ಬಿಟಿಎಸ್-2021: ಮೊದಲ ಬಾರಿಗೆ ಯುಎಇ, ವಿಯಟ್ನಾಂ. ಆಫ್ರಿಕಾ, ಯೂರೋಪಿಯನ್ ಒಕ್ಕೂಟ ಭಾಗಿ | ಸಚಿವ ಅಶ್ವತ್ಥನಾರಾಯಣ

Prasthutha|

ಬೆಂಗಳೂರು: ನ.17ರಿಂದ 19ರವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ 24ನೇ ವರ್ಷದ `ಬೆಂಗಳೂರು ತಂತ್ರಜ್ಞಾನ ಶೃಂಗ’ದಲ್ಲಿ (ಬಿಟಿಎಸ್-2021) ಇದೇ ಮೊದಲ ಬಾರಿಗೆ ಸಂಯುಕ್ತ ಅರಬ್ ಸಂಸ್ಥಾನ, ವಿಯಟ್ನಾಂ, ಯೂರೋಪಿಯನ್ ಯೂನಿಯನ್ ಮತ್ತು ದಕ್ಷಿಣ ಆಫ್ರಿಕಾ ದೇಶಗಳು ಪಾಲ್ಗೊಳ್ಳುತ್ತಿವೆ ಎಂದು ಐಟಿ, ಬಿಟಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ.

- Advertisement -


ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸರಕಾರದ ಜಾಗತಿಕ ನಾವೀನ್ಯತಾ ಮೈತ್ರಿಕೂಟವು (ಜಿಐಎ) ಕೈಗೊಂಡಿರುವ ರಚನಾತ್ಮಕ ಕ್ರಮಗಳಿಂದಾಗಿ 30ಕ್ಕೂ ಹೆಚ್ಚು ದೇಶಗಳೊಂದಿಗೆ ಶಿಕ್ಷಣ, ನವೋದ್ಯಮ, ಸಂಶೋಧನೆ ಹಾಗೂ ಅಭಿವೃದ್ಧಿ ಸಹಭಾಗಿತ್ವಕ್ಕೆ ಮುಂದಡಿ ಇಡಲಾಗಿದೆ ಎಂದರು.


ಬೆಂಗಳೂರು ತಂತ್ರಜ್ಞಾನ ಶೃಂಗದಲ್ಲಿ ಇದೇ ಪ್ರಥಮ ಬಾರಿಗೆ ಅಮೆರಿಕ-ಭಾರತ ವಾಣಿಜ್ಯ ಸಮಿತಿ ಮತ್ತು ವರ್ಚುಯಲ್ ರೂಪದಲ್ಲಿ ಆಸ್ಟ್ರೇಲಿಯಾದ ಸಿಡ್ನಿ ವಾಣಿಜ್ಯ ವಿಚಾರ ವಿನಿಮಯ ಶೃಂಗಸಭೆಯ ಮತ್ತು ಬಿಟಿಎಸ್ ಪ್ರತಿನಿಧಿಗಳು ಪಾಲ್ಗೊಳ್ಳುತ್ತಿದ್ದಾರೆ. ಈ ಸಂಘಟನೆಗಳು ರಾಜ್ಯದೊಂದಿಗೆ ತಮ್ಮ ತಂತ್ರಜ್ಞಾನ ಪರಿಣತಿಯನ್ನು ಪರಸ್ಪರ ನೆಲೆಯಲ್ಲಿ ಪ್ರದರ್ಶಿಸಲಿವೆ. ಅಮೆರಿಕದ ಜತೆಗಿನ ಸಹಭಾಗಿತ್ವವು ನಾವೀನ್ಯತೆಯ ಕ್ಷೇತ್ರದಲ್ಲಿ ಮತ್ತಷ್ಟು ಅಂತಾರಾಷ್ಟ್ರೀಯ ಸರಕಾರಕ್ಕೆ ಅವಕಾಶ ಸೃಷ್ಟಿಸಲಿದೆ ಎಂದು ಅವರು ಆಶಾಭಾವನೆ ವ್ಯಕ್ತಪಡಿಸಿದರು. ಬಿಟಿಎಸ್-2021ರಲ್ಲಿ 30ಕ್ಕೂ ಹೆಚ್ಚು ದೇಶಗಳು ಭಾಗವಹಿಸುತ್ತಿವೆ.

- Advertisement -


ಜಾಗತಿಕ ಹೂಡಿಕೆ ಮೈತ್ರಿಕೂಟದ ಭಾಗವಾಗಿ ಆಸ್ಟ್ರೇಲಿಯಾ ನ್ಯೂಸೌತ್ ವೇಲ್ಸ್ ಪ್ರಾಂತ್ಯದ ಉದ್ಯೋಗ, ಹೂಡಿಕೆ ಮತ್ತು ಪ್ರವಾಸೋದ್ಯಮ ಸಚಿವ ಸ್ಟುವರ್ಟ್ ಏಯರ್ಸ್, ಜರ್ಮನಿಯ ನಾರ್ತ್ ರೀನ್-ವೆಸ್ಟ್ ಫಾಲಿಯಾ ಪ್ರಾಂತ್ಯದ ಆರ್ಥಿಕ, ನಾವೀನ್ಯತೆ ಮತ್ತು ಡಿಜಿಟಲೀಕರಣ ಸಚಿವ ಪ್ರೊ.ಆಂಡ್ರಿಯಾಸ್ ಪಿಂಕ್ ವರ್ಟ್, ಫಿನ್ಲೆಂಡಿನ ಸಾರಿಗೆ ಮತ್ತು ಸಂಪರ್ಕ ಸಚಿವ ಟಿಮೋ ಹರಕ್ಕಾ ಹಾಗೂ ವಿಯಟ್ನಾಂನ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ಮಾಜಿ ಸಚಿವ ನುಯೆನ್ ಕ್ವಾನ್ ಬೆಂಗಳೂರು ತಂತ್ರಜ್ಞಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದರು.


ಇದಲ್ಲದೆ, ಜಾಗತಿಕ ಮಟ್ಟದಲ್ಲಿ ತಮ್ಮ ತಾಂತ್ರಿಕ ಪರಿಣತಿಗೆ ಹೆಸರಾಗಿರುವ ಅಮೆರಿಕದ ದಾವೋಸ್ ನಲ್ಲಿರುವ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಎಎಫ್) ಸಂಸ್ಥಾಪಕ ಮತ್ತು ಮುಖ್ಯಸ್ಥ ಪ್ರೊ.ಕ್ಲಾಸ್ ಶ್ವಾಬ್, ಭಾರತೀಯ ಮೂಲದ ವಿಜ್ಞಾನಿ ಮತ್ತು ಲೇಖಕ ಡಾ.ಸಿದ್ಧಾರ್ಥ ಮುಖರ್ಜಿ, ಚೆಕ್ ಪಾಯಿಂಟ್ ಕಂಪನಿಯ ಸ್ಥಾಪಕ ಮತ್ತು ಸಿಇಒ ಗಿಲ್ ಶ್ವೆಡ್, ಆಪರೇಷನ್ಸ್ ಆಪಲ್ ಇಂಕ್ ಸಮೂಹದ ಉಪಾಧ್ಯಕ್ಷೆ ಪ್ರಿಯಾ ಬಾಲಸುಬ್ರಹ್ಮಣ್ಯಂ, ಮೈಕ್ರೋಸಾಫ್ಟ್ ಇಂಡಿಯಾದ ಮುಖ್ಯಸ್ಥ ಅನಂತ್ ಮಹೇಶ್ವರಿ, ಕಿಂಡ್ರೈಲ್ ಕಂಪನಿಯ ಸಿಇಒ ಮಾರ್ಟಿನ್ ಶ್ರೋಟರ್ ಮತ್ತು ಟೆಲ್ಸ್ಟ್ರಾ ಕಂಪನಿಯ ಪಾಲುದಾರ ಗ್ಯಾವೆನ್ ಸ್ಟ್ಯಾಂಡನ್ ಸೇರಿದಂತೆ 75ಕ್ಕೂ ಹೆಚ್ಚು ಆಹ್ವಾನಿತರು ವಿಚಾರಗೋಷ್ಠಿಗಳಲ್ಲಿ ಮಾತನಾಡಲಿದ್ದಾರೆ ಎಂದು ಅಶ್ವತ್ಥನಾರಾಯಣ ಹೇಳಿದರು.

ನಾವೀನ್ಯತೆ ಮತ್ತು ತಂತ್ರಜ್ಞಾನ ವಲಯದ ಹತ್ತಾರು ಧಾರೆಗಳಲ್ಲಿ ಅಂತಾರಾಷ್ಟ್ರೀಯ ಸಹಭಾಗಿತ್ವವನ್ನು ಹೊಂದುವುದು ರಾಜ್ಯದ ಉದ್ದೇಶವಾಗಿದ್ದು, ಜಿಐಎ ಇದನ್ನು ನನಸು ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಯೂರೋಪಿಯನ್ ಒಕ್ಕೂಟದೊಂದಿಗೆ ಇದೇ ಮೊದಲ ಬಾರಿಗೆ ನವೋದ್ಯಮಗಳನ್ನು ಕುರಿತು ವಿಚಾರಗೋಷ್ಠಿ ಏರ್ಪಡಿಸಲಾಗುತ್ತಿದೆ. ಈ ಮೂಲಕ ರಾಜ್ಯವು ಜಾಗತಿಕ ಮಟ್ಟದಲ್ಲಿ ತನ್ನ ತಂತ್ರಜ್ಞಾನ ಸಾಮರ್ಥ್ಯವನ್ನು ಪ್ರದರ್ಶಿಸಲಿದೆ ಎಂದು ಅವರು ನುಡಿದರು.


ಪತ್ರಿಕಾಗೋಷ್ಠಿಯಲ್ಲಿ ರಾಜ್ಯದೊಂದಿಗೆ ಜಿಐಎ ಸಹಭಾಗಿತ್ವ ಹೊಂದಿರುವ ಆಸ್ಟ್ರಲಿಯಾ, ಡೆನ್ಮಾರ್ಕ್, ಫಿನ್ಲೆಂಡ್, ಜರ್ಮನಿ, ಜಪಾನ್, ಲಿಥುವೇನಿಯಾ, ಸ್ವೀಡನ್, ಸ್ವಿಟ್ಜರ್ಲೆಂಡ್ ಮತ್ತು ಯೂರೋಪಿಯನ್ ಒಕ್ಕೂಟಗಳ ಕೌನ್ಸಲ್ ಜನರಗಳು ಭಾಗವಹಿಸಿದ್ದರು. ಕೆಲವರು ವರ್ಚುವಲ್ ಮೂಲಕ.ಭಾಗವಹಿಸಿದ್ದರು.


ಐಟಿ-ಬಿಟಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣ ರೆಡ್ಡಿ, ನಿರ್ದೇಶಕಿ ಮೀನಾ ನಾಗರಾಜ್, ಎಸ್ಟಿಪಿಐ ನಿರ್ದೇಶಕ ಶೈಲೇಂದ್ರಕುಮಾರ್ ತ್ಯಾಗಿ ಮತ್ತು ನವೋದ್ಯಮ ವಿಷನ್ ಗ್ರೂಪಿನ ಮುಖ್ಯಸ್ಥ ಪ್ರಶಾಂತ್ ಪ್ರಕಾಶ್ ಮಾತನಾಡಿದರು.



Join Whatsapp