲ್ಲಾಧ್ಯಕ್ಷ ಮುಜಾಯಿದ್ ಪಾಷಾ, ಕೋಶಾಧಿಕಾರಿ ಖಾಲಿದ್ ಯಾದಗಿರ್ ನಿಯೋಗದಲ್ಲಿದ್ದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಬಿ.ಆರ್. ಭಾಸ್ಕರ್ ಪ್ರಸಾದ್, 2023 ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕ ಸರ್ಕಾರ ಸಮೀಕ್ಷೆಗಳ ನೆಪದಲ್ಲಿ ಕೆಲವು ಖಾಸಗಿ ಸಂಸ್ಥೆಗಳನ್ನು ಬಳಸಿಕೊಂಡು ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ಲಕ್ಷಾಂತರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದೆ. ಬೆಂಗಳೂರು ಜಿಲ್ಲೆ ಒಂದರಲ್ಲೆ ಸುಮಾರು ಅರೂವರೆ ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಎನ್’ಜಿಒ ಮೂಲಕ ಮತದಾರರ ಮಾಹಿತಿ ಸಂಗ್ರಹಿಸಿ ತಮ್ಮ ವಿರುದ್ಧ ಮತದಾನ ಮಾಡುವವರ ಹೆಸರನ್ನು ವ್ಯವಸ್ಥಿತವಾಗಿ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಇದಕ್ಕೆ ಕೇವಲ ಒಂದು ಎನ್’ಜಿಒ ಅನ್ನು ಜವಾಬ್ದಾರಿಯನ್ನಾಗಿ ಮಾಡುವುದು ಸರಿಯಲ್ಲ. ಸಚಿವರೊಬ್ಬರ ಲೆಡರ್ ಹೆಡ್ ಕೂಡ ಚಿಲುಮೆ ಎಂಬ ಎನ್’ಜಿಒ ಕಚೇರಿಯಲ್ಲಿ ದೊರೆತಿದೆ. ಈ ಅಕ್ರಮದಲ್ಲಿ ಇಡೀ ಸರ್ಕಾರವೇ ನೇರವಾಗಿ ಪಾಲ್ಗೊಂಡಿರುವ ಅನುಮಾನವಿದೆ. ಆದ್ದರಿಂದ ಚುನಾವಣಾ ಆಯೋಗ ಸಮಗ್ರ ತನಿಖೆ ನಡೆಸಿ ಅಕ್ರಮದಲ್ಲಿ ಪಾಲ್ಗೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅಕ್ರಮವಾಗಿ ಮತದಾರರ ಪಟ್ಟಿಯಿಂದ ಹೆಸರು ಕಳೆದುಕೊಂಡಿರುವ ಲಕ್ಷಾಂತರ ಮತದಾರರಿಗೆ ನ್ಯಾಯ ಸಿಗುವವರೆಗೂ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬಾರದು ಎಂದು ಅವರು ಒತ್ತಾಯಿಸಿದರು.



Join Whatsapp