ಪೊಲೀಸರ ಎದುರೇ ಬಿಜೆಪಿ ನಾಯಕನ ಕೊಲೆ ಆರೋಪಿಯ ಗುಂಡಿಕ್ಕಿ ಹತ್ಯೆ!

Prasthutha|

ಜೈಪುರ್: ಬಿಜೆಪಿ ನಾಯಕನನ್ನು ಹತ್ಯೆಗೈದ ಆರೋಪಿ ಕುಲದೀಪ್ ಜಘೀನಾನನ್ನು ಪೊಲೀಸ್ ಬಸ್ಸಿನೊಳಗೆ ನುಗ್ಗಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

- Advertisement -

ಬುಧವಾರ ನ್ಯಾಯಾಲಯದ ವಿಚಾರಣೆಗಾಗಿ ಬಸ್‍ನಲ್ಲಿ ಆರೋಪಿಯನ್ನು ಕರೆದೊಯ್ಯಲಾಗುತ್ತಿತ್ತು. ಈ ವೇಳೆ ರಾಜಸ್ಥಾನದ ಭರತ್‍ಪುರದ ಅಮೋಲಿ ಟೋಲ್ ಪ್ಲಾಜಾ ಬಳಿ ಕಾರು ಮತ್ತು ಎರಡು ಬೈಕ್‍ಗಳಲ್ಲಿ ಬಂದ 12 ಜನರ ಗುಂಪು ಕೊಲೆ ಆರೋಪಿಗೆ ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಈ ವೇಳೆ ಜೊತೆಗಿದ್ದ ಇನ್ನೋರ್ವ ಆರೋಪಿಗೂ ಗುಂಡು ತಗುಲಿದೆ. ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಪು ಏಕಾಏಕಿ ಬಸ್‍ನೊಳಗೆ ನುಗ್ಗಿ ಪೊಲೀಸರ ಮೇಲೆ ಖಾರದ ಪುಡಿ ಎರಚಿ ಕುಲದೀಪ್ ಜಘೀನಾ ಮತ್ತು ವಿಜಯಪಾಲ್ ಮೇಲೆ ಗುಂಡಿನ ದಾಳಿ ನಡೆಸಿದೆ.

- Advertisement -

ಇಬ್ಬರು ಕೊಲೆ ಆರೋಪಿಗಳನ್ನು ಭರತ್‍ಪುರದ ಆರ್‍ಬಿಎಂ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಯಿತು. ವೈದ್ಯರು ಜಘೀನಾ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ. ಆದರೆ ವಿಜಯಪಾಲ್ ಚಿಂತಾಜನಕ ಸ್ಥಿತಿಯಲ್ಲಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ. ಸಿಸಿಟಿವಿ ದೃಶ್ಯಾವಳಿಗಳ ಸಹಾಯದಿಂದ ಆರೋಪಿಗಳನ್ನು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 4 ರಂದು ಭರತ್‍ಪುರದಲ್ಲಿ ಭೂ ವಿವಾದಕ್ಕೆ ಸಂಬಂಧಿಸಿದಂತೆ ಕೃಪಾಲ್ ಜಘೀನಾ ಕೊಲೆಯಲ್ಲಿ ಕುಲದೀಪ್ ಜಘೀನಾ ಮತ್ತು ವಿಜಯಪಾಲ್ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ.

Join Whatsapp