Home ಟಾಪ್ ಸುದ್ದಿಗಳು ಕೇಂದ್ರದ ವಿರುದ್ಧ ಪ್ರತಿಭಟಿಸಿದ ದಸಂಸ ಕಾರ್ಯಕರ್ತರ ಬಂಧನ

ಕೇಂದ್ರದ ವಿರುದ್ಧ ಪ್ರತಿಭಟಿಸಿದ ದಸಂಸ ಕಾರ್ಯಕರ್ತರ ಬಂಧನ

ಮೈಸೂರು: ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಕರಪತ್ರ ಹಂಚುತ್ತಿದ್ದ ದಲಿತ ಸಂಘರ್ಷ ಸಮಿತಿಯ ಕಾರ್ಯಕರ್ತರನ್ನು ಮೈಸೂರು ಪೊಲೀಸರು ಬಂಧಿಸಿದ ಘಟನೆ ಭಾನುವಾರ ನಡೆದಿದೆ.

ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಶಂಭುಲಿಂಗಸ್ವಾಮಿ ಅವರ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿ ಬಳಿ ಕೇಂದ್ರದ ಆಡಳಿತದ ವಿರುದ್ಧ ಕರಪತ್ರ ಹಂಚಲಾಗುತ್ತಿತ್ತು. ಈ ವೇಳೆ ಅವರನ್ನು ಪೊಲೀಸರು ಬಂಧಿಸಿ, ನಂತರ ಬಿಡುಗಡೆ ಮಾಡಿದರು.

ಮೂರು ಕೃಷಿ ಕಾಯ್ದೆಗಳು, ಗೋ ಸಂರಕ್ಷಣಾ ಕಾಯ್ದೆ, ಬ್ಯಾಂಕ್ ಗಳ ವಿಲೀನದಿಂದ ಉದ್ಯೋಗ ಕುಸಿತ, ವಿದ್ಯುತ್‌ ಖಾಸಗೀಕರಣ, ರಾಷ್ಟ್ರೀಯ ಶಿಕ್ಷಣ ನೀತಿ-2020, ಪೆಟ್ರೋಲ್‌-ಡೀಸೆಲ್‌ ಬೆಲೆ ಏರಿಕೆಯಂತಹ ಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಿದರು.

ಕೇಂದ್ರ ಸರ್ಕಾರ ಜನವಿರೋಧಿ ನೀತಿಗಳನ್ನು ಜಾರಿಗೆ ತರುತ್ತಿದೆ. ಇದರಿಂದ ಕಾರ್ಪೊರೇಟ್‌ ಕುಳಗಳು ಮಾತ್ರ ಬೆಳೆಯುತ್ತಿದ್ದಾರೆ. ಈ ನೀತಿಗಳನ್ನು ಹಿಂದಕ್ಕೆ ಪಡೆಯಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು. ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದರು.

Join Whatsapp
Exit mobile version