‘ಚಾಮರಾಜನಗರ ಘಟನೆಗೆ ಬಿಜೆಪಿ ಸರ್ಕಾರ, ಜಿಲ್ಲಾಡಳಿತವೇ ನೇರ ಹೊಣೆ’ : ಸಿದ್ದರಾಮಯ್ಯ ಆಕ್ರೋಶ

Prasthutha|

ಬೆಂಗಳೂರು : ಕಳೆದ ಹಲವು ದಿನಗಳಿಂದ ರಾಜ್ಯದಲ್ಲಿ ಆಕ್ಸಿಜನ್ ಸಿಗದೆ ಉಂಟಾಗಿರುವ ಸರಣಿ ಸಾವುಗಳ ಮುಂದುವರೆದ ಭಾಗವಿದು. ಈ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರ, ಜಿಲ್ಲಾಸ್ಪತ್ರೆಯ ವೈದ್ಯರು ಹಾಗೂ ಜಿಲ್ಲಾಡಳಿತವೇ ನೇರ ಹೊಣೆ ಎಂಬುದಾಗಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ದೊರಕದೇ ಸಾವನ್ನಪ್ಪಿದ ಘಟನೆಯ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಗದೆ 24 ಜನ ರೋಗಿಗಳು ಸಾವಿಗೀಡಾಗಿರುವ ಘಟನೆ ತಿಳಿದು ಸಂಕಟವಾಯಿತು. ಮೃತರ ಶೋಕತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು ಎಂದಿದ್ದಾರೆ.

ಇದು ಅತ್ಯಂತ ಗಂಭೀರ ಹಾಗೂ ಅಮಾನವೀಯ ಪ್ರಕರಣ. ರಾಜ್ಯದಲ್ಲಿ ಆಡಳಿತಯಂತ್ರ ಕುಸಿದುಬಿದ್ದಿರುವುದಕ್ಕೆ ಇದಕ್ಕಿಂತ ಬೇರೆ ಸಾಕ್ಷಿ ಬೇಕೆ? ಬಿಜೆಪಿ ಸರ್ಕಾರ ಅವರ ಅಧಿಕಾರದ ಲಾಲಸೆಗೆ ಇನ್ನಷ್ಟು ಅಮಾಯಕ ಜನರು ಬಲಿಯಾಗುವುದು ಬೇಡ. ಜನರ ಜೀವ ರಕ್ಷಿಸಲಾಗದ ಇಂಥಾ ಸರ್ಕಾರ ಇರುವುದಕ್ಕಿಂತ ತೊಲಗುವುದೇ ಲೇಸು ಎಂದು ಅವರು ಕಿಡಿಕಾರಿದ್ದಾರೆ.

- Advertisement -

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಪ್ರಕರಣದ ನೈತಿಕ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಹಾಗೂ ಈ ಪ್ರಕರಣದ ಬಗ್ಗೆ ಹೈಕೋರ್ಟ್‌ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿಯ ಮೂಲಕ ತನಿಖೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Join Whatsapp