ಸಿಇಟಿ ವಿದ್ಯಾರ್ಥಿಗಳಿಂದ ಸರ್ಕಾರದ ವಿರುದ್ಧ ಹೈಕೋರ್ಟಿನಲ್ಲಿ ದಾವೆ

Prasthutha|

ಬೆಂಗಳೂರು: ಸಿಇಟಿ ಫಲಿತಾಂಶದ ವಿಚಾರವಾಗಿ ರಾಜ್ಯ ಸರ್ಕಾರ ಕೈಗೊಂಡಿರುವ ನಿರ್ಣಯದ ವಿರುದ್ಧ 2021ನೇ ಸಾಲಿನ ಪುನರಾವರ್ತಿತ ವಿದ್ಯಾರ್ಥಿಗಳು ಗುರುವಾರ ಹೈಕೋರ್ಟ್ ನಲ್ಲಿ ದಾವೆ ಹೂಡಲು ನಿರ್ಧರಿಸಿದ್ದಾರೆ.

- Advertisement -

ಉನ್ನತ ಶಿಕ್ಷಣ ಸಚಿವ ಡಾ .ಸಿ.ಎನ್. ಅಶ್ವತ್ಥ ನಾರಾಯಣ ಅವರು ಮಂಗಳವಾರ ಸುದ್ದಿಗೋಷ್ಠಿ ನಡೆಸಿ, 2021-22ನೇ ಶೈಕ್ಷಣಿಕ ವರ್ಷದಲ್ಲಿ ದ್ವಿತೀಯ ಪಿಯುಸಿಯಲ್ಲಿ ತೇರ್ಗಡೆ ಹೊಂದಿ ಈ ವರ್ಷವೂ ಪುನಃ ಸಿಇಟಿ ಬರೆದಿರುವ 24 ಸಾವಿರ ವಿದ್ಯಾರ್ಥಿಗಳಿಗೆ ಪಿಯುಸಿ ಅಂಕಗಳನ್ನು ಪರಿಗಣಿಸುವುದು ಸಾಧ್ಯವಿಲ್ಲ. ಈ ವಿಷಯದಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತೆಗೆದುಕೊಂಡಿರುವ ನಿರ್ಧಾರ ಸರಿಯಾಗಿದೆ ಎಂದು ಹೇಳಿದ್ದರು.

ಸಿಇಟಿ-2022ರ ಫಲಿತಾಂಶವು ಜು.30ರಂದು ಪ್ರಕಟವಾಗಿದ್ದು, ಅಂದಿನಿಂದಲೂ ಪುನರಾವರ್ತಿತ ವಿದ್ಯಾರ್ಥಿಗಳು ಮತ್ತು ಪೋಷಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಈ ನಡುವೆಯೇ ಉನ್ನತ ಶಿಕ್ಷಣ ಸಚಿವರು ಪತ್ರಿಕಾಗೋಷ್ಠಿ ನಡೆಸಿ ನ್ಯಾಯ ಒದಗಿಸಲು ಸಾಧ್ಯವಿಲ್ಲ. ಈ 24,000 ವಿದ್ಯಾರ್ಥಿಗಳಿಗೆ ಈಗ ಪಿಯುಸಿ ಅಂಕಗಳನ್ನು ಪರಿಗಣಿಸಿ, ರಾಂಕಿಂಗ್ ಕೊಟ್ಟರೆ ಒಟ್ಟು 3 ಲಕ್ಷ ವಿದ್ಯಾರ್ಥಿಗಳಿಗೆ ಅನ್ಯಾಯ ಮಾಡಿದಂತಾಗುತ್ತದೆ. ಇವರಲ್ಲಿ ಒಂದುವರೆ ಲಕ್ಷ ವಿದ್ಯಾರ್ಥಿಗಳು ಹೋದ ವರ್ಷವೇ ಸಿಇಟಿ ಬರೆದಿರುವವರು ಹಾಗೂ ಈ ವರ್ಷದ ಒಂದೂವರೆ ಲಕ್ಷ ವಿದ್ಯಾರ್ಥಿಗಳು ಸೇರಿದ್ದಾರೆ ಎಂದು ಹೇಳಿದ್ದರು.

- Advertisement -

ಇದರಿಂದ ವಿದ್ಯಾರ್ಥಿಗಳು ಮತ್ತಷ್ಟು ಆಕ್ರೋಶಗೊಂಡಿದ್ದಾರೆ. ಮಾತ್ರವಲ್ಲ, ಫಲಿತಾಂಶ ಪ್ರಕಟಿಸಿರುವ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ನ್ಯಾಯಕ್ಕಾಗಿ ನ್ಯಾಯಾಲಯದ ಮೊರೆ ಹೋಗಲಾಗುತ್ತಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಜೊತೆಗೆ ಸರ್ಕಾರದ ವಿರುದ್ಧ ಹೈಕೋರ್ಟಿನಲ್ಲಿ ದಾವೆ ಹೂಡಲು ನಿರ್ಧರಿಸಿದ್ದಾರೆ.

Join Whatsapp