ಯುವಜನರ ಕ್ರೀಡಾ ಪ್ರತಿಭೆ ಗುರುತಿಸಿ, ಪ್ರೋತ್ಸಾಹಿಸಿ: ಸಚಿವ ಡಾ. ನಾರಾಯಣ ಗೌಡ

Prasthutha|

ಮಂಗಳೂರು : ಯುವಜನರಲ್ಲಿ ಇರುವ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಪ್ರೋತ್ಸಾಹಿಸುವುದರೊಂದಿಗೆ ಅವರಲ್ಲಿರುವ ಪ್ರತಿಭೆಯನ್ನು ಹೊರ ಹೊಮ್ಮಿಸುವ ಕಾರ್ಯವನ್ನು ಮಾಡಬೇಕು ಎಂದು ಯುವ ಸಬಲೀಕರಣ ಮತ್ತು ಕ್ರೀಡೆ ಹಾಗೂ ಯೋಜನೆ ಕಾರ್ಯಕ್ರಮ, ಸಂಯೋಜನೆ ಮತ್ತು ಸಾಂಖ್ಯಿಕ ಸಚಿವರಾದ ಡಾ. ನಾರಾಯಣ ಗೌಡ ತಿಳಿಸಿದರು.

- Advertisement -

ಅವರು ನಗರದ ಓಷಿಯನ್ ಪರ್ಲ್ ಹೊಟೇಲ್‍ನಲ್ಲಿ ನಡೆದ, ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಂಜೂರಾದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂ ಕ್ರೀಡಾ ಇಲಾಖೆಯ ಕ್ರೀಡಾ ಕಿಟ್ ವಿತರಣೆ ಮಾಡಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ತೆರೆಮರೆಯಲ್ಲಿ ಅಡಗಿರುವ ಕ್ರೀಡಾ ಪ್ರತಿಭೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ಮಹತ್ವಾಕಾಂಕ್ಷೆ ಯೋಜನಗಳಲ್ಲಿ ಒಂದಾದ ಖೇಲೋ ಇಂಡಿಯಾ ಯೋಜನೆಗೆ ಹೆಚ್ಚು ಒತ್ತುಕೊಡುವುದು ನಮ್ಮೆಲ್ಲರ ಜವಬ್ದಾರಿಯಾಗಿದೆ ಎಂದರು.

- Advertisement -

ಸ್ಪರ್ಧಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ವಿಶ್ವಕ್ಕೆ ತೋರಿಸಲು ಖೇಲೋ ಇಂಡಿಯಾ ಗೇಮ್‍ಒಂದು ಉತ್ತಮ ವೇದಿಕೆಯಾಗಿದೆ.ಇದರ ಸದ್ಬಳಕೆ ಮಾಡಿಕೊಳ್ಳಬೇಕು ಎಂದ ಅವರು, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದ ಯುವಕರ ಪ್ರತಿಭೆಯನ್ನು ಹೊರತರುವ ಕೆಲಸ ಮಾಡಬೇಕು. ಕೇವಲ ತಾಲೂಕು ಮಟ್ಟದಲ್ಲಿ ಅಲ್ಲದೇ, ಗ್ರಾಮೀಣ ಭಾಗದ ಯುವಕರಿಗೆ ಶಕ್ತಿ ತುಂಬುವ ಕಾರ್ಯವಾಗ ಬೇಕು ಎಂದರು.

ಕರಾವಳಿ ಅಭಿವೃದ್ಧಿ ವ್ಯಾಪ್ತಿಯಲ್ಲಿ ಬರುವ 3 ಜಿಲ್ಲೆಯ 9 ತಾಲೂಕುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸ್ಥಳೀಯ ಸಮಸ್ಯೆಗಳಿಗನುಗುಣವಾಗಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಶಾಸಕ ವೇದವ್ಯಾಸ್ ಮಾತನಾಡಿ, ಕರಾವಳಿ ಭಾಗದಲ್ಲಿ ಹಲವಾರು ಯುವಕರು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಿದ ಪ್ರತಿಭೆಗಳು ಇದ್ದಾರೆ.ಅವರನ್ನು ಗುರುತಿಸಿ ಅವರಿಗೆ ಸಮಾಜದಲ್ಲಿ ಭವಿಷ್ಯ ರೂಪಿಸಿಕೊಳ್ಳಲು ಉದ್ಯೊಗ ಅವಕಾಶ ನೀಡಬೇಕು ಎಂದ ಅವರು, ಅಂತಹ ಯುವಕರಿಗೆ ಕಡ್ಡಾಯವಾಗಿ ಉದ್ಯೋಗ ಕಲ್ಪಿಸುವಂತಹ ಯೋಜನೆಯನ್ನು ಕರ್ನಾಟಕ ಸರ್ಕಾರ ಮಾಡಬೇಕು ಎಂದರು.

ಕಾರ್ಯಕ್ರಮದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷರಾದ ಮಟ್ಟಾರ್‍ ರತ್ನಾಕರ ಹೆಗ್ಗಡೆ, ಮಂಗಳೂರು ನಗರ ದಕ್ಷಿಣ ಶಾಸಕರಾದ ವೇದವ್ಯಾಸ್‍ ಕಾಮತ್, ಮಹಾನಗರ ಪಾಲಿಕೆಯ ಮೇಯರ್ ದಿವಾಕರ್ ಪಾಂಡೇಶ್ವರ, ಮಹಾನಗರ ಪಾಲಿಕೆಯ ಉಪಮೇಯರ್ ವೇದಾವತಿ, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ, ಕೆ.ಎಫ್.ಡಿ.ಸಿ ಅಧ್ಯಕ್ಷ ನಿತಿನ್‍ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Join Whatsapp