Home ಟಾಪ್ ಸುದ್ದಿಗಳು ಆಝಾನ್ ವಿಚಾರದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಜಗಳ ಹಚ್ಚುವ ಕೆಲಸ ಮಾಡುತ್ತಿದೆ: ಡಿ.ಕೆ.ಶಿವಕುಮಾರ್

ಆಝಾನ್ ವಿಚಾರದಲ್ಲಿ ಬಿಜೆಪಿ ಉದ್ದೇಶಪೂರ್ವಕವಾಗಿ ಜಗಳ ಹಚ್ಚುವ ಕೆಲಸ ಮಾಡುತ್ತಿದೆ: ಡಿ.ಕೆ.ಶಿವಕುಮಾರ್

ಬೆಂಗಳೂರು: ಆಝಾನ್ ವಿಚಾರದಲ್ಲಿ ಸುಪ್ರೀಂಕೋರ್ಟ್ ಈಗಾಗಲೇ ತೀರ್ಮಾನ ಮಾಡಿದೆ. ಈಗಾಗಲೇ ಪೊಲೀಸ್ ನವರು ಕೂಡ ನೊಟೀಸ್ ಜಾರಿ ಮಾಡಿದ್ದಾರೆ. ನಮ್ಮ ಪಕ್ಷದ ನಾಯಕರ ತಂಡ ಮುಖ್ಯಮಂತ್ರಿಯನ್ನು ಭೇಟಿ ಮಾಡಿ, ಮನವಿ ಸಲ್ಲಿಸಿದೆ. ಈ ಬಗ್ಗೆ ಕ್ರಮ ಕೈಗೊಳ್ಳುವುದು ಮುಖ್ಯಮಂತ್ರಿಯ ಜವಾಬ್ದಾರಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಸೋಮವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉದ್ದೇಶಪೂರ್ವಕವಾಗಿ ಈ ವಿಚಾರವನ್ನು ಕೆದಕಿ, ಜಗಳ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಇದು ಸರ್ಕಾರದ ವೈಫಲ್ಯ. ಇದನ್ನು ನಿಯಂತ್ರಿಸದಿದ್ದರೆ ರಾಜ್ಯದಲ್ಲಿ ಅಶಾಂತಿ, ಕೋಮು ಸಂಘರ್ಷ ಹೆಚ್ಚುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.
ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಕೆಲಸ ಮಾಡಬೇಕು. ಬೆಂಗಳೂರಿನಲ್ಲಿ ಮತ್ತೊಂದು ಕೋಮುಗಲಭೆಗೆ ಸಿದ್ಧತೆ ನಡೆದಿತ್ತು ಎಂಬ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ವಿಚಾರದಲ್ಲಿ ಕ್ರಮ ಕೈಗೊಳ್ಳುವುದು ಪೊಲೀಸರ ಕರ್ತವ್ಯ. ಈ ಬಗ್ಗೆ ನನಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಹಿತಿ ಪಡೆದ ನಂತರ ಮಾತನಾಡುತ್ತೇನೆ’ ಎಂದರು.
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಕಾಂಗ್ರೆಸ್ ಅಜೆಂಡಾ ಭ್ರಷ್ಟಾಚಾರ ಹಾಗೂ ಭಯೋತ್ಪಾದನೆ ಎಂಬ ಹೇಳಿಕೆ ಬಗ್ಗೆ ಉತ್ತರಿಸಿದ ಅವರು, ‘ದಿನ ಬೆಳಗಾದರೆ ಸರ್ಕಾರದ ಅಕ್ರಮ, ಭ್ರಷ್ಟಾಚಾರಗಳು ಬೆಳಕಿಗೆ ಬರುತ್ತಿವೆ. ನಿನ್ನೆ ಪತ್ರಿಕೆಯಲ್ಲಿ ಯಾವ ಸರ್ಕಾರಿ ಹುದ್ದೆಗೆ ಎಷ್ಟೆಷ್ಟು ದರ ನಿಗದಿಯಾಗಿದೆ ಎಂದು ವರದಿಯಾಗಿದೆ ಎಂದರು.
ಇಷ್ಟೊಂದು ಭ್ರಷ್ಟಾಚಾರದ ಮಸಿ ಬಳಿದುಕೊಂಡಿರುವ ಬಿಜೆಪಿಯವರಿಗೆ ಮುಖ ತೋರಲು ಆಗುತ್ತಿಲ್ಲ. ಜನ ಹಾದಿ-ಬೀದಿಯಲ್ಲಿ ಉಗಿಯುತ್ತಿದ್ದು, ಮೊದಲು ಅವರು ತಮ್ಮ ಮುಖವನ್ನು ತೊಳೆದುಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ ಎಂದು ಶಿವಕುಮಾರ್ ತಿರುಗೇಟು ನೀಡಿದರು.
ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ನಡುವೆ ಹೊಂದಾಣಿಕೆ ಇಲ್ಲ ಎಂಬ ಕಟೀಲ್ ಅವರ ಮಾತಿನ ಬಗ್ಗೆ ಕೇಳಿದ ಪ್ರಶ್ನೆಗೆ, ‘ಅವರ ಪಕ್ಷದಲ್ಲಿ ಆಂತರಿಕ ಕಚ್ಛಾಟ, ಮಂತ್ರಿ ಬದಲಾವಣೆ, ನಾಯಕತ್ವ ಬದಲಾವಣೆ ಸೇರಿದಂತೆ ಅನೇಕ ಹುಳುಕುಗಳಿವೆ. ಅವರು ಮೊದಲು ತಮ್ಮ ಮನೆಯ ಸಮಸ್ಯೆಗಳನ್ನು ನೋಡಿಕೊಳ್ಳಲಿ. ನಂತರ ನಮ್ಮ ಬಗ್ಗೆ ಮಾತನಾಡಲಿ’ ಎಂದು ತಿರುಗೇಟು ನೀಡಿದರು.

Join Whatsapp
Exit mobile version