ಕಾವೇರಿ ಸಂಕಷ್ಟಕ್ಕೆ ಪರಿಹಾರವಾಗಿರುವ ಮೇಕೆದಾಟು ಯೋಜನೆಗೆ ಕೇಂದ್ರ ಅನುಮತಿ ನೀಡಲಿ: ಡಿಕೆಶಿ

Prasthutha|

ಬೆಂಗಳೂರು: ಸಂಕಷ್ಟದ ಪರಿಸ್ಥಿತಿಯಲ್ಲಿ ಕಾವೇರಿ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರವಾಗಿದೆ. ನ್ಯಾಯಾಲಯ ಈ ವಿಚಾರವಾಗಿ ಕೆಳಹಂತದಲ್ಲೇ ಪರಿಹಾರ ಕಂಡುಕೊಳ್ಳಲು ಸೂಚನೆ ನೀಡಿದ್ದು, ಈಗ ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅಗತ್ಯ ಎಲ್ಲಾ ಇಲಾಖೆಗಳ ಅನುಮತಿ ನೀಡಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

- Advertisement -

ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡು ಪಾಲಿನ ನೀರು ಹರಿಸಲು ನಾವು ಬದ್ಧರಾಗಿದ್ದೇವೆ. ಗುರುವಾರ ನಡೆದ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಸಹ ನಿಮ್ಮ ಪಾಲಿನ ನೀರು ನಿಮಗೆ ಸಿಗಲಿದೆ. ಹೀಗಿರುವಾಗ ಕರ್ನಾಟಕದವರು ಎಷ್ಟಾದರೂ ಅಣೆಕಟ್ಟು ಕಟ್ಟಿಕೊಳ್ಳಲಿ ಬಿಡಿ. ನೀವೇಕೆ ಈ ವಿಚಾರದಲ್ಲಿ ಮಧ್ಯಪ್ರವೇಶ ಮಾಡುತ್ತಿದ್ದೀರಿ? ಈ ವಿಚಾರವಾಗಿ ಕೆಳಹಂತದಲ್ಲೇ ತೀರ್ಮಾನ ಮಾಡಿ ಎಂದು ತಿಳಿಸಿದೆ. ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಸ್ನೇಹಿತರು ಕೇಂದ್ರ ಸರ್ಕಾರ ಮೇಕೆದಾಟು ಯೋಜನೆಗೆ ಅನುಮತಿ ನೀಡುವಂತೆ ಒತ್ತಡ ಹಾಕಲಿ ಎಂದು ಹೇಳಿದರು.

ಕಾವೇರಿ ನೀರಿನ ವಿಚಾರವಾಗಿ ತಮಿಳುನಾಡು 24,000 ಕ್ಯೂಸೆಕ್ ನೀರು ಹರಿಸುವಂತೆ ಆಗ್ರಹ ಮಾಡಿತ್ತು. ನಮ್ಮ ಅಧಿಕಾರಿಗಳು ತಾಂತ್ರಿಕ ಸಮಿತಿ ಮುಂದೆ, ನಾವು ಕೇವಲ 3,000 ಕ್ಯೂಸೆಕ್ ನೀರು ಬಿಡಲಷ್ಟೇ ಶಕ್ತವಾಗಿದ್ದೇವೆ ಎಂದು ಸಮರ್ಥವಾಗಿ ವಾದ ಮಂಡಿಸಿದರು. ಇದರ ಪರಿಣಾಮವಾಗಿ 10,000 ಕ್ಯೂಸೆಕ್ ನೀರು ಹರಿಸುವಂತೆ ಪ್ರಾಧಿಕಾರ ಮೊದಲು ಆದೇಶ ನೀಡಿತು. ನಂತರ 5,000 ಕ್ಯೂಸೆಕ್‌ಗೆ ಇಳಿಕೆಯಾಗಿದೆ ಎಂದರು.

- Advertisement -

ನಾವು ಉತ್ತಮ ಮಳೆ ನಿರೀಕ್ಷೆ ಮಾಡಿದ್ದೆವು. ಆದರೆ ಮಳೆ ಅಭಾವ ಎದುರಾಗಿದೆ. ಈ ಮಧ್ಯೆ ಮಂಡ್ಯ ಹಾಗೂ ಇತರೆ ಭಾಗದ ರೈತರ ಬೆಳೆ ಉಳಿಸುವ ಉದ್ದೇಶದಿಂದ ಜಮೀನಿಗೆ ನೀರು ಹರಿಸಿ ಅವರ ರಕ್ಷಣೆ ಮಾಡಿದ್ದೇವೆ. ನಾವು ಮೇಲ್ಮನವಿ ಸಲ್ಲಿಸುವ ಮುನ್ನ ಸರ್ವಪಕ್ಷ ಸಭೆ ಮಾಡಿ ಚರ್ಚೆ ಮಾಡಿದ್ದೇವೆ. ಸುಪ್ರೀಂ ಕೋರ್ಟ್ ವಿಚಾರಣೆಗೂ ಮುನ್ನ ಸರ್ವಪಕ್ಷ ನಾಯಕರ ಸಭೆ ಮಾಡಿದ್ದೆವು. ಆದರೆ ನ್ಯಾಯಾಲಯ ಎರಡೂ ರಾಜ್ಯಗಳ ಅರ್ಜಿ ಹಾಗೂ ಎರಡೂ ರಾಜ್ಯಗಳ ರೈತರ ಅರ್ಜಿಗಳನ್ನು ತಿರಸ್ಕರಿಸಿ, ಪ್ರಾಧಿಕಾರದ ಆದೇಶದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ಆ ಮೂಲಕ ಈ ತಿಂಗಳು 27ರವರೆಗೂ ನೀರು ಹರಿಸುವ ಪರಿಸ್ಥಿತಿ ಬಂದಿದೆ. ಈ ಹಿಂದೆ ಬಿಜೆಪಿ, ದಳದ ಸರ್ಕಾರ ಇದ್ದಾಗಲೂ ಇಂತಹ ಪರಿಸ್ಥಿತಿ ಎದುರಾಗಿತ್ತು. ಆಗಲೂ ರಾಜ್ಯ ನೀರು ಹರಿಸಿದೆ. ಬಿಜೆಪಿ ಸರ್ಕಾರ ಈ ಹಿಂದೆ ಇಂತಹ ಪರಿಸ್ಥಿತಿಯಲ್ಲಿ ತಮಿಳುನಾಡಿಗೆ 10,000 ಕ್ಯೂಸೆಕ್ ನೀರು ಹರಿಸುವುದಾಗಿ ಸುಪ್ರೀಂ ಕೋರ್ಟ್ ಗೆ ಅಫಿಡವಿಟ್ ಸಲ್ಲಿಕೆ ಮಾಡಿದ್ದ ದಾಖಲೆಯೂ ನಮ್ಮ ಬಳಿ ಇದೆ. ಆದರೂ ಇಂದು ಯಡಿಯೂರಪ್ಪನವರು ಹಾಗೂ ಬೊಮ್ಮಾಯಿ ಅವರು ಮಾತನಾಡುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ರಾಜಕಾರಣ ಮಾತನಾಡಲು ನನಗೆ ಇಚ್ಛೆ ಇಲ್ಲ. ನಾನು ರಾಜಕಾರಣ ಮಾಡಬಹುದು. ಎಲ್ಲರಿಗೂ ಉತ್ತರ ನೀಡುವಷ್ಟು ಶಕ್ತಿ ಜನ ನಮಗೆ ನೀಡಿದ್ದಾರೆ. ಕುಮಾರಣ್ಣ, ಯಡಿಯೂರಪ್ಪ, ಬೊಮ್ಮಾಯಿ ಅವರ ಪ್ರತಿ ಮಾತಿಗೂ ಅವರ ಸರ್ಕಾರದ ಸಮಯದಲ್ಲಿ ಏನಾಗಿತ್ತು ಎಂದು ದಾಖಲೆ ಸಮೇತ ಉತ್ತರ ನೀಡಬಲ್ಲೆ ಎಂದು ಹರಿಹಾಯ್ದರು.

ಚಿತ್ರರಂಗ, ಕನ್ನಡಪರ ಸಂಘಟನೆಗಳು ಈಗ ಬಹಳ ಚೆನ್ನಾಗಿ ರೋಷಾವೇಶ ತೋರುತ್ತಿವೆ. ಬಹಳ ಸಂತೋಷ. ಅವರ ವಿಚಾರಗಳು ಈಗ ಹೊರಗೆ ಬರುತ್ತಿರುವುದಕ್ಕೆ ಸಂತೋಷವಾಗಿದೆ. ಆದರೆ ಮೇಕೆದಾಟು ಯೋಜನೆಗೆ ಆಗ್ರಹಿಸಿ ನೀರಿಗಾಗಿ ನಾವು ಹೆಜ್ಜೆ ಹಾಕಿದಾಗ ಇವರೆಲ್ಲ ಎಲ್ಲಿದ್ದರು? ಎಲ್ಲಿಗೆ ಹೋಗಿದ್ದರು? ಆಗಲೂ ಕೆಲವು ಸ್ವಾಮೀಜಿಗಳು ನಮ್ಮ ಹೋರಾಟಕ್ಕೆ ಬೆಂಬಲ ನೀಡಿದ್ದರು. ನಾನು ಆ ಹೋರಾಟವನ್ನು ನನ್ನ ಸ್ವಾರ್ಥಕ್ಕೆ ಮಾಡಿದ್ದೆನಾ? ಆಗ್ಯಾಕೆ ಇವರು ಧ್ವನಿ ಎತ್ತಲಿಲ್ಲ? ವಿರೋಧ ಪಕ್ಷದಲ್ಲಿರುವವರು ನಮ್ಮನ್ನು ದೂಷಣೆ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ರಾಜ್ಯದ ಜನರು ಹಾಗೂ ರೈತರ ರಕ್ಷಣೆಗೆ ಬದ್ಧವಾಗಿದ್ದು, ನಮ್ಮ ಕಾನೂನು ತಜ್ಞರ ವಾದ ನಮಗೆ ತೃಪ್ತಿ ಇದೆ. ಕುಮಾರಸ್ವಾಮಿ ಹಾಗೂ ಬೊಮ್ಮಾಯಿ ಅವರು ಯಾವ ವಕೀಲರನ್ನು ನೇಮಿಸಿದ್ದರೋ ಅದೇ ವಕೀಲರನ್ನು ಇಟ್ಟುಕೊಂಡೇ ನಾವು ಕಾನೂನು ಹೋರಾಟ ಮಾಡುತ್ತಿದ್ದೇವೆ ಎಂದರು.

Join Whatsapp