ಮತದಾರರ ಚೀಟಿಗೆ ಆಧಾರ್ ಜೋಡಿಸಲು ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕರೆ

Prasthutha|

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮತದಾರರು ತಮ್ಮ ಚುನಾವಣಾ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಕರೆ ನೀಡಿದ್ದಾರೆ. 

- Advertisement -

  ಅವರು ಅಗಸ್ಟ್ 1 ರಂದು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಚುನಾವಣಾ ಸುಧಾರಣೆಗಳು ಮತ್ತು ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಜೋಡಣೆ ಕುರಿತಂತೆ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

      ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಗುರುತಿನ ಚೀಟಿಗೆ ಕಡ್ಡಾಯವಾಗಿ ಆಧಾರ್ ಕಾರ್ಡ್ ಅನ್ನು ಜೋಡಣೆ ಮಾಡಬೇಕಿದೆ, ಅದರಂತೆ ಎಪಿಕ್ ಕಾರ್ಡ್ ಹೊಂದಿರುವ ಮತದಾರರು ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಗುರುತಿನ ಚೀಟಿಗೆ ಲಿಂಕ್ ಮಾಡಬೇಕು, ಪ್ರತಿಯೊಬ್ಬ ಮತದಾರರು ನಮೂನೆ 6-ಬಿಯಲ್ಲಿ ವೆಬ್‍ಸೈಟ್:www.nvsp.inಮೂಲಕ ಅಥವಾ ವೋಟರ್ ಹೆಲ್ಪ್ ಲೈನ್ ಆ್ಯಪ್, ಗರುಡ ಆ್ಯಪ್ ಹಾಗೂ ಬೂತ್ ಮಟ್ಟದ ಅಧಿಕಾರಿಗೆ ಆಧಾರ್ ಸಂಖ್ಯೆ ನೀಡಿ ಚುನಾವಣಾ ಗುರುತಿನ ಚೀಟಿಗೆ ಅದನ್ನು ಜೋಡಣೆ ಮಾಡಬಹುದಾಗಿದೆ ಎಂದರು.

- Advertisement -

     ಆದಾರ್ ಕಾರ್ಡ್ ಇಲ್ಲದಿದ್ದರೆ ನರೇಗಾ ಉದ್ಯೋಗ ಕಾರ್ಡ್, ಭಾವಚಿತ್ರ ಹೊಂದಿದ ಬ್ಯಾಂಕ್ ಅಥವಾ ಪೋಸ್ಟ್ ಆಫೀಸ್‍ ನ ಪಾಸ್ ಪುಸ್ತಕ, ಪ್ರಧಾನ ಮಂತ್ರಿ ಆರೋಗ್ಯ ವಿಮೆಯ ಸ್ಮಾರ್ಟ್ ಕಾರ್ಡ್, ವಾಹನ ಪರವಾನಿಗೆ, ಪಾನ್ ಕಾರ್ಡ್, ಆರ್.ಜಿ.ಐ ಹಾಗೂ ಎನ್.ಪಿ.ಆರ್‍ನ ಸ್ಮಾರ್ಟ್ ಕಾರ್ಡ್, ಭಾರತೀಯ ಪಾಸ್‍ಪೋರ್ಟ್, ಪಿಂಚಣಿ ದಾಖಲಾತಿ, ಸರ್ವಿಸ್ ಗುರುತಿನ ಚೀಟಿ, ಶಾಸಕ ಹಾಗೂ ಸಂಸದರಿಂದ ಪಡೆದ ಅಧೀಕೃತ ಗುರುತಿನ ಚೀಟಿ ಹಾಗೂ ಯು.ಡಿ.ಐ.ಡಿ ಕಾರ್ಡ್ ದಾಖಲೆಯನ್ನು ನೀಡಿ ಮತದಾರರ ಗುರುತಿನ ಚೀಟಿಗೆ ಲಿಂಕ್ ಮಾಡಬಹುದು ಎಂದು ಅವರು ಹೇಳಿದರು.

    ಅಪರ ಜಿಲ್ಲಾಧಿಕಾರಿ ಡಾ.ಕೃಷ್ಣಮೂರ್ತಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಆನಂದ್, ಚುನಾವಣಾ ತಹಶೀಲ್ದಾರ್ ದಯಾನಂದ್, ಚುನಾವಣಾ ಶಾಖೆಯ ಅಧೀಕ್ಷಕ ಜೊಶ್ಲೀನ್ ಸ್ಟೀಫನ್ ಹಾಗೂ ರಾಜಕೀಯ ಪಕ್ಷದ ಪ್ರತಿನಿಧಿಗಳು ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.



Join Whatsapp