ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನ

Prasthutha|

ಕುಖ್ಯಾತ ಕ್ರಿಮಿನಲ್‌ಗೆ ಒಂದು ವರ್ಷ ಜೈಲೇ ಗತಿ

- Advertisement -

ಬೆಂಗಳೂರು : ಗೋ ರಕ್ಷಣೆ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಡಿಸಿ ಮಂಡ್ಯದ ಇದ್ರೀಸ್ ಪಾಷಾ ಎಂಬವರನ್ನು ಹತ್ಯೆ ಮಾಡಿರುವ ಆರೋಪ ಎದುರಿಸುತ್ತಿರುವ ಕುಖ್ಯಾತ ಕ್ರಿಮಿನಲ್ ಪುನೀತ್ ಕೆರೆಹಳ್ಳಿಯನ್ನ ಬಂಧಿಸಲಾಗಿದೆ.  ನಗರದ ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.

ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್‌ ಕೆರೆಹಳ್ಳಿ ವಿರುದ್ಧ  ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಈ ಕಾಯ್ದೆಯಡಿ  ಒಂದು ವರ್ಷ ಜಾಮೀನು ಸಿಗದ ಕಾರಣ ಮುಂದಿನ ಒಂದು ವರ್ಷಗಳ ಕಾಲ ಪುನೀತ್ ಕೆರೆಹಳ್ಳಿಗೆ ಜೈಲುವಾಸ ಖಾಯಂ ಆಗಲಿದೆ.

- Advertisement -

ಕಳೆದ ಒಂದು ತಿಂಗಳಿನಿಂದ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಲು ಬೆಂಗಳೂರು ಪೊಲೀಸರು ಸಿದ್ಧತೆ ನಡೆಸಿ ನೋಟಿಸ್ ನೀಡಿ ವಿವರಣೆ ಕೇಳಿದ್ದರು. ಶುಕ್ರವಾರ ತಡರಾತ್ರಿ ಸಿಸಿಬಿ ಪೊಲೀಸರು ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದಾರೆ.

ಪುನೀತ್ ಕೆರೆಹಳ್ಳಿ ಕಳೆದ ಕೆಲ ವರ್ಷಗಳಿಂದ ನಡೆಸಿರುವ ಸಮಾಜ ವಿರೋಧಿ ಕೃತ್ಯಗಳು, ಸಮಾಜದ ಸಾಮರಸ್ಯ ಕದಡಿದ ಪ್ರಕರಣಗಳು ಮತ್ತು ಆತನ  ಅಪರಾಧ ಪ್ರಕರಣಗಳನ್ನು ಪರಿಗಣಿಸಿ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಮೂಲತಃ ಹಾಸನ ಜಿಲ್ಲೆಯವನಾದ ಪುನೀತ್ ಕೆರೆಹಳ್ಳಿ ಸದ್ಯ ಬೆಂಗಳೂರಿನ ಜೆಪಿ ನಗರದಲ್ಲಿ ನೆಲೆಸಿದ್ದು ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ಕಟ್ಟಿಕೊಂಡು ಜನರನ್ನು ಬೆದರಿಸಿ ಸಮಾಜದ ಶಾಂತಿ ಕದಡಿ ಗೋ ರಕ್ಷಣೆ ಹೆಸರಿನಲ್ಲಿ ದನದ ವ್ಯಾಪಾರಿಗಳನ್ನು ಬೆದರಿಸುತ್ತಿದ್ದ ಎಂದು ಮಾಹಿತಿ ನೀಡಲಾಗಿದೆ.

ಈತನ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ವಿಜಯನಗರದ ಹಂಪಿ ಪ್ರವಾಸಿ ಪೊಲೀಸ್‌ ಠಾಣೆ, ರಾಮನಗರ ಜಿಲ್ಲೆಯ ಸಾತನೂರು ಪೊಲೀಸ್ ಠಾಣೆ ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ಕೊಲೆ, ಹಲ್ಲೆ, ಜೀವ ಬೆದರಿಕೆ, ದೊಂಬಿ, ಪ್ರಕರಣಗಳು ದಾಖಲಾಗಿವೆ. ಕೆಲ ಸಮಯದ ಹಿಂದೆ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಟ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿರುವ ಪ್ರಕರಣ ಕೂಡ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂದನಕ್ಕೊಳಗಾಗಿದ್ದ ಪುನೀತ್ ಕೆರೆಹಳ್ಳಿ ಬಳಿಕ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾಗಿದ್ದ. ಇದೀಗ ಗೂಂಡಾ ಕಾಯ್ದೆಯಡಿ ಪುನೀತ್ ಕೆರೆಹಳ್ಳಿ ಬಂಧನವಾಗಿದೆ.

ಗೂಂಡಾ ಕಾಯ್ದೆಯಡಿ ಬಂಧನವಾದ ಆರೋಪಿಗೆ ಒಂದು ವರ್ಷ ಜಾಮೀನು ಸಿಗುವುದಿಲ್ಲ ಎಂದು ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

Join Whatsapp