ಬೋಳಿಯಾರ್ ಪ್ರಕರಣ; ತಪ್ಪು ಮಾಡಿದವರನ್ನು ಬೆಂಬಲಿಸುವುದಿಲ್ಲ: ಸ್ಪೀಕರ್ ಯು.ಟಿ. ಖಾದರ್

Prasthutha|

ಮಂಗಳೂರು: ಬೋಳಿಯಾರ್ ಊರಿನ ಜನರು ಪ್ರೀತಿ, ಸೌಹಾರ್ದದಿಂದ ಇದ್ದಾರೆ. ಹೊರಗಿನವರು ಇಲ್ಲಿ ಬಂದು ವಾತಾವರಣ ಕೆಡಿಸಬೇಡಿ ಎಂದು ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸ್ಪೀಕರ್ ಯು.ಟಿ. ಖಾದರ್ ಹೇಳಿದರು.

- Advertisement -


ನಗರದ ಸರ್ಕ್ಯೂಟ್ ಹೌಸ್ ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಲ್ಲಿ ವಾಸ್ತವದಲ್ಲಿ ಏನಾಗಿದೆ ಎಂಬುದು ಸ್ಥಳದಲ್ಲಿ ಇದ್ದವರಿಗೆ, ಸ್ಥಳೀಯರಿಗೆ ಮಾತ್ರ ಗೊತ್ತಿದೆ. ಮೂರನೇ ವ್ಯಕ್ತಿಗಳಾಗಿ ನಾವು ನಿರ್ಣಯಕ್ಕೆ ಬರುವುದು ಸರಿಯಲ್ಲ. ಈ ರೀತಿ ಮಾಡಿದರೆ ಚುನಾವಣೆಯಲ್ಲಿ ಮತ ಸಿಗುತ್ತದೆ ಎಂಬ ಭ್ರಮೆ ಬೇಡ. ಈ ರೀತಿ ಮಾಡುವುದರಿಂದ ಒಂದು ವೋಟ್ ಕೂಡ ಸಿಗುವುದಿಲ್ಲ. ವಿಧಾನಸಭೆ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಪ್ರಯತ್ನ ಪಟ್ಟವರು ಈಗ ಸಮಸ್ಯೆ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.


ಅಲ್ಲಿನ ಜನರನ್ನು ಅವರಷ್ಟಕ್ಕೆ ಬಿಡಿ. ಪೊಲೀಸರು ಹಾಗೂ ಜನರು ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತಾರೆ. ರಾಜಕಾರಣಿಗಳು ಇಂತಹ ವಿಚಾರಗಳಿಗೆ ತಲೆಹಾಕಬಾರದು. ನನಗೆ ನನ್ನ ಕ್ಷೇತ್ರದ ಎಲ್ಲರೂ ಆತ್ಮೀಯರೇ, ಆದರೆ ತಪ್ಪು ಮಾಡಿದವರಿಗೆ ಬೆಂಬಲ ನೀಡುವುದಿಲ್ಲ. ಈ ವಿಷಯದಲ್ಲಿ ಪೊಲೀಸರು ಕಠಿಣ ಕ್ರಮ ಕೈಗೊಂಡಿದ್ದಾರೆ. ನಾನು ಆಸ್ಪತ್ರೆಗೆ ಭೇಟಿ ನೀಡುವುದು ಎಲ್ಲಾ ಮಾಡಿದರೆ, ಮತ್ತೆ ಗೊಂದಲ ಆಗುತ್ತದೆ. ನಾನೂ ಸೇರಿ ರಾಜಕೀಯದವರು ಅಲ್ಲಿಗೆ ಹೋಗಲೇಬಾರದು ಎಂದು ಯು.ಟಿ.ಖಾದರ್ ತಾಕೀತು ಮಾಡಿದರು.

- Advertisement -


ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಧ್ವನಿ ಸಂದೇಶ ಹಾಕಿ ಜನರನ್ನು ದಾರಿತಪ್ಪಿಸುವವರ ಮೇಲೂ ಪೊಲೀಸರು ಕ್ರಮ ವಹಿಸಬೇಕು. ಇಂತಹ ಘಟನೆಗಳ ಸಂದರ್ಭ ರಾಜಕಾರಣಿಗಳು ಅಲ್ಲಿ ಭೇಟಿ ನೀಡಿದಾಗ ಮತ್ತಷ್ಟು ಗೊಂದಲಕ್ಕೆ ಕಾರಣವಾಗುತ್ತದೆ. ಅದಕ್ಕಾಗಿ ಭೇಟಿ ನೀಡಿಲ್ಲ ಎಂದರು.

Join Whatsapp
Exit mobile version