ಕೇವಲ ಹತ್ತು ವರ್ಷಗಳಲ್ಲಿ ಆಮ್ ಆದ್ಮಿ ಪಾರ್ಟಿ  ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದೆ: ಪೃಥ್ವಿ ರೆಡ್ಡಿ

Prasthutha|

ಬೆಂಗಳೂರು: ಕೇವಲ ಹತ್ತು ವರ್ಷಗಳಲ್ಲಿ ಆಮ್ ಆದ್ಮಿ ಪಾರ್ಟಿಯು ದೇಶದ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದು, ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಕರ್ನಾಟಕ ಜನತೆ ಚುನಾವಣೆಗಾಗಿ ಕಾಯುತ್ತಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹೇಳಿದರು.

- Advertisement -

ಆಮ್ ಆದ್ಮಿ ಪಾರ್ಟಿಗೆ ರಾಷ್ಟ್ರೀಯ ಸ್ಥಾನಮಾನ ಸಿಗುತ್ತಿರುವ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪೃಥ್ವಿ ರೆಡ್ಡಿ, “ಎಂಸಿಡಿ, ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ಚುನಾವಣೆಗಳ ಫಲಿತಾಂಶವು ಮೂರು ಸಂದೇಶಗಳು ನೀಡಿವೆ. ಮೊದಲನೆಯದು, ಬಿಜೆಪಿಯನ್ನು ಸೋಲಿಸಲು ಆಮ್ ಆದ್ಮಿ ಪಾರ್ಟಿಗೆ ಸಾಧ್ಯವಿದೆ. ಎರಡನೆಯದು, ಕೇವಲ ಗುಜರಾತ್’ನಲ್ಲಿ ಮಾತ್ರ ಪ್ರಧಾನಿ ಮೋದಿಯವರ ಪ್ರಭಾವವಿದೆ. ಮೂರನೆಯದು, ದೆಹಲಿ ಹಾಗೂ ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲೂ ಮೋದಿಯವರು ಬಿಜೆಪಿಯನ್ನು ಗೆಲ್ಲಿಸಲು ಸಾಧ್ಯವಿಲ್ಲ. ಬಿಜೆಪಿಯ ಭದ್ರಕೋಟೆ ಎಂದು ಕರೆಯಲ್ಪಡುವ ಗುಜರಾತ್’ನಲ್ಲೂ 12% ಮತಗಳನ್ನು ಪಡೆಯುವುದರಲ್ಲಿ ಎಎಪಿ ಯಶಸ್ವಿಯಾಗಿದೆ” ಎಂದು ಹೇಳಿದರು.

“2012ರಲ್ಲಿ ʻಭ್ರಷ್ಟಾಚಾರ ವಿರೋಧಿ ಭಾರತʼ ಹೋರಾಟದ ಮುಂದಿನ ಭಾಗವಾಗಿ ಆಮ್ ಆದ್ಮಿ ಪಾರ್ಟಿ ಹುಟ್ಟಿಕೊಂಡಿತು. ಅಂದು ಸುಮಾರು ಹತ್ತು ಕಾರ್ಯಕರ್ತರಿಂದ ಆರಂಭವಾದ ಪಕ್ಷವು ದೆಹಲಿಯಲ್ಲಿ ಭದ್ರವಾಗಿ ಬೇರೂರಿ, ಈಗ ದೇಶದೆಲ್ಲೆಡೆ ಹೆಮ್ಮರವಾಗಿ ಬೆಳೆಯುತ್ತಿದೆ. ಚುನಾವಣಾ ಆಯೋಗದ ಮಾನದಂಡಕ್ಕೆ ಅನುಗುಣವಾಗಿ ನಾಲ್ಕು ರಾಜ್ಯಗಳಲ್ಲಿ ಸಾಧನೆ ತೋರುವ ಮೂಲಕ ರಾಷ್ಟ್ರೀಯ ಪಕ್ಷ ಎಂಬ ಮಾನ್ಯತೆ ಪಡೆಯಲು ಅರ್ಹವಾಗಿದೆ. ಎಎಪಿಗೆ ದೇಶಾದ್ಯಂತ ಸಿಗುತ್ತಿರುವ ಯಶಸ್ಸಿಗೆ ನಮ್ಮ ನಾಯಕರು ಮತ್ತು ಕಾರ್ಯಕರ್ತರ ಅವಿರತ ಪರಿಶ್ರಮ ಹಾಗೂ ಪಕ್ಷದ ತತ್ತ್ವ ಸಿದ್ಧಾಂತಗಳು ಕಾರಣ” ಎಂದು ಪೃಥ್ವಿ ರೆಡ್ಡಿ ಹೇಳಿದರು.

- Advertisement -

ಆಮ್ ಆದ್ಮಿ ಪಾರ್ಟಿಯ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಮಾತನಾಡಿ, “ಕರ್ನಾಟಕದ ರಾಜಕೀಯದಲ್ಲಿ ಪರ್ಯಾಯ ಶಕ್ತಿಯಾಗಿ ಆಮ್ ಆದ್ಮಿ ಪಾರ್ಟಿ ಎದ್ದು ನಿಲ್ಲಲಿದೆ. ರಾಜ್ಯದ ವಿವಿಧ ಭಾಗಗಳಿಗೆ ಪ್ರವಾಸ ಹೋದ ಸಂದರ್ಭದಲ್ಲಿ ಜನಸಾಮಾನ್ಯರ ನಾಡಿಮಿಡಿತ ತಿಳಿಯಲು ನಾನು ಪ್ರಯತ್ನಿಸಿದ್ದು, ಆಗ ಈ ಅಂಶ ಸ್ಪಷ್ಟವಾಗಿ ಗಮನಕ್ಕೆ ಬಂದಿದೆ. ಮುಂಬರುವ ಬಿಬಿಎಂಪಿ ಹಾಗೂ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ ಪಕ್ಷವು ಬಹುಮತದೊಂದಿಗೆ ಅಧಿಕಾರಕ್ಕೆ ಬರುವ ಸಾಧ್ಯತೆ ದಟ್ಟವಾಗಿದೆ. ಮುಂದಿನ ದಿನಗಳಲ್ಲಿ ಪಕ್ಷದ ಸಂಘಟನೆಯು ಇನ್ನಷ್ಟು ಬಲಗೊಳ್ಳಲಿದೆ” ಎಂದು ಹೇಳಿದರು.

ಆಮ್ ಆದ್ಮಿ ಪಾರ್ಟಿಯ ರಾಜ್ಯ ಜನಸಂಪರ್ಕ ಹಾಗೂ ಪ್ರಚಾರ ಸಮಿತಿ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ, “ಕಾಂಗ್ರೆಸ್ ಪಕ್ಷವನ್ನು ಹತ್ತಿಕ್ಕಲು ಬಿಜೆಪಿಯು ಎಎಪಿಯನ್ನು ಬಳಸಿಕೊಳ್ಳುತ್ತಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆ ಮೂರ್ಖತನದಿಂದ ಕೂಡಿದೆ. ಚುನಾವಣೆ ಎಂಬ ಯುದ್ಧಕ್ಕೂ ಮುನ್ನವೇ ಶಸ್ತ್ರತ್ಯಾಗ ಮಾಡಿ ಸೋಲೊಪ್ಪಿಕೊಳ್ಳುವ ಕಾಂಗ್ರೆಸ್‌ಗೆ ಎಎಪಿ ಬಗ್ಗೆ ಮಾತಾಡುವ ನೈತಿಕತೆಯಿಲ್ಲ. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಅತ್ಯಂತ ಭ್ರಷ್ಟ ಪಕ್ಷಗಳಾಗಿದ್ದು, ಇವೆರಡರ ದುರಾಡಳಿತದಿಂದ ಬೇಸತ್ತಿರುವವರು ಹಾಗೂ ದೇಶದ ರಾಜಕೀಯದಲ್ಲಿ ಬದಲಾವಣೆ ತರಬೇಕೆಂದು ಬಯಸುತ್ತಿರುವವರು ಆಮ್ ಆದ್ಮಿ ಪಾರ್ಟಿಯನ್ನು ಬೆಂಬಲಿಸುತ್ತಿದ್ದಾರೆ. ಎಲ್ಲ ಭ್ರಷ್ಟ ಪಕ್ಷಗಳಿಂದ ಆಮ್ ಆದ್ಮಿ ಪಾರ್ಟಿ ಅಂತರ ಕಾಯ್ದುಕೊಂಡು ಮುನ್ನಡೆಯುತ್ತಿದೆ” ಎಂದು ಹೇಳಿದರು.

ಎಎಪಿ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ, ಪಕ್ಷದ ಬೆಂಗಳೂರು ಅಧ್ಯಕ್ಷ ಮೋಹನ್ ದಾಸರಿ, ಹಿರಿಯ ವಕೀಲರಾದ ಕೆ.ದಿವಾಕರ್ ಭಾಗವಹಿಸಿದ್ದರು.

Join Whatsapp