ಸುವರ್ಣಸೌಧಕ್ಕೆ ಮಾಧ್ಯಮಕ್ಕೆ ನಿರ್ಬಂಧ ಸಂವಿಧಾನದ ಒಂದು ಕಾಲು ಮುರಿಯುವ ಪ್ರಯತ್ನ: ಕುಮಾರಸ್ವಾಮಿ

Prasthutha|

ಬೆಳಗಾವಿ: ವಿಧಾನ ಕಲಾಪ ವರದಿ ಮಾಡಲು ಬಂದ ಮಾಧ್ಯಮಗಳಿಗೆ ಸುವರ್ಣಸೌಧ ಪ್ರವೇಶಕ್ಕೆ ನಿರ್ಬಂಧ ಹೇರಿದ ಕ್ರಮವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕಟುವಾಗಿ ಟೀಕಿಸಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎನ್ನುತ್ತಿರುವವರು ಸಂವಿಧಾನದ ಒಂದು ಕಾಲನ್ನೇ ಮುರಿಯುತ್ತಿದ್ದಾರೆಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಸುವರ್ಣಸೌಧಕ್ಕೆ ಮಾಧ್ಯಮಗಳನ್ನು ನಿರ್ಬಂಧ ಮಾಡಿರುವ ಕ್ರಮ ಅನೇಕ ಅನುಮಾನಗಳನ್ನು ಹುಟ್ಟುಹಾಕಿದೆ. ಈಗಾಗಲೇ ಜನರ ಆಕ್ರೋಶಕ್ಕೆ ತುತ್ತಾಗಿರುವ ಬಿಜೆಪಿ ಸರಕಾರ ನಾಡಿನ ಸಮಸ್ಯೆಗಳನ್ನು ʼವಿಷಯಾಂತರʼ ಮಾಡಲು ʼಮತಾಂತರʼ ಗುಮ್ಮವನ್ನು ತಂದು ನಿಲ್ಲಿಸಿದೆ.

- Advertisement -

ನಾಡಿನ ಜನರು ಮತ್ತು ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ರಾಜಕೀಯದ ಲಾಭದ ದುರಾಸೆಗೆ ರಾಜ್ಯದ ಸಾಮರಸ್ಯಕ್ಕೆ ಬೆಂಕಿ ಇಡುವ ಮತಾಂತರ ನಿಷೇಧ ಮಸೂದೆಯ ನಿಜಬಣ್ಣ ಎಲ್ಲಿ ಬಯಲಾಗುತ್ತದೋ ಎಂದು ಅಂಜಿ ಮಾಧ್ಯಮಗಳಿಗೆ ನಿರ್ಬಂಧ ಹೇರಲಾಗಿದೆ ಎಂಬ ಸಂಶಯ ಇದೆ.

ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಮಾಧ್ಯಮ ರಂಗವು ಸಂವಿಧಾನದ ಒಂದು ಅಂಗ. ಈಗ ಮಾಧ್ಯಮ ಪ್ರವೇಶಕ್ಕೆ ನಿರ್ಬಂಧ ಹೇರುವ ಮೂಲಕ ʼಸಂವಿಧಾನದ ಒಂದು ಕಾಲು ಮುರಿಯುವ ಪ್ರಯತ್ನʼ ಮಾಡಲಾಗುತ್ತಿದೆ.ಇದು ಸಂವಿಧಾನವನ್ನೇ ಬದಲಾವಣೆ ಮಾಡುತ್ತೇವೆ ಎನ್ನುವವರ ದರ್ಪದ ಹೆಜ್ಜೆಯಷ್ಟೇ. ಅವರ ದುರುದ್ದೇಶ ಸ್ಪಷ್ಟ.

ಈ ಮಧ್ಯೆ ಮಾನ್ಯ ಸ್ಪೀಕರ್ ಅವರು ಮಾಧ್ಯಮ ನಿರ್ಬಂಧದ ಬಗ್ಗೆ ಗೊತ್ತಿಲ್ಲ ಎಂದಿದ್ದಾರೆ. ಹಾಗಾದರೆ, ನಿರ್ಬಂಧ ಹೇರಿದವರು ಯಾರು? ಸ್ಪೀಕರ್ ಅವರಿಗೆ ಗೊತ್ತಿಲ್ಲದೆ ನಿರ್ಬಂಧದ ಸಂದೇಶ ಮಾಧ್ಯಮಗಳಿಗೆ ಕೊಟ್ಟವರು ಯಾರು? ಈ ಬಗ್ಗೆ ಜನರಿಗೆ ಸತ್ಯಾಂಶ ಗೊತ್ತಾಗಬೇಕಿದೆ ಎಂದು ಅವರು ಹೇಳಿದ್ದಾರೆ.

Join Whatsapp