ಶಿವಮೊಗ್ಗದಲ್ಲಿ ಮತ್ತೆ ಸಾವರ್ಕರ್ ಫ್ಲೆಕ್ಸ್ ಹಾಕಲು ಯತ್ನ: ಲಘು ಲಾಠಿ ಪ್ರಹಾರ, ನಿಷೇಧಾಜ್ಞೆ ಜಾರಿ

Prasthutha|

ಶಿವಮೊಗ್ಗ: ಶಿವಮೊಗ್ಗದ ಅಮೀರ್ ಅಹ್ಮದ್ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಲು ಸಂಘಪರಿವಾರದ ಕಾರ್ಯಕರ್ತರು ಯತ್ನಿಸಿದ ಪರಿಣಾಮ ಶಿವಮೊಗ್ಗದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಗುಂಪು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದಾರೆ. ನಗರದಲ್ಲಿ ಎರಡು ದಿನಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

- Advertisement -

ಅಮೀರ್ ಅಹ್ಮದ್ ವೃತ್ತದಲ್ಲಿ ಸಾವರ್ಕರ್ ಫೋಟೋವನ್ನು ಸಂಘಪರಿವಾರ ಕಾರ್ಯಕರ್ತರು ಹಾಕಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಯುವಕರ ಗುಂಪೊಂದು ಅದನ್ನು ತೆರವುಗೊಳಿಸಿದೆ. ಈ ವೇಳೆ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ತಕ್ಷಣ ಪೊಲೀಸರು ಮಧ್ಯಪ್ರವೇಶಿಸಿ ಲಘುಲಾಠಿ ಪ್ರಹಾರ ನಡೆಸಿ ಎಲ್ಲರನ್ನೂ ಚದುರಿಸಿದ್ದಾರೆ.

ಫ್ಲೆಕ್ಸ್ ತೆರವುಗೊಳಿಸಿದ್ದನ್ನು ಖಂಡಿಸಿ ಸಂಘಪರಿವಾರದ ಕಾರ್ಯಕರ್ತರು ಪ್ರತಿಭಟನೆಗೆ ಮುಂದಾದರು. ಈ ವೇಳೆ ಮತ್ತೊಂದು ಗುಂಪು ಆಕ್ಷೇಪ ವ್ಯಕ್ತಪಡಿಸಿತು. ಎರಡೂ ಗುಂಪುಗಳು ಪರಸ್ಪರ ಘೋಷಣೆ ಕೂಗಿದವು. ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಎರಡೂ ಗುಂಪುಗಳನ್ನು ಚದುರಿಸಿದರು.

- Advertisement -

ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು , ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮೀ ಪ್ರಸಾದ್ ಭೇಟಿ ನೀಡಿದ್ದು, ಮುಂಜಾಗೃತಾ ಕ್ರಮವಾಗಿ ನಗರದಲ್ಲಿ ಇಂದು ಮತ್ತು ನಾಳೆ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.

Join Whatsapp