ಸೌಹಾರ್ದ ಮತ್ತು ಶಾಂತಿಯನ್ನು ಕದಡುತ್ತಿರುವ ಶಕ್ತಿಗಳ ವಿರುದ್ಧ ಫೆ. 7ರಂದು ಮಂಡ್ಯ ಬಂದ್

Prasthutha|

ಮಂಡ್ಯ: ಕ್ಷುಲ್ಲಕ ವಿಚಾರಗಳನ್ನು ಮುಂದಿಟ್ಟುಕೊಂಡು ಮಂಡ್ಯ ಜಿಲ್ಲೆಯ ಸೌಹಾರ್ದ ಪರಂಪರೆಗೆ ಮಸಿ ಬಳಿದು, ಶಾಂತಿ ಮತ್ತು ನೆಮ್ಮದಿಯನ್ನು ಕೆಡಿಸುತ್ತಿರುವ ಶಕ್ತಿಗಳ ವಿರುದ್ಧ ಫೆಬ್ರವರಿ 7 ರಂದು ಮಂಡ್ಯ ಬಂದ್ ಗೆ ಪ್ರಗತಿಪರ ಸಂಘಟನೆಗಳು ಕರೆ ನೀಡಿವೆ.

- Advertisement -

ಮಂಡ್ಯ ಜಿಲ್ಲೆಯನ್ನು ಸೌಹಾರ್ದದ ನೆಲೆಯಾಗಿ ಉಳಿಸಿಕೊಳ್ಳುತ್ತೇವೆ ಎಂಬ ಸಂದೇಶ ಕೊಡಲು ಜಿಲ್ಲೆಯ ಪ್ರಗತಿಪರ ಸಂಘಟನೆಗಳು ತೀರ್ಮಾನಿಸಿದೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿದ ಸಮಾನ ಮನಸ್ಕರ ವೇದಿಕೆ, ಫೆಬ್ರವರಿ 7 ರಂದು ಮಂಡ್ಯ ನಗರವನ್ನು ಸ್ವಯಂಪ್ರೇರಿತ ಬಂದ್ ಮಾಡಲಾಗುವುದು, ರಾಷ್ಟ್ರ ಧ್ವಜವನ್ನು ಹಿಡಿದು ಬೃಹತ್ ಮೆರವಣಿಗೆ ನಡೆಸಿ ಶಾಂತಿ ಮತ್ತು ಸೌಹಾರ್ದ ಕಾಪಾಡಿಕೊಳ್ಳಲು ಜನತೆಯಲ್ಲಿ ಮನವಿ ಮಾಡಿಕೊಳ್ಳಲಾಗುವುದು. ಹಾಗಾಗಿ ಎಲ್ಲಾ ಜಾತ್ಯಾತೀತ, ಶಾಂತಿಪ್ರಿಯ, ಸೌಹಾರ್ದ ಬಯಸುವ ಜನತೆ ಈ ಬಂದ್‌ ಬೆಂಬಲಿಸಬೇಕೆಂದು ಪ್ರಗತಿಪರ ಸಂಘಟನೆಗಳು ಮನವಿ ಮಾಡುತ್ತವೆ.

- Advertisement -

ಕಾನೂನು ಮುರಿಯುವ ಮತ್ತು ಶಾಂತಿ ಕದಡುವ ಶಕ್ತಿಗಳ ಮೇಲೆ ಜಿಲ್ಲಾಡಳಿತ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು. ರಾಷ್ಟ್ರ ಧ್ವಜವನ್ನು ತಾಲಿಬಾನ್ ಧ್ವಜಕ್ಕೆ ಹೋಲಿಸಿದ ವಿಕೃತ ಮನಸ್ಸಿನ ವ್ಯಕ್ತಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ.

ಕುರುಬ ಸಮುದಾಯ ನಡೆಸುತ್ತಿರುವ ವಿದ್ಯಾರ್ಥಿ ನಿಲಯದ ಮೇಲೆ ದಾಳಿ ಮಾಡಿದ ಕೃತ್ಯವನ್ನು ನಾವು ಬಲವಾಗಿ ಖಂಡಿಸುತ್ತೇವೆ. ಒಂದು ಸಮುದಾಯ ನಡೆಸುವ ಹಾಸ್ಟೆಲ್‌ಗೆ ಅಕ್ರಮವಾಗಿ ನುಗ್ಗಿ ಧಾಂದಲೆ ನಡೆಸಿ ಪ್ಲಕ್ಸ್ ಹರಿದು ಹಾಕುವುದು ಪುಂಡಾಟಿಕೆಯ ಮತ್ತು ವಿವಿಧ ಸಮುದಾಯಗಳ ನಡುವೆ ದ್ವೇಷ ಹುಟ್ಟಿಸುವ ಕೆಲಸವಾಗಿದೆ. ಇಂತಹ ಪುಂಡರ ಮೇಲೆ ಪೊಲೀಸ್ ಇಲಾಖೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತೇವೆ.

ರಾಜಕೀಯ ಪಕ್ಷಗಳು ಜವಾಬ್ದಾರಿಯಿಂದ ವರ್ತಿಸಬೇಕು. ಮಂಡ್ಯ ಜಿಲ್ಲೆ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳ ವಿರುದ್ಧ ಬಾಬಾ ಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಅಡಿಯಲ್ಲಿ ಹೋರಾಡಲಿ, ಅದು ಬಿಟ್ಟು ಕ್ಷುಲ್ಲಕ ರಾಜಕಾರಣ ಮಾಡಬಾರದು. ಜನರನ್ನು ಭಾವನಾತ್ಮಕ ವಿಷಯಗಳ ಮೇಲೆ ಕೆರಳಿಸಿ ಬದುಕಿನ ಪ್ರಶ್ನೆಗಳನ್ನು ಮೂಲೆಗೆ ತಳ್ಳುವ ನೀಚ ರಾಜಕಾರಣವನ್ನು ಯಾವುದೇ ಸಂಘಟನೆ ಅಥವಾ ಪಕ್ಷ ಮಾಡಬಾರದೆಂದು ಪ್ರಗತಿಪರ ಸಂಘಟನೆಗಳು ಆಗ್ರಹಿಸುತ್ತವೆ.

ಮಂಡ್ಯ ಜಿಲ್ಲೆಯ ಹಿಂದೂಗಳಿಗೆ ವಿವೇಕಾನಂದರು, ಒಕ್ಕಲಿಗರಿಗೆ ಕುವೆಂಪು, ಶಂಕರೇಗೌಡರು, ವೀರಣ್ಣಗೌಡರು, ಮಾದೇಗೌಡರು ಮಾದರಿಯಾಗಬೇಕೆ ಹೊರತು ಭಾವನೆಗಳಿಗೆ ಬೆಂಕಿ ಹಚ್ಚಿ ಬೇಳೆ ಬೇಯಿಸಿಕೊಳ್ಳುವ ಕೀಚಕರಲ್ಲ, ಹಾಗಾಗಿ ನಾವೆಲ್ಲಾ ವಿವೇಕಾನಂದರ, ಕುವೆಂಪು, ಶಂಕರೇಗೌಡ, ವೀರಣ್ಣಗೌಡ, ಮಾದೇಗೌಡರ ಹಾದಿಯಲ್ಲಿ ಕೈ, ಕೈ ಹಿಡಿದು ನಡೆಯೋಣ ಎಂದು ಜಿಲ್ಲೆಯ ಯುವಜನರಲ್ಲಿ ಮನವಿ ಮಾಡುತ್ತೇವೆ.



Join Whatsapp