ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ‘ಬಿಸಿ’; ಹಲವು ಗೂಡಾರ್ಥಗಳಿಗೆ ಕಾರಣವಾದ ಸುನಿಲ್ ಕುಮಾರ್ ಟ್ವೀಟ್!

Prasthutha|

ಮಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಆಡಳಿತ ಪಕ್ಷದ ಶಾಸಕರ ಪರ-ವಿರೋಧ ಅಭಿಪ್ರಾಯ ವ್ಯಕ್ತವಾಗುತ್ತಿರುವ ಬೆನ್ನಿಗೆ ವಿಧಾನಸಭೆ ಮುಖ್ಯ ಸಚೇತಕ, ಕಾರ್ಕಳ ಶಾಸಕ ಸುನಿಲ್ ಕುಮಾರ್ ಮಾಡಿರುವ ಟ್ವೀಟ್ ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.

- Advertisement -

“ಕಳೆದ ಮೂರು ದಿನಗಳಿಂದ ಮಾಧ್ಯಮದಲ್ಲಿ ಬರುತ್ತಿರುವ ಹೇಳಿಕೆಗಳು ಪಕ್ಷದ ಹಿತದೃಷ್ಟಿಯಿಂದ ಒಳಿತಲ್ಲ.ಈ ಅಭಿಪ್ರಾಯಗಳೇ ಎಲ್ಲಾ ಶಾಸಕರ, ಕಾರ್ಯಕರ್ತರ ಅಭಿಪ್ರಾಯ ಆಗುವುದಿಲ್ಲ. ನಮ್ಮ ಅಭಿಪ್ರಾಯಗಳನ್ನು ಮಾಧ್ಯಮಗಳ ಮುಂದೆ ಹೇಳಲು ಸಾಧ್ಯವಿಲ್ಲವಾದ್ದರಿಂದ ಪಕ್ಷದ ವರಿಷ್ಠರು ಅಭಿಪ್ರಾಯ ಆಲಿಸಲು ಪ್ರತ್ಯೇಕ ವ್ಯವಸ್ಥೆ ಮಾಡಬೇಕು” ಎಂದು ಟ್ವೀಟ್ ಮೂಲಕ ಪಕ್ಷದ ವರಿಷ್ಠರನ್ನ ಒತ್ತಾಯಿಸಿದ್ದಾರೆ.

ಅಲ್ಲದೇ ತಾನು ಮಾಡಿರುವ ಟ್ವೀಟ್ ಅನ್ನ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಅವರಿಗೂ ಟ್ಯಾಗ್ ಮಾಡಿದ್ದಾರೆ.

- Advertisement -

ಈ ಹಿಂದೆ ಸಚಿವ ಸ್ಥಾನ ಸಿಗದೇ ಇದ್ದಾಗಲೂ ಸುನಿಲ್ ಕುಮಾರ್ ಸರಕಾರದ ವಿರುದ್ಧ ಖಾರವಾಗಿ ಪ್ರತಿಕ್ರಿಯಿಸಿದ್ದರು. ಒಂದು ಕಾಲದಲ್ಲಿ ಯಡಿಯೂರಪ್ಪ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ ಸುನಿಲ್ ಕುಮಾರ್, ಇತ್ತೀಚಿನ ದಿನಗಳಲ್ಲಿ ಪಕ್ಷದ ಆಂತರಿಕ ಅಸಮಾಧಾನದ ಬಗ್ಗೆ ಪಕ್ಷದ ವರಿಷ್ಠರ ಗಮನ ಸೆಳೆಯುವ ಪ್ರಯತ್ನ ಮಾಡುತ್ತಲೇ ಬಂದಿದ್ದಾರೆ.

Join Whatsapp