Home ಟಾಪ್ ಸುದ್ದಿಗಳು 14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪತ್ರ.!

14 ನಿವೇಶನಗಳನ್ನು ಹಿಂದಿರುಗಿಸುವುದಾಗಿ ಮುಡಾ ಆಯುಕ್ತರಿಗೆ ಸಿಎಂ ಸಿದ್ದರಾಮಯ್ಯ ಪತ್ನಿ ಪತ್ರ.!

ಬೆಂಗಳೂರು: ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ನಂತರ ಮೊದಲ ಬಾರಿಗೆ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರು ಬಹಿರಂಗ ಪತ್ರ ಬರೆದಿದ್ದಾರೆ. ಮುಡಾಗೆ ಪತ್ರ ಬರೆದಿರುವ ಸಿಎಂ ಪತ್ನಿ ಪಾರ್ವತಿ ಅವರು ನಿವೇಶನಗಳನ್ನು ಹಿಂದಿರುಗಿಸುವುದಾಗಿ ತಿಳಿಸಿದ್ದಾರೆ.

ಪಾರ್ವತಿ ಸಿದ್ದರಾಮಯ್ಯ ಪತ್ರದಲ್ಲಿ ಏನಿದೆ..?
ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು.

ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು.

ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ. ನನ್ನ ಸ್ವಂತ ಸೋದರ ಅರಿಶಿನ – ಕುಂಕುಮದ ಭಾಗವಾಗಿ ಕೊಟ್ಟ ಜಮೀನಿನ ಬಾಬು ಪಡೆದ ನಿವೇಶನಗಳು ಇಷ್ಟೊಂದು ರಾದ್ಧಾಂತವಾಗುತ್ತದೆ. ಇದರಿಂದ ನನ್ನ ಪತಿಯವರು ಅನ್ಯಾಯವಾಗಿ ಆರೋಪಗಳನ್ನು ಎದುರಿಸುವಂತಾಗಬಹುದು ಎನ್ನುವುದನ್ನು ನಾನು ಊಹಿಸಿದವಳೂ ಅಲ್ಲ.
ನನಗೆ ಈ ನಿವೇಶನ, ಮನೆ, ಆಸ್ತಿ, ಸಂಪತ್ತು ಯಾವುದೂ ಕೂಡ ನನ್ನ ಪತಿಯ ಗೌರವ, ಘನತೆ, ಮರ್ಯಾದೆ ಮತ್ತು ಅವರ ನೆಮ್ಮದಿಗಿಂತ ದೊಡ್ಡದಲ್ಲ. ಇಷ್ಟು ವರ್ಷಗಳ ಕಾಲ ಅಧಿಕಾರದಲ್ಲಿದ್ದ ಅವರಿಂದ ಏನನ್ನೂ ನನಗಾಗಲೀ, ನನ್ನ ಕುಟುಂಬಕ್ಕಾಗಲೀ ಬಯಸದೇ ಇದ್ದ ನನಗೆ ಈ ನಿವೇಶನಗಳು ತೃಣಕ್ಕೆ ಸಮ.

ಈ ಹಿನ್ನೆಲೆಯಲ್ಲಿ ವಿವಾದಕ್ಕೆ ಕಾರಣವಾಗಿರುವ ಮುಡಾದ 14 ನಿವೇಶನಗಳನ್ನು ವಾಪಸ್ ಮಾಡಲು ನಿರ್ಧರಿಸಿದ್ದೇನೆ. ಈ ಬಗ್ಗೆ ನನ್ನ ಪತಿಯವರ ಅಭಿಪ್ರಾಯ ಏನಿದೆ ಎನ್ನುವುದು ನನಗೆ ತಿಳಿದಿಲ್ಲ. ನನ್ನ ಮಗನ ಬಳಿಯಾಗಲಿ, ನನ್ನ ಕುಟುಂಬದ ಇತರ ಸದಸ್ಯರ ಬಳಿಯಾಗಲಿ ಇದರ ಬಗ್ಗೆ ನಾನು ಚರ್ಚಿಸಿಲ್ಲ. ಇದು ನಾನು ನನ್ನ ಆತ್ಮ ಸಾಕ್ಷಿಯ ಕರೆಗೆ ಓಗೊಟ್ಟು ಪ್ರಜ್ಞಾಪೂರ್ವಕವಾಗಿ ಕೈಗೊಂಡಿರುವ ತೀರ್ಮಾನ.

ಈ ಹಂತದಲ್ಲಿ ಇಂತಹ ನಿರ್ಧಾರಕ್ಕೆ ಏಕೆ ಬಂದಿರಿ? ಎಂದು ಯಾರಾದರೂ ಕೇಳಬಹುದು. ಆರೋಪ ಕೇಳಿ ಬಂದ ದಿನವೇ ನಾನು ಈ ನಿರ್ಧಾರ ಮಾಡಿದ್ದೆ. ಆದರೆ, ಈ ಮುಡಾ ನಿವೇಶನ ಹಂಚಿಕೆಯ ಆರೋಪವನ್ನು ರಾಜಕೀಯ ದುರುದ್ದೇಶದಿಂದ ಮಾಡಲಾಗಿದ್ದು, ಈ ಅನ್ಯಾಯದ ವಿರುದ್ಧ ಹೋರಾಡಬೇಕು. ಅವರ ಸಂಚಿಗೆ ನಾವು ಬಲಿಯಾಗಬಾರದು ಎಂದು ಕೆಲವು ಹಿತೈಷಿಗಳು ಹೇಳಿದ ಕಾರಣಕ್ಕೆ ನಿವೇಶನ ವಾಪಸು ಮಾಡಬೇಕೆಂಬ ನಿರ್ಧಾರವನ್ನು ಕೈ ಬಿಟ್ಟಿದ್ದೆ.

ನನ್ನ ಈ ನಿರ್ಧಾರ ಅಚಲವಾಗಿದ್ದು, ಈ ನಿವೇಶನಗಳನ್ನು ವಾಪಸು ನೀಡುವುದರ ಜೊತೆಗೆ ಮುಡಾಕ್ಕೆ ಸಂಬಂಧಿಸಿದ ಎಲ್ಲಾ ಆರೋಪಗಳ ಬಗ್ಗೆ ಸಮಗ್ರ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ. ಕೊನೆಯದಾಗಿ, ಎಲ್ಲಾ ರಾಜಕೀಯ ಪಕ್ಷದ ನಾಯಕರು ಮತ್ತು ಮಾಧ್ಯಮ ಕ್ಷೇತ್ರದ ಬಂಧುಗಳಲ್ಲಿ ನನ್ನ ವಿನಮ್ರ ವಿನಂತಿ.

ದಯವಿಟ್ಟು ರಾಜಕೀಯ ಕ್ಷೇತ್ರದಿಂದ ದೂರವಿದ್ದು, ತಮ್ಮ ಪಾಡಿಗೆ ತಾವಿರುವ ರಾಜಕೀಯ ಕುಟುಂಬದ ಹೆಣ್ಣು ಮಕ್ಕಳನ್ನು ರಾಜಕೀಯ ದ್ವೇಷ ಸಾಧನೆಗಾಗಿ ವಿವಾದದ ಕಣಕ್ಕೆ ಎಳೆದು ತಂದು ಅವರ ಘನತೆ, ಗೌರವಗಳಿಗೆ ಹಾನಿ ಮಾಡಬೇಡಿ ಎಂದು ಬರೆದಿದ್ದಾರೆ.

Join Whatsapp
Exit mobile version