ಸ್ಕಾರ್ಫ್ ನಿಷೇಧ : ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಭಂಡಾರ್ಕಾರ್ಸ್ ಕಾಲೇಜು ವಿದ್ಯಾರ್ಥಿನಿಯರು

Prasthutha|

ಕುಂದಾಪುರ :  ಮುಸ್ಲಿಮ್ ಹೆಣ್ಣು ಮಕ್ಕಳು ಕಾಲೇಜಿಗೆ  ಧರಿಸಿಕೊಂಡು ಬರುತ್ತಿದ್ದ ಸ್ಕಾರ್ಫನ್ನು ತಡೆಯಲು ಕೆಲ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕಿಕೊಂಡು ಬಂದು ಸೃಷ್ಟಿಯಾಗಿದ್ದ ವಿವಾದ ರಾಜ್ಯದಾದ್ಯಂತ ತಾರಕಕ್ಕೇರಿರುವ ಮಧ್ಯೆಯೇ ಕುಂದಾಪುರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿಯ ವಿರುದ್ಧ ಭಂಡಾರ್ಕಾರ್ಸ್ ವಿದ್ಯಾರ್ಥಿನಿಯರು  ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ನಿರ್ದೇಶನದ ಮೇರೆಗೆ ತಮಗೆ ಕಾಲೇಜಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಆಕ್ಷೇಪಿಸಿ ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ತಮ್ಮ ತಾಯಂದಿರ ಮೂಲಕ ಸೋಮವಾರ ಕರ್ನಾಟಕ ಹೈಕೋರ್ಟ್‌ಗೆ ಮನವಿ ಸಲ್ಲಿಸಿದ್ದಾರೆ.

- Advertisement -

ಭಂದಾರ್ಕಾರ್ಸ್ ಕಾಲೇಜಿನ ಮೂರನೇ ಬಿಬಿಎ ವಿದ್ಯಾರ್ಥಿ ಸುಹಾ ಮೌಲಾನಾ ಅವರು ತಮ್ಮ ತಾಯಿ ಬೀಬಿ ಸಾರಾ ಮತ್ತು ಮೊದಲ ವರ್ಷದ  ಬಿಬಿಎ ವಿದ್ಯಾರ್ಥಿನಿ ಐಶಾ ಅಲೀಫಾ ಕೌಸರ್‌ ಅವರು ತಮ್ಮ ತಾಯಿ ರಹಮತ್‌ ಅವರ ಮೂಲಕ ಮನವಿ ಸಲ್ಲಿಸಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌, ಭಂಡಾರ್ಕಾರ್ಸ್‌ ಕಲಾ ಮತ್ತು ವಿಜ್ಞಾನ ಕಾಲೇಜಿನ ಪರವಾಗಿ ಪ್ರಾಂಶುಪಾಲರು, ಶಾಸಕ ಶ್ರೀನಿವಾಸ ಶೆಟ್ಟಿ ಅವರನ್ನು ಪ್ರತಿವಾದಿಗಳನ್ನಾಗಿಸಲಾಗಿದೆ.

ವಿದ್ಯಾರ್ಥಿನಿಯರು ಸಲ್ಲಿಸಿರುವ ಮನವಿಯಲ್ಲಿನ ಅಂಶಗಳು : ಯಾವುದೇ ಷರತ್ತು ಮತ್ತು ನಿರ್ಬಂಧ ವಿಧಿಸದೇ ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಪ್ರವೇಶ ಮಾಡಲು ಭಂಡಾರ್ಕಾರ್ಸ್‌ ಕಲಾ ಮತ್ತು ವಿಜ್ಞಾನ ಕಾಲೇಜಿಗೆ ನಿರ್ದೇಶನ ನೀಡಲು ಮಂಗಳೂರು ವಿಶ್ವವಿದ್ಯಾಲಯದ ರಿಜಿಸ್ಟ್ರಾರ್‌ಗೆ ಆದೇಶಿಸಬೇಕು.

- Advertisement -

ಕಾನೂನಿನ ಯಾವ ನಿಬಂಧನೆಯಡಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಕಾಲೇಜಿನ ಆಡಳಿತದಲ್ಲಿ ಮಧ್ಯಪ್ರವೇಶಿಸಿದ್ದಾರೆ ಎನ್ನುವುದಲ್ಲದೆ, ಅಲ್ಲಿ ತಮ್ಮ ರಾಜಕೀಯ ಅಜೆಂಡಾವನ್ನು ಪ್ರಚಾರ ಮಾಡುತ್ತಿದ್ದಾರೆ ಎಂಬುದನ್ನು ಕೋರ್ಟ್ ಪ್ರಶ್ನಿಸಿ ಆದೇಶಿಸಬೇಕು.

ಪ್ರಕರಣಕ್ಕೆ ಸಂಬಂಧಿಸಿದ ವಾಸ್ತವಾಂಶಗಳು ಹಾಗೂ ಸನ್ನಿವೇಶದ ಹಿನ್ನೆಲೆಯಲ್ಲಿ ನ್ಯಾಯದಾನ ಹಾಗೂ ಅಂತಃಸಾಕ್ಷಿಯನ್ನು ಎತ್ತಿಹಿಡಿಯುವ ಯಾವುದೇ ಪರಿಹಾರವನ್ನು ನೀಡುವಂತೆ ಕೋರಲಾಗಿದೆ.

ಅಲ್ಲದೆ ಮಧ್ಯಂತರ ಪರಿಹಾರವಾಗಿ ಅರ್ಜಿದಾರರಿಗೆ ಯಾವುದೇ ಪಕ್ಷಪಾತ, ತಾರತಮ್ಯ ತೋರದೆ ಶಿರವಸ್ತ್ರ ಧರಿಸಿ ತರಗತಿಗಳಿಗೆ ಪ್ರವೇಶಿಸಲು ಭಂಡಾರ್ಕಾರ್ಸ್‌ ಕಾಲೇಜಿಗೆ ಮಂಗಳೂರು ವಿವಿಯ ರಿಜಿಸ್ಟ್ರಾರ್‌ ಅವರು ಸೂಚಿಸುವಂತೆ ನ್ಯಾಯಾಲಯವು ನಿರ್ದೇಶಿಸಬೇಕು. ನ್ಯಾಯ ಮತ್ತು ಸಮಾನತೆಯ ದ್ಯೋತಕವಾಗಿ ಶೈಕ್ಷಣಿಕ ಸಿಬ್ಬಂದಿಯ ತಾರತಮ್ಯದಿಂದಾಗಿ ಅರ್ಜಿದಾರರು ಈ ಶೈಕ್ಷಣಿಕ ವರ್ಷದಲ್ಲಿ ತರಗತಿಯಿಂದ ಹೊರಗುಳಿದಿರುವ ದಿನಗಳಿಗೆ ಅಥವಾ ಮನವಿ ಇತ್ಯರ್ಥವಾಗುವವರೆಗೆ ಹಾಜರಾತಿ ನೀಡಬೇಕು ಎಂದು ಕೋರಲಾಗಿದೆ.

ಕಾಲೇಜಿಗೆ ಪ್ರವೇಶ ಪಡೆದಾಗಿನಿಂದಲೂ ಯಾವುದೇ ವಿವಾದ ಇರಲಿಲ್ಲ. ಫೆಬ್ರವರಿ 3ರಂದು ಏಕಾಏಕಿ ಪ್ರಾಂಶುಪಾಲರು ಮತ್ತು ಸಿಬ್ಬಂದಿಯು ಹಿಬಾಜ್‌ ಧರಿಸಿ ಕಾಲೇಜಿಗೆ ಪ್ರವೇಶ ಮಾಡಲಾಗದು. ಈ ಸಂಬಂಧ ಸರ್ಕಾರ ಆದೇಶವಿದೆ ಎಂದು ನಮಗೆ ಕಾಲೇಜಿಗೆ ಪ್ರವೇಶಿಸಲು ನಿರ್ಬಂಧ ವಿಧಿಸಿದ್ದಾರೆ.

ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ವಿದ್ಯಾರ್ಥಿಗಳ ಪೋಷಕರು ಭೇಟಿ ಮಾಡಿ ಪ್ರಶ್ನಿಸಿದಾಗ ಶಾಸಕ ಶ್ರೀನಿವಾಸ ಶೆಟ್ಟಿ ಅವರ ನಿರ್ದೇಶನದ ಮೇರೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪ್ರಾಂಶುಪಾಲರು ಹೇಳಿದ್ದಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ.

Join Whatsapp