ಭ್ರಷ್ಟಾಚಾರ ನಿಗ್ರಹ ದಳದ ಕಚೇರಿಗಳು ಕಲೆಕ್ಷನ್ ಸೆಂಟರ್ ಗಳಾಗಿವೆ: ಎಸಿಬಿ ವಿರುದ್ಧ ಹೈಕೋರ್ಟ್ ಕೆಂಡಾಮಂಡಲ

Prasthutha|

ಬೆಂಗಳೂರು: ಭ್ರಷ್ಟಾಚಾರ ತಡೆಯಲು ರಚನೆಯಾಗಿರುವ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಕಚೇರಿಗಳು ಕಲೆಕ್ಷನ್ ಸೆಂಟರ್ ಗಳಾಗಿದ್ದು, ಸ್ವತಃ ಎಸಿಬಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರೇ (ಎಡಿಜಿಪಿ) ಕಳಂಕಿತ ಅಧಿಕಾರಿಯಾಗಿದ್ದಾರೆ. ದೊಡ್ಡ ದೊಡ್ಡ ಐಎಎಸ್, ಐಪಿಎಸ್ ಅಧಿಕಾರಿಗಳನ್ನು ಹಿಡಿಯೋದು ಬಿಟ್ಟು ಅವರ ಬಾಲಂಗೋಚಿಗಳಾಗಿರುವ ಗುಮಾಸ್ತರನ್ನು ಹಿಡಿದು ನ್ಯಾಯಾಲಯಕ್ಕೆ ಬರಲಾಗುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ಬುಧವಾರ ಮೌಖಿಕವಾಗಿ ಆಕ್ರೋಶ ವ್ಯಕ್ತಪಡಿಸಿದೆ.

- Advertisement -

ಲಂಚ ಪ್ರಕರಣದಲ್ಲಿ ಆರೋಪಿಯಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯ ಉಪ ತಹಸೀಲ್ದಾರ್ ಪಿ.ಎಸ್.ಮಹೇಶ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿ ಎಚ್.ಪಿ.ಸಂದೇಶ್ ಅವರು ಎಸಿಬಿ ವಿರುದ್ಧ ಹರಿಹಾಯ್ದರು. ಅರ್ಜಿದಾರರ ಪರ ವಕೀಲ ಎ.ಎಸ್.ಪೊನ್ನಣ್ಣ ಅವರು ಪ್ರಕರಣದ ವಿವರಣೆ ನೀಡಲು ಮುಂದಾದರು.

ಆಗ ಮಧ್ಯಪ್ರವೇಶಿಸಿದ ಎಸಿಬಿ ಪರ ವಕೀಲರು “ಈ ಪ್ರಕರಣದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ ಮಂಜುನಾಥ್ ಅವರನ್ನೂ ಆರೋಪಿಯನ್ನಾಗಿ ಮಾಡಲಾಗಿದೆ. ಪ್ರಕರಣ ರದ್ದು ಕೋರಿ ಅವರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ. ನಿನ್ನೆಯಷ್ಟೇ (ಮಂಗಳವಾರ) ಅವರ ಅರ್ಜಿ ವಿಚಾರಣೆಗೆ ಬಂದಿತ್ತು. ಆದರೆ, ತನಿಖೆಗೆ ತಡೆ ನೀಡಲು ಹೈಕೋರ್ಟ್ ನ ಮತ್ತೊಂದು ಪೀಠವು ನಿರಾಕರಿಸಿದೆ” ಎಂದು ಪೀಠಕ್ಕೆ ತಿಳಿಸಿದರು.

- Advertisement -

ಇದಕ್ಕೆ ನ್ಯಾಯಮೂರ್ತಿಗಳು,“ಪ್ರಕರಣ ಕುರಿತ ತನಿಖಾ ವರದಿ ಎಲ್ಲಿ? ತನಿಖೆಯ ಮಾಹಿತಿ ನೀಡಬೇಕು. ಎಸಿಬಿ ಏಕೆ ರಚನೆಯಾಗಿದೆ? ಇವತ್ತು ಎಸಿಬಿ ಏನಾಗಿದೆ ನಿಮಗೆ ಗೊತ್ತೆ? ಎಸಿಬಿ ಕಚೇರಿಗಳು ಭ್ರಷ್ಟಾಚಾರದ ದಂಧೆಯ ಕೇಂದ್ರಗಳಾಗಿವೆ. ಸಮಾಜಕ್ಕೆ ಅಂಟಿರುವ ಭ್ರಷ್ಟಾಚಾರ ಎಂಬ ಕ್ಯಾನ್ಸರ್ನಲ್ಲಿ ಮೇಲ್ಮಟ್ಟದ ಅಧಿಕಾರಿಗಳನ್ನು ಆರೋಪಿಗಳನ್ನಾಗಿ ಮಾಡದೇ ಕೆಳ ಹಂತದ ಅಧಿಕಾರಿಗಳನ್ನು ಮಾತ್ರ ಆರೋಪಿಗಳನ್ನಾಗಿ ಮಾಡಲಾಗುತ್ತಿದೆ. ಕೇವಲ ಗುಮಾಸ್ತರ ವಿರುದ್ಧ ಪ್ರಕರಣ ದಾಖಲಿಸುವುದಲ್ಲ. ಭ್ರಷ್ಟಾಚಾರ ನಡೆಸುತ್ತಿರುವ ದೊಡ್ಡ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು” ಎಂದು ಸರ್ಕಾರಿ ವಕೀಲರನ್ನು ತರಾಟೆಗೆ ತೆಗೆದುಕೊಂಡರು.

“ಎಸಿಬಿ ಎಡಿಜಿಪಿಯೇ ಕಳಂಕಿತರಾಗಿದ್ದಾರೆ. ಅವರ ವಿರುದ್ಧದ ಪ್ರಕರಣದಲ್ಲಿ ಮಾಹಿತಿಯನ್ನು ನ್ಯಾಯಾಲಯಕ್ಕೆ ನೀಡಬೇಕು. ಸರ್ಕಾರ ಉದ್ದೇಶಪೂರ್ವಕವಾಗಿ ಕಳಂಕಿತರನ್ನು ಇಲ್ಲಿಗೆ ಹಾಕುತ್ತಿದೆ. ಮಾಜಿ ಮುಖ್ಯ ಕಾರ್ಯದರ್ಶಿ ಅರವಿಂದ ಜಾಧವ್ ಪ್ರಕರಣದಲ್ಲಿ ಎಸಿಬಿ ಏನೆಲ್ಲಾ ಮಾಡಿದೆ ಎಂಬುದು ನ್ಯಾಯಾಲಯಕ್ಕೆ ಗೊತ್ತಿದೆ. ತನಿಖಾಧಿಕಾರಿ ಅಪ್ರಯೋಜಕರಾಗಿದ್ದಾರೆ. ಭ್ರಷ್ಟಾಚಾರದಲ್ಲಿ ತೊಡಗಿರುವ ಅಧಿಕಾರಿಗಳನ್ನು ರಕ್ಷಿಸಬೇಡಿ. ದೊಡ್ಡ ಅಧಿಕಾರಿಗಳನ್ನು ರಕ್ಷಿಸಲಾಗುತ್ತಿದೆ ಎಂಬುದಕ್ಕೆ ಈ ಪ್ರಕರಣವೇ ಉದಾಹರಣೆ. ಕಂದಾಯ ಅಧಿಕಾರಿಗಳ ಬಳಿ ಹೋಗಿ ಅಲ್ಲಿ ಏನೆಲ್ಲಾ ಆಗುತ್ತದೆ ಎಂದು ನಿಮಗೆ ತಿಳಿಯುತ್ತದೆ” ಎಂದು ಪೀಠವು ತೀಕ್ಷ್ಣವಾಗಿ ನುಡಿಯಿತು.

“ಪ್ರಕರಣದಲ್ಲಿ ಮೊದಲ ಆರೋಪಿ ಜಿಲ್ಲಾಧಿಕಾರಿಯ ಆಪ್ತ ಸಹಾಯಕರಾಗಿದ್ದಾರೆ. ಎರಡನೇ ಆರೋಪಿ ಗುತ್ತಿಗೆ ನೌಕರ. ಆದರೆ, ಮೊದಲಿಗೆ ಜಿಲ್ಲಾಧಿಕಾರಿಯನ್ನು ಆರೋಪಿ ಮಾಡಿರಲಿಲ್ಲ. ನ್ಯಾಯಾಲಯವು ಜಿಲ್ಲಾಧಿಕಾರಿಯ ವಿರುದ್ಧದ ದಾಖಲೆಗಳು ಮನಗಂಡು ಅಭಿಪ್ರಾಯ ವ್ಯಕ್ತಪಡಿಸಿದ ನಂತರ ಮೂರನೇ ಆರೋಪಿಯನ್ನಾಗಿ ಮಾಡಲಾಯಿತು. ಇದೀಗ ಔಪಚಾರಿಕ ಕ್ರಮಗಳನ್ನು ಕೈಗೊಳ್ಳಲಾಗಿದೆ. ಎಸಿಬಿಯು ಭ್ರಷ್ಟಾಚಾರವನ್ನು ತಡೆಯುವ ಕೆಲಸ ಮಾಡುತ್ತಿಲ್ಲ” ಎಂದು ಕಟುವಾಗಿ ನುಡಿಯಿತು.

“ಎಷ್ಟು ಭ್ರಷ್ಟಾಚಾರ ಪ್ರಕರಣಗಳಲ್ಲಿ ಎಸಿಬಿ ದಾಳಿ ನಡೆಸಿದೆ? 2016ರಿಂದ ಈವರೆಗೆ ಎಷ್ಟು ಅಧಿಕಾರಿಗಳ ವಿರುದ್ಧ ‘ಬಿʼ ರಿಪೋರ್ಟ್ ಸಲ್ಲಿಸಿದೆ? ಎಂಬ ಬಗ್ಗೆ ವಸ್ತುಸ್ಥಿತಿ ವರದಿ ನೀಡಿ,” ಎಂದು ಎಸಿಬಿ ಪರ ವಕೀಲರಿಗೆ ಸೂಚಿಸಿದ ನ್ಯಾಯಾಲಯವು ವಿಚಾರಣೆಯನ್ನು ಜುಲೈ 4ಕ್ಕೆ ಮುಂದೂಡಿತು.

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲ್ಲೂಕಿನ ಕೂಡ್ಲು ಗ್ರಾಮದ 38 ಗುಂಟೆ ಜಮೀನು ಒಡೆತನಕ್ಕೆ ಸಂಬಂಧಿಸಿದ ವ್ಯಾಜ್ಯದಲ್ಲಿ ಅನುಕೂಲಕರ ಆದೇಶ ನೀಡಲು ಬೇಗೂರು ನಿವಾಸಿ ಅಜಂ ಪಾಷಾ ಎಂಬುವರಿಂದ 5 ಲಕ್ಷ ರೂಪಾಯಿ ಲಂಚ ಪಡೆಯಲಾಗಿದೆ ಎಂಬ ಪ್ರಕರಣದಲ್ಲಿ ಅರ್ಜಿದಾರ ಮಹೇಶ್ ಆರೋಪಿಯಾಗಿದ್ದು, ಅವರನ್ನು ಎಸಿಬಿ ಬಂಧಿಸಿತ್ತು.

(ಕೃಪೆ: ಬಾರ್ ಆಂಡ್ ಬೆಂಚ್)

Join Whatsapp