ಯುವತಿ ಮೇಲೆ ಆ್ಯಸಿಡ್ ದಾಳಿ; ಫಾಸ್ಟ್ ಟ್ರ್ಯಾಕ್ ಕೋರ್ಟ್ ಸ್ಥಾಪಿಸಿ ಅಪರಾಧಿಗೆ ಉಗ್ರ ಶಿಕ್ಷೆ- ಆರಗ ಜ್ಞಾನೇಂದ್ರ

Prasthutha|

ಬೆಂಗಳೂರು: ಯುವತಿಯ ಮೇಲೆ ಆ್ಯಸಿಡ್ ಎರಚುವಿಕೆಯಂಥ ಅಮಾನುಷ ಕೃತ್ಯ ಎಸಗಿ ಪರಾರಿಯಾಗಿದ್ದ ಅಪರಾಧಿಗೆ ಉಗ್ರ ಶಿಕ್ಷೆ ಯಾಗುವಂತೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯ ಸ್ಥಾಪಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.

- Advertisement -

ಈ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು,  ಯುವತಿಯ ಮೇಲೆ ಅಮಾನುಷವಾಗಿ ಆಸಿಡ್ ದಾಳಿ ನಡೆಸಿ ತಲೆಮರೆಸಿಕೊಂಡು ನೆರೆಯ ತಮಿಳುನಾಡಿಲ್ಲಿ ಅಡಗಿದ್ದ  ಕಿರಾತಕ  ನಾಗೇಶ್ ಎಂಬ ಆರೋಪಿಯನ್ನು ನಮ್ಮ ಪೊಲೀಸರು ಅತ್ಯಂತ ಶ್ರಮ ಹಾಗೂ ದಕ್ಷತೆಯಿಂದ ಬಂಧಿಸಿದ್ದಾರೆ. ಆರೋಪಿಯನ್ನು ಬಂಧಿಸಿ ಹೆಡೆಮುರಿ ಕಟ್ಟುವುದರ ಮೂಲಕ ನಮ್ಮ ಪೊಲೀಸರು, ದೇಶದಲ್ಲಿಯೇ ಅತ್ಯಂತ ದಕ್ಷತೆಯ ಹಾಗೂ ವೃತ್ತಿಪರ ಪಡೆಯೆಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಇದಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

ತಮಿಳುನಾಡು ಪೊಲೀಸರೂ ಹೀನ ಕೃತ್ಯ ನಡೆಸಿದ ಅಪರಾಧಿಯನ್ನು ಬಂಧಿಸುವ ಕಾರ್ಯದಲ್ಲಿ ನಮ್ಮ ಪೊಲೀಸರಿಗೆ ನೆರವಾಗಿದ್ದಾರೆ. ಅವರಿಗೂ ನನ್ನ ಅಭಿನಂದನೆಗಳು. ಆರೋಪಿಗೆ ತಕ್ಕ ಶಿಕ್ಷೆ ಆಗುವ ಮೂಲಕ ಸಂತ್ರಸ್ತ ಮಹಿಳೆಗೆ ಹಾಗೂ ಕುಟುಂಬ ವರ್ಗಕ್ಕೆ ಸ್ವಲ್ಪವಾದರೂ ನೆಮ್ಮದಿ ದೊರಕಿದಂತಾಗುವುದು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಸಂತ್ರಸ್ತ ಮಹಿಳೆ, ಚೇತರಿಸಿಕೊಳ್ಳುತ್ತಿದ್ದು, ಶೀಘ್ರ ಗುಣಮುಖ ವಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದರು.

Join Whatsapp