ಜನಗಣತಿ-ಜಾತಿ ಗಣತಿ, ಮಣಿಪುರದಂತಹ ವಿಷಯಗಳ ಬಗ್ಗೆ ಅಮಿತ್ ಶಾ ಗಮನಹರಿಸಲಿ: ಮಲ್ಲಿಕಾರ್ಜುನ ಖರ್ಗೆ

Prasthutha|

ನವದೆಹಲಿ: ಜನಗಣತಿ, ಜಾತಿ ಗಣತಿ ಮತ್ತು ಮಣಿಪುರ ಹಿಂಸಾಚಾರದಂತಹ ಗಂಭೀರ ವಿಷಯಗಳ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಗಮನ ಹರಿಸಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

- Advertisement -


ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಖರ್ಗೆ ಅವರು ನೀಡಿರುವ ಹೇಳಿಕೆಯು ಸಂಪೂರ್ಣವಾಗಿ ಅಸಹ್ಯಕರ ಮತ್ತು ಅವಮಾನಕರವಾಗಿದೆ ಎಂದು ಅಮಿತ್ ಶಾ ಅವರು ವಾಗ್ದಾಳಿ ನಡೆಸಿದ್ದ ಬೆನ್ನಲ್ಲೇ ಖರ್ಗೆ ಈ ಹೇಳಿಕೆ ನೀಡಿದ್ದಾರೆ.


ಈ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿರುವ ಖರ್ಗೆ, ‘ಗೃಹ ಸಚಿವ ಅಮಿತ್ ಶಾ ಅವರು ಜನಗಣತಿ, ಜಾತಿ ಗಣತಿ ಮತ್ತು ಮಣಿಪುರದಂತಹ ಗಂಭೀರ ವಿಷಯಗಳ ಬಗ್ಗೆ ಗಮನ ಹರಿಸಬೇಕು. ನಗರದ ಚರಂಡಿಗಳನ್ನು ಸ್ವಚ್ಚಗೊಳಿಸುವ ಮತ್ತು ಸೆಪ್ಟಿಕ್ ಟ್ಯಾಂಕ್ಗಳಲ್ಲಿ ಕೆಲಸ ಮಾಡುವ ಶೇ 92ರಷ್ಟು ಜನರು ಎಸ್ಸಿ, ಎಸ್ಟಿ ಮತ್ತು ಒಬಿಸಿ ಸಮುದಾಯದಿಂದ ಬಂದವರು ಎಂದು ನಿಮ್ಮ ಸರ್ಕಾರದ ಸ್ವಸಮೀಕ್ಷೆಯೇ ತಿಳಿಸಿದೆ’ ಎಂದು ಹೇಳಿದ್ದಾರೆ.

- Advertisement -


‘ಬಿಜೆಪಿ ಜಾತಿ ಗಣತಿಯನ್ನು ವಿರೋಧಿಸುತ್ತದೆ. ಏಕೆಂದರೆ ಎಸ್ಸಿ, ಎಸ್ಟಿ, ಒಬಿಸಿ ಮತ್ತು ಇಡಬ್ಲ್ಯೂಎಸ್ ಹಾಗೂ ಇತರ ಹಿಂದುಳಿದ ವರ್ಗಗಳ ಜನರು ತಮ್ಮ ಜೀವನ ನಿರ್ವಹಣೆಗಾಗಿ ಯಾವ ಕೆಲಸಗಳನ್ನು ಮಾಡುತ್ತಿದ್ದಾರೆ. ಅವರ ಸಾಮಾಜಿಕ ಮತ್ತು ಆರ್ಥಿಕ ಸ್ಥಿತಿಗತಿ ಏನು? ಸರ್ಕಾರಿ ಯೋಜನೆಗಳ ಯಾವ ರೀತಿಯ ಉದ್ದೇಶಿತ ಪ್ರಯೋಜನಗಳನ್ನು ಅವರು ಪಡೆದುಕೊಳ್ಳುತ್ತಿದ್ದಾರೆ ಎಂಬುದು ಅದರಿಂದ ತಿಳಿಯುತ್ತದೆ’ ಎಂದು ಅವರು ತಿಳಿಸಿದ್ದಾರೆ.



Join Whatsapp