Home ಕರಾವಳಿ ಮಂಗಳೂರು | ಮನೆಯಲ್ಲಿ ಪೂಜೆ ಮಾಡುವಂತೆ ಕರೆದು ಪುರೋಹಿತನ ಹನಿಟ್ರ್ಯಾಪ್: ದಂಪತಿಯ ಬಂಧನ

ಮಂಗಳೂರು | ಮನೆಯಲ್ಲಿ ಪೂಜೆ ಮಾಡುವಂತೆ ಕರೆದು ಪುರೋಹಿತನ ಹನಿಟ್ರ್ಯಾಪ್: ದಂಪತಿಯ ಬಂಧನ

ಮಂಗಳೂರು: ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಹನಿಟ್ರಾಪ್ ಮಾಡುತ್ತಿದ್ದ ದಂಪತಿಯನ್ನು ಬಂಧಿಸಿರುವ  ಮಂಗಳೂರು ಸಿಸಿಬಿ ಪೊಲೀಸರು, ಆರೋಪಿಗಳಿಂದ 37,000 ರೂ.ಮೌಲ್ಯದ ಎರಡು 2 ಚಿನ್ನದ ರಿಂಗ್, 31,000 ರೂ. ಮತ್ತು 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಶನಿವಾರ ಸಂತೆ ಮೈಲಾಪುರ ಗ್ರಾಮದ ಭವ್ಯ (30) ಹಾಗೂ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ನಿವಾಸಿ ಕುಮಾರ್ ಅಲಿಯಾಸ್ ರಾಜು (35) ಬಂಧಿತ ಆರೋಪಿಗಳು. ಇವರು ಸದ್ಯ ಮಂಗಳೂರಿನ ಮೇರಿಹಿಲ್ ವ್ಯೂ ಅಪಾರ್ಟ್ ಮೆಂಟ್ ನಲ್ಲಿ ವಾಸವಾಗಿದ್ದಾರೆ. ಭವ್ಯ ಮನೆಗೆಲಸ ಮಾಡುತ್ತಿದ್ದರೆ, ಕುಮಾರ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ.

ಆರೋಪಿಗಳು ಮಂಗಳೂರು ನಗರದ ಪದವಿನಂಗಡಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದ ದಂಪತಿಯ ನಡುವಿನ ಸಮಸ್ಯೆಯನ್ನು ಪರಿಹಾರ ಮಾಡಿಸುವುದಾಗಿ, ಮನೆಯಲ್ಲಿ ಪೂಜೆ ಮಾಡಬೇಕೆಂದು ಪುರೋಹಿತ ರನ್ನು ಕರೆಯಿಸಿ ಹನಿಟ್ರಾಪ್ ಮಾಡಿದ್ದರು. 

ಚಿಕ್ಕಮಗಳೂರು ಜಿಲ್ಲೆಯ ಪುರೋಹಿತ ಹಾಗೂ ಜ್ಯೋತಿಷ್ಯ ಶಾಸ್ತ್ರ ವೃತ್ತಿಯ ವ್ಯಕ್ತಿಯೋರ್ವರನ್ನು ಭೇಟಿಯಾಗಿದ್ದ ದಂಪತಿ, ತಮ್ಮ ಮನೆಯಲ್ಲಿನ ಸಮಸ್ಯೆಯನ್ನು ಬಗೆಹರಿಸಲು ಮನೆಯಲ್ಲಿ ಪೂಜೆ ಮಾಡಿಕೊಡಬೇಕೆಂದು ಪುರೋಹಿತರನ್ನು ಮನೆಗೆ ಕರೆಯಿಸಿಕೊಂಡಿದ್ದರು. ಮನೆಯಲ್ಲಿದ್ದ ವೇಳೆ ಪುರೋಹಿತರ ಜೊತೆಗೆ ಅಶ್ಲೀಲವಾಗಿ ಫೋಟೋ ಮತ್ತು ವೀಡಿಯೋವನ್ನು ತೆಗೆದು ನಂತರ ಈ ವೀಡಿಯೋ ಹಾಗೂ ಫೋಟೋವನ್ನು ಇಟ್ಟುಕೊಂಡು ಬ್ಲಾಕ್ ಮೇಲ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದರು. ಹಲವು ಬಾರಿ ಪುರೋಹಿತರನ್ನು ಹೆದರಿಸಿ ಕೊಲ್ಲುವುದಾಗಿ ಜೀವ ಬೆದರಿಕೆ ಹಾಕಿ ಹಣದ ಬೇಡಿಕೆ ಇಟ್ಟಿದ್ದರು. 15 ಲಕ್ಷ ರೂ. ನಗದು ಹಣ ಹಾಗೂ ಸುಮಾರು 34 ಲಕ್ಷ ರೂಪಾಯಿಗಳನ್ನು ಬೇರೆ ಬೇರೆ ಖಾತೆಗಳಿಂದ ಆರೋಪಿಗಳು ತಮ್ಮ ಖಾತೆಗಳಿಗೆ ವರ್ಗಾವಣೆ ಮಾಡಿಸಿಕೊಂಡಿದ್ದರು. ಈ ಬಗ್ಗೆ ಪುರೋಹಿತ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆಯಲ್ಲಿರುತ್ತದೆ.

ಈ ಪ್ರಕರಣದ ತನಿಖೆಯನ್ನು ಕೈಗೊಂಡ ಮಂಗಳೂರು ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದ ತಂಡ, ಪ್ರಮುಖ ಆರೋಪಿಗಳ ಬಗ್ಗೆ ಮಾಹಿತಿ ಪಡೆದು ಈ ಕೃತ್ಯದಲ್ಲಿ ಭಾಗಿಯಾದ ಈ ದಂಪತಿಯನ್ನು ಬಂಧಿಸಿದೆ.

ಆರೋಪಿಗಳು ಇತರ ಕೆಲವು ವ್ಯಕ್ತಿಗಳಿಗೆ ಇದೇ ರೀತಿ ಹನಿಟ್ಯ್ರಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿರುವ ಸಾಧ್ಯತೆಯಿದ್ದು, ಈ ಬಗ್ಗೆ ತನಿಖೆ ಮುಂದುವರಿಯುತ್ತಿದೆ. ಆರೋಪಿಗಳ ವಶದಿಂದ ರೂ 37,000 ಮೌಲ್ಯದ ಎರಡು 2 ಚಿನ್ನದ ರಿಂಗ್, ನಗದು ಹಣ ರೂ. 31,000ರೂ ಮತ್ತು 4 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

 ಈ ಪ್ರಕರಣದಲ್ಲಿ ಆರೋಪಿಗಳ ಜೊತೆ ಇತರರು ಕೂಡಾ ಭಾಗಿಯಾಗಿ ಹಣವನ್ನು ಪಡೆದುಕೊಂಡಿರುವ ಬಗ್ಗೆ ಮಾಹಿತಿಯಿದ್ದು, ಈ ಬಗ್ಗೆ ತನಿಖೆ ಮುಂದುವರಿಸಲಾಗಿದೆ. ಆರೋಪಿಗಳು ಇನ್ನಷ್ಟು ಹಣಕ್ಕಾಗಿ ಪೊಲೀಸರು, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ರವರ, ಮಹಿಳಾ ಸಂಘಟನೆಗಳ ಹೆಸರಿನಲ್ಲಿ ಬೆದರಿಕೆ ಹಾಕಿರುವುದಲ್ಲದೇ ಇನ್ನಷ್ಟು ಹಣವನ್ನು ನೀಡದೇ ಇದ್ದರೆ ಸುದ್ದಿ ಮಾಧ್ಯಮಗಳಲ್ಲಿ ಫೋಟೋ ಮತ್ತು ವೀಡಿಯೋವನ್ನು ವೈರಲ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದರು. ಆರೋಪಿಗಳ ಪೈಕಿ ಕುಮಾರ್  ತನ್ನ ಹೆಸರನ್ನು ರಾಜು ಎಂದು ತಿಳಿಸಿ ಮಧ್ಯವರ್ತಿಯಾಗಿ ಫಿರ್ಯಾದಿದಾರರ ಜೊತೆ ಸಹಾಯ ಮಾಡುವ ನಿಟ್ಟಿನಲ್ಲಿ ಪ್ಲಾನ್ ಮಾಡಿಕೊಂಡು ಹಣ ವಸೂಲಿ ಮಾಡಿಕೊಂಡಿದ್ದಾರೆ.

ಹನಿಟ್ರಾಪ್ ಮಾಡಿ ಸುಲಿಗೆ ಮಾಡಿದ ಹಣದಲ್ಲಿ ಆರೋಪಿಗಳು ಐಷಾರಾಮಿ ಜೀವನವನ್ನು ಸಾಗಿಸುತ್ತಿದ್ದರು. ಮೊದಲು ಸಣ್ಣ ಬಾಡಿಗೆ ಮನೆಯಲ್ಲಿದ್ದ ಆರೋಪಿಗಳು ಈ ಕೃತ್ಯವೆಸಗಿದ ನಂತರ ಫಿರ್ಯಾದಿದಾರರಿಂದ ಸುಲಿಗೆ ಮಾಡಿದ ಹಣದಲ್ಲಿ ರೂ 10 ಲಕ್ಷ ಹಣವನ್ನು ನೀಡಿ ಫ್ಲಾಟ್ ವೊಂದನ್ನು ಲೀಸ್ ಗೆ ಪಡೆದುಕೊಂಡಿರುವುದಲ್ಲದೇ, ಈ ಫ್ಲಾಟ್ ಗೆ ಸುಮಾರು 7 ಲಕ್ಷ ಮೌಲ್ಯದ  ಮನೆ ಸಾಮಾಗ್ರಿಗಳನ್ನು ಖರೀದಿಸಿದ್ದಾರೆ. ಅಲ್ಲದೇ ಹೊಸ ದ್ವಿಚಕ್ರ ವಾಹನವೊಂದನ್ನು ಖರೀದಿಸಿರುವ ಬಗ್ಗೆ ತನಿಖೆಯಿಂದ ತಿಳಿದುಬಂದಿದೆ.  ಆರೋಪಿಗಳ ಪೈಕಿ ಭವ್ಯಳನ್ನು  ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಹೆಚ್ಚಿನ ತನಿಖೆಗಾಗಿ 5 ದಿನಗಳ ಪೊಲೀಸ್ ಕಸ್ಟಡಿಗೆ ಪಡೆದುಕೊಳ್ಳಲಾಗಿರುತ್ತದೆ.

 ಆರೋಪಿಗಳ ಪತ್ತೆ ಕಾರ್ಯದಲ್ಲಿ ಸಿಸಿಬಿ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್, ಪಿಎಸ್ಐ ಯವರಾದ ರಾಜೇಂದ್ರ ಬಿ, ಪ್ರದೀಪ ಟಿ ಆರ್ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Join Whatsapp
Exit mobile version