ಮಂಗಳೂರು ಭಾಗದಲ್ಲಿ ಸಹಕಾರ ಕ್ಷೇತ್ರ ಗಟ್ಟಿಯಾಗಿದೆ: ಸಚಿವ ಎಸ್.ಟಿ.ಸೋಮಶೇಖರ್ 

Prasthutha|

ಮಂಗಳೂರು: ಸಹಕಾರ ಕ್ಷೇತ್ರ ಜೀವಂತ ಇದೇ ಎಂಬುದಕ್ಕೆ ಇಲ್ಲಿ ಸೇರಿರುವ ಜನರೇ ಸಾಕ್ಷಿ. ಮಂಗಳೂರು ಭಾಗದಲ್ಲಿ ಸಹಕಾರ ಕ್ಷೇತ್ರ ಗಟ್ಟಿಯಾಗಿದೆ. ಸಹಕಾರ ಕ್ಷೇತ್ರ ಸಹಸ್ರಾರು ಜನರಿಗೆ ಉದ್ಯೋಗವಕಾಶ ಕಲ್ಪಿಸುವುದರ ಜೊತೆಗೆ ಕೋಟ್ಯಂತರ ಜನರಿಗೆ ಸಾಕಷ್ಟು ಅನುಕೂಲ ಕಲ್ಪಿಸಿದೆ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್  ಹೇಳಿದರು.

- Advertisement -

ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ನ.14 ರಿಂದ 20ರವರೆಗೆ ಪ್ರತಿ ವರ್ಷ ಏಳು ದಿನಗಳ ಕಾಲ ಸಹಕಾರ ಸಪ್ತಾಹ ಆಚರಣೆ ಮಾಡಲಾಗುತ್ತದೆ. ನ.14ರಂದು ಮುಖ್ಯಮಂತ್ರಿಗಳು ಕಲಬುರಗಿಯಲ್ಲಿ ಸಹಕಾರ ಸಪ್ತಾಹ ಉದ್ಘಾಟನೆ ಮಾಡಿದರು. ಏಳು ದಿವಸ ವ್ಯವಸ್ಥಿತವಾಗಿ ಕಾರ್ಯಕ್ರಮ ಆಚರಣೆ ಮಾಡಲಾಗುತ್ತದೆ ಎಂದರು.

- Advertisement -

ಎಲ್ಲಾ ಕ್ಷೇತ್ರದಲ್ಲಿ ಸಹಕಾರ ಕ್ಷೇತ್ರ ಮುಂಚೂಣಿಯಲ್ಲಿದೆ. ಭಾರತದಲ್ಲಿ ಕರ್ನಾಟಕ ಎರಡನೇ ಮುಂಚೂಣಿ ರಾಜ್ಯವಾಗಿರುವುದು ನಮ್ಮೆಲ್ಲರ ಹೆಮ್ಮೆ. ಠೇವಣಿದಾರರ ವಿಶ್ವಾಸ ಉಳಿಸಿಕೊಂಡು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಹೇಳಿದರು.

ರಾಜ್ಯದಲ್ಲಿನ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್ ಗಳಲ್ಲಿ ಬಹುತೇಕ ಬ್ಯಾಂಕುಗಳು ಎ ಶ್ರೇಣಿ ಹೊಂದಿರುವುದರ ಜೊತೆಗೆ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿವೆ. ಕ್ರೆಡಿಟ್ ಸೊಸೈಟಿ, 21 ಡಿಸಿಸಿ ಬ್ಯಾಂಕ್ ಕೂಡ ಲಾಭದಲ್ಲಿದ್ದು, ಸಾವಿರಾರು ಜನರಿಗೆ ಉದ್ಯೋಗ, ಲಕ್ಷಾಂತರ ರೈತರಿಗೆ ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ ಎಂದು ವಿವರಿಸಿದರು.

3 ಲಕ್ಷ ಹೊಸ ರೈತರು ಸೇರಿದಂತೆ 33 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂ. ಸಾಲವನ್ನು ಶೂನ್ಯ ಬಡ್ಡಿ ದರದಲ್ಲಿ ಈ ವರ್ಷ ವಿತರಣೆ ಮಾಡಲಾಗುತ್ತಿದೆ. ವರ್ಷದಿಂದ ವರ್ಷಕ್ಕೆ ಸಾಲ ವಿತರಣೆ ಪ್ರಮಾಣ ಹೆಚ್ಚಳ ಮಾಡಲಾಗುತ್ತಿದೆ ಎಂದರು.

ಸಹಕಾರಿಗಳ ಬೇಡಿಕೆಯಂತೆ ಯಶಸ್ವಿನಿ ಯೋಜನೆಯನ್ನು ಮರುಜಾರಿ ಮಾಡಲಾಗುತ್ತಿದೆ. ಯಶಸ್ವಿನಿ ಜನಪ್ರಿಯ ಯೋಜನೆಯಾಗಿದ್ದು, ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿ ಆಗಿದ್ದಾಗ ಈ ಯೋಜನೆ ಜಾರಿಗೊಳಿಸಿದರು. ಕಾರಣಾಂತರಗಳಿಂದ ಆರೋಗ್ಯ ಇಲಾಖೆ ಜೊತೆ ಯಶಸ್ವಿನಿ ವಿಲೀನವಾಯಿತು. ರಾಜ್ಯದ ಪ್ರವಾಸದ ಸಂದರ್ಭದಲ್ಲಿ ಎಲ್ಲೆಡೆ ಯಶಸ್ವಿನಿ ಯೋಜನೆ ಮರುಜಾರಿಗೆ ಒತ್ತಾಯ ಕೇಳಿಬಂದಿತು. ಮುಖ್ಯಮಂತ್ರಿಗಳು ಈ ಯೋಜನೆಯನ್ನು ಮರುಜಾರಿ ಮಾಡಿ, 14ರಂದು ಚಾಲನೆ ನೀಡಿದ್ದಾರೆ. ಈ ಯೋಜನೆಯಿಂದ ಎಲ್ಲಾ ಸಹಕಾರಿಗಳಿಗೆ ಅನುಕೂಲವಾಗಲಿದೆ ಎಂದರು.

ರಾಜ್ಯದಲ್ಲಿ 15 ಹಾಲು ಒಕ್ಕೂಟಗಳಿದ್ದು, ಸುಮಾರು 25 ಲಕ್ಷಕ್ಕೂ ಅಧಿಕ ರೈತರು ಹಾಲು ಪೂರೈಕೆ ಮಾಡುತ್ತಿದ್ದಾರೆ. ಹಾಲು ಪೂರೈಸುವ ರೈತರಿಗೆ ಆರ್ಥಿಕವಾಗಿ ಅನುಕೂಲ ಕಲ್ಪಿಸಲು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ ಮಾಡಲಾಗುತ್ತಿದೆ. ಬ್ಯಾಂಕ್ ಸ್ಥಾಪನೆ ಸಂಬಂಧ ನ.25ಕ್ಕೆ ಆರ್ ಬಿಐ ಜೊತೆಗೆ ಸಭೆ ನಿಗದಿಯಾಗಿದ್ದು, ಇದಕ್ಕೆ ಚಾಲನೆ ಸಿಗುವ ವಿಶ್ವಾಸವಿದೆ ಎಂದು ಹೇಳಿದರು.

ನಬಾರ್ಡ್ ನಿಂದ ನೀಡುವ ಸಾಲದ ಹಣ ದ್ವಿಗುಣ ಗೊಳಿಸಲು ಕ್ರಮವಹಿಸಲಾಗುತ್ತಿದೆ.  ಸಾಲ ಪಡೆದವರಿಗೆ ಕಿರುಕುಳ ನೀಡುತ್ತಿಲ್ಲ. ರೈತರು ಸರಿಯಾದ ಸಮಯಕ್ಕೆ ಸಾಲ  ಮರುಪಾವತಿ ಮಾಡುತ್ತಿದ್ದಾರೆ. 90% ಡಿಸಿಸಿ ಬ್ಯಾಂಕ್, ವಿಶೇಷವಾಗಿ ಸ್ವಸಹಾಯ ಗುಂಪುಗಳಿಂದ 100% ಸಾಲ ಮರುಪಾವತಿ ಆಗುತ್ತಿದೆ ಎಂದು ಹೇಳಿದರು.

21 ಡಿಸಿಸಿ ಬ್ಯಾಂಕ್ ಗಳಲ್ಲಿ ಮಂಗಳೂರು ಡಿಸಿಸಿ ಬ್ಯಾಂಕ್ ನಂಬರ್ ಒನ್ ಸ್ಥಾನದಲ್ಲಿದೆ. ಸಹಕಾರ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ ಸಹಕಾರಿ ಗಣ್ಯರಿಗೆ ಗೌರವ ಸಲ್ಲಿಸುವುದರ ಜೊತೆಗೆ ಪ್ರತಿವರ್ಷ ಸಹಕಾರ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ ಎಂದರು.

 ಮಾಜಿ ಸಚಿವ  ಯು. ಟಿ. ಖಾದರ್ ಮಾತನಾಡಿ, ಕಾರ್ಯಕ್ರಮವು ಇಡೀ ಕರಾವಳಿಗೆ ತುರಾಯಿಯಂತೆ ಆಗಿದೆ. ಹತ್ತು ಕೈಗಳು ಒಂದಾಗಿ ದುಡಿದರೆ ಅದೇ ಸಹಕಾರ. ಜಿಲ್ಲೆಯಲ್ಲಿ ಸಹಕಾರ ಎಂಬುದು ಬೇರೆಲ್ಲಿಗಿಂತ ಜೀವಂತವಾಗಿದೆ. ಸಹಕಾರ ಕ್ಷೇತ್ರ ರಾಜ್ಯದ್ದು, ಅದನ್ನು ಕೇಂದ್ರ ಕಸಿಯದಂತೆ ನೋಡಿಕೊಳ್ಳಿ ಎಂದು ಅವರು ಹೇಳಿದರು.

ಕಾರ್ಯಕ್ರಮದಲ್ಲಿ ರಾಜ್ಯ ಸಹಕಾರ ಮಾರಾಟ ಮಂಡಳಿ ಅಧ್ಯಕ್ಷರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಎಂ.ಎನ್. ರಾಜೇಂದ್ರ ಕುಮಾರ್, ಶಾಸಕರಾದ ವೇದವ್ಯಾಸ ಡಿ. ಕಾಮತ್, ಯು.ಟಿ.ಖಾದರ್, ಕ್ಯಾಂಪ್ಕೋ ಅಧ್ಯಕ್ಷರಾದ ಕಿಶೋರ್ ಕುಮಾರ್ ಕೂಡ್ಗಿ, ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷರಾದ ಕೆ.ಪಿ.ಸುಚರಿತ ಶೆಟ್ಟಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಮಹಾಮಂಡಳದ ಅಧ್ಯಕ್ಷರಾದ ಯಶ್ ಪಾಲ್ ಎ.ಸುವರ್ಣ, ಸಹಕಾರ ಸಂಘಗಳ ನಿಬಂಧಕರಾದ ಕ್ಯಾಪ್ಟನ್ ಡಾ. ಕೆ.ರಾಜೇಂದ್ರ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Join Whatsapp