ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ರವಿಕುಮಾರ್ ಗೆ ಜಾಮೀನು ಸಿಕ್ಕಿದೆ.
ವಿಧಾನಸೌಧದ ಆವರಣದಲ್ಲಿ ಪ್ರತಿಭಟನೆ ವೇಳೆ ಸಿಎಸ್ ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ರವಿಕುಮಾರ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಬಳಿಕ ರವಿಕುಮಾರ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್, ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ. 1 ಲಕ್ಷ ಬಾಂಡ್, ಒಬ್ಬರು ಶ್ಯೂರಿಟಿ ಒದಗಿಸಲು ಸೂಚನೆ ನೀಡಿದೆ. ಹಾಗೇ ತನಿಖೆಗೆ ಸಹಕರಿಸಬೇಕು, ಸಾಕ್ಷ್ಯಾಧಾರ ನಾಶಪಡಿಸದಂತೆ ರವಿಕುಮಾರ್ ಷರತ್ತು ಹಾಕಿದೆ.
ಸರ್ಕಾರ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ವಿರುದ್ಧ ಆಕ್ಷೇಪಾರ್ಹ ಪದ ಬಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್ ಗೆ ಹೈಕೋರ್ಟ್ ಸಹ ರಿಲೀಫ್ ನೀಡಿತ್ತು. ಎಫ್ಐಆರ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ ಜುಲೈ 8ರ ವರೆಗೆ ಬಲವಂತದ ಕ್ರಮ ಕೈಗೊಳ್ಳದಂತೆ ಮಧ್ಯಂತರ ಆದೇಶ ಹೊರಡಿಸಿತ್ತು. ಅಲ್ಲದೇ ತನಿಖೆಗೆ ಸಹಕರಿಸಲು ರವಿಕುಮಾರ್ ಗೆ ಕೋರ್ಟ್ ಖಡಕ್ ಸೂಚನೆಯನ್ನು ಸಹ ನೀಡಿತ್ತು. ರಾಜಕಾರಣಿಗಳು ಬಳಸು ಭಾಷೆ ಕೆಳಮಟ್ಟಕ್ಕಿಳಿದಿದೆ ಎಂದು ನ್ಯಾಯಮೂರ್ತಿ ಎಸ್.ಆರ್.ಕೃಷ್ಣಕುಮಾರ್ ಅವರಿದ್ದ ಪೀಠ ಅಸಮಾಧಾನ ವ್ಯಕ್ತಪಡಿಸಿತ್ತು.
