ಮಕ್ಕಳು, ಗರ್ಭಿಣಿಯರ ಪೌಷ್ಟಿಕ ಆಹಾರದಲ್ಲಿ ಹಣ ಮಾಡಲು ಹೊರಟ ಜೊಲ್ಲೆ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

Prasthutha|

ಬೆಂಗಳೂರು, ಜು.24: ‘ರಾಜ್ಯದಲ್ಲಿ ಅಪೌಷ್ಟಿಕತೆ ನೀಗಿಸಲು ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡಲಾಗುವ ಮೊಟ್ಟೆಯಲ್ಲೂ ದುಡ್ಡು ಮಾಡಲು ಅಮಾನವೀಯ ಹೆಜ್ಜೆ ಇಟ್ಟುವ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಅವರು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಈ ಪ್ರಕರಣದ ತನಿಖೆಯಾಗಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

- Advertisement -

ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಮಾಜಿ ಸಚಿವೆ ಉಮಾಶ್ರೀ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಕಾಂಗ್ರೆಸ್ ಯುವನಾಯಕಿ ಕುಸುಮಾ ಹನುಮಂತರಾಯಪ್ಪ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಈ ವಿಚಾರವನ್ನು ಪ್ರಸ್ತಾಪಿಸಿದರು.
ಈ ವೇಳೆ ಮಾತನಾಡಿದ ಉಮಾಶ್ರೀ, ‘ಮಕ್ಕಳು, ಗರ್ಭಿಣಿಯರ ಆರೋಗ್ಯ ಕಾಪಾಡಲು ಸರ್ಕಾರದ ವತಿಯಿಂದ ನೀಡಲಾಗುವ ಮೊಟ್ಟೆಯಲ್ಲಿ ಹಣ ಮಾಡಿ ಬದುಕುವ ದುಸ್ಥಿತಿ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಬಂದಿದೆಯಾ?’ ಎಂದು ಪ್ರಶ್ನಿಸಿದರು.

‘ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಡ, ದಲಿತ ವರ್ಗದ ಮಹಿಳೆಯರು ಹಾಗೂ ಮಕ್ಕಳಲ್ಲಿನ ಅಪೌಷ್ಠಿಕತೆ ದೂರ ಮಾಡಲು ಅವರಿಗೆ ಮೊಟ್ಟೆ ನೀಡಲು ಯೋಜನೆ ರೂಪಿಸಿತ್ತು. ಆದರೆ ಈ ಮೊಟ್ಟೆಯಿಂದ ಕೋಟ್ಯಂತರ ರೂಪಾಯಿ ಕಮಿಷನ್ ಪಡೆಯುವ ಹುನ್ನಾರ ನಡೆಯುತ್ತಿರುವುದು ದುರಾದೃಷ್ಟಕರ. ಒಬ್ಬ ಸಚಿವೆಯೇ ಈ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದು ಅದಕ್ಕೆ ದಾರಿ ಮಾಡಿಕೊಟ್ಟಿರುವುದು ದುಃಖದ ಸಂಗತಿ. ಅವರು ಕೂಡ ತಾಯಿಯಾಗಿ ಈ ರೀತಿ ನಡೆದುಕೊಳ್ಳಲು ಸಾಧ್ಯವೇ? ಇದು ಮಹಿಳೆಯರು ಮತ್ತು ಮಕ್ಕಳಿಗೆ ಮಾಡಿದ ದೊಡ್ಡ ದ್ರೋಹ’ ಎಂದು ಟೀಕಿಸಿದರು.

- Advertisement -

‘ಇಂದು ಗರ್ಭಿಣಿಯರು ರಕ್ತಸ್ರಾವ, ರಕ್ತ ಹೀನತೆಯಿಂದ ಸಾಯುತ್ತಿದ್ದಾರೆ. ಇದನ್ನು ತಡೆಯಲು ಮಹಿಳೆಗೆ ಗರ್ಭಾವಸ್ಥೆಯಲ್ಲೇ ಪೌಷ್ಠಿಕ ಆಹಾರ ನೀಡಬೇಕು ಎಂದು ಕಾಂಗ್ರೆಸ್ ಕಾಂಗ್ರೆಸ್ ಮಾತೃಪೂರ್ಣ ಯೋಜನೆ ಜಾರಿಗೆ ತರಲಾಗಿತ್ತು. ಈ ಯೋಜನೆಯಲ್ಲೂ ಭ್ರಷ್ಟಾಚಾರ ನಡೆಸುವುದು ಸರಿಯೇ? ಈ ಹಿಂದೆ ಯಡಿಯೂರಪ್ಪ ಅವರ ಸರ್ಕಾರದಲ್ಲೇ ಇಲಾಖೆ ಯೋಜನೆಯಲ್ಲಿ ಕಂಟ್ರಾಕ್ಟರ್ ಗಳಿಗೆ ನೀಡುವ ವಿಚಾರವಾಗಿ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಇಲಾಖೆ ವಿಚಾರದಲ್ಲಿ ಟೆಂಡರ್ ಮೂಲಕವೇ ನಡೆಸಬೇಕು ಎಂದು ತೀರ್ಪು ನೀಡಿತ್ತು. ಆದರೂ ಸಚಿವರು ಟೆಂಡರ್ ಕರೆಯುವ ಮುನ್ನವೇ ಗುತ್ತಿಗೆದಾರರ ಬಳಿ ಕಮಿಷನ್ ಪಡೆಯಲು ಮುಂದಾಗಿದ್ದಾರೆ. ಇದು ನ್ಯಾಯಾಲಯ ತೀರ್ಪಿನ ಉಲ್ಲಂಘನೆಯಾಗಿದೆ’ ಎಂದರು.

ರಾಜೀನಾಮೆ ನೀಡಬೇಕು: ಪುಷ್ಪಾ ಅಮರನಾಥ್
ನಂತರ ಮಾತನಾಡಿದ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರು, ‘ಮಕ್ಕಳು ಹಾಗೂ ಗರ್ಭಿಣಿಯರ ಪೌಷ್ಠಿಕ ಆಹಾರವನ್ನು ದುರ್ಬಳಕೆ ಮಾಡಿಕೊಂಡು ತಮ್ಮ ಪಕ್ಷದ ಲೇಬಲ್ ಹಾಕಿಕೊಂಡ ಬಿಜೆಪಿ ನಾಯಕರು ಇಂದು ಗರ್ಭಿಣಿಯರು ಹಾಗೂ ಮಕ್ಕಳಿಗೆ ನೀಡುವ ಮೊಟ್ಟೆಯಲ್ಲಿ ದುಡ್ಡು ಮಾಡಲು ಹೊರಟಿರುವುದು ನಾಚಿಕೆಗೇಡಿನ ವಿಚಾರ. ಹೀಗಾಗಿ ಶಶಿಕಲಾ ಜೊಲ್ಲೆ ಅವರು ಹಾಗೂ ಶಾಸಕ ಪರಣ್ಣ ಮುನವಳ್ಳಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಮಹಿಳಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸುವಂತೆ ನಾವು ಸೂಚನೆ ನೀಡಿದ್ದೇವೆ ಎಂದು ಆಗ್ರಹಿಸಿದ್ದಾರೆ.

‘ಕಾಂಗ್ರೆಸ್ ಸರ್ಕಾರ ಏನು ಮಾಡಿದೆ ಎಂದು ಕೇಳುವ ಬಿಜೆಪಿ ನಾಯಕರು ಹಾಗೂ ನಾ ಖಾವೂಂಗಾ, ನಾ ಖಾನೇ ದೂಂಗ ಎನ್ನುವ ಪ್ರಧಾನಮಂತ್ರಿಗಳೇ ಈ ಪ್ರಕರಣದ ಬಗ್ಗೆ ಏನು ಹೇಳುತ್ತೀರಿ. ಬೇಲಿಯೇ ಎದ್ದು ಹೊಲ ಮೇಯ್ದ ಹಾಗೆ ಸಚಿವರುಗಳೇ ಇಲಾಖೆಗಳಲ್ಲಿ ಹಣವನ್ನು ಗುಡಿಸಿಹಾಕುತ್ತಿದ್ದಾರೆ. ಈ ಬಗ್ಗೆ ಏನು ಹೇಳುತ್ತೀರಿ? ಮಾತೃ ಪೂರ್ಣ ಯೋಜನೆಯನ್ನು ಮಾತೃ ಅಪೂರ್ಣ ಮಾಡಲು ಸಚಿವರು ಹೊರಟಿದ್ದು, ಇದು ಮಕ್ಕಳು ಹಾಗೂ ಗರ್ಭಿಣಿಯರಿಗೆ ಮಾಡಿರುವ ದ್ರೋಹ. ಹೀಗಾಗಿ ಅವರ ತಲೆದಂಡ ಆಗಲೇಬೇಕು’ ಎಂದು ಒತ್ತಾಯಿಸಿದರು.

ಶಶಿಕಲಾ ಜೊಲ್ಲೆ ಅವರು ರಾಜೀನಾಮೆ ನೀಡುವವರೆಗೂ ಅವರಿಗೆ ನಿತ್ಯ ಮೊಟ್ಟೆ ನೀಡುವ ಹೋರಾಟ: ಕುಸುಮಾ
‘ಇನ್ನು ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವ ಸಚಿವೆ ಶಶಿಕಲಾ ಜೊಲ್ಲೆ ಅವರು ರಾಜೀನಾಮೆ ನೀಡುವವರೆಗೂ ಸಚಿವರ ಮನೆಗೆ ನಿತ್ಯ ಮೊಟ್ಟೆ ನೀಡುವ ಹೋರಾಟವನ್ನು ಹಮ್ಮಿಕೊಂಡಿರುವುದಾಗಿ’ ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಅವರು ತಿಳಿಸಿದ್ದಾರೆ.

‘ಇಂದು ಟೋಕಿಯೋ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ವೇಟ್ ಲಿಫ್ಟರ್ ಮೀರಾಬಾಯಿ ಚಾನು ಅವರು ಬೆಳ್ಳಿ ಪದಕ ಗೆದ್ದು ನಾವೆಲ್ಲರು ಹೆಮ್ಮೆ ಪಡುವಂತೆ ಮಾಡಿದ್ದಾರೆ. ಆದರೆ ರಾಜ್ಯದ ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಸಚಿವೆಯಾದ ಶಶಿಕಲಾ ಜೊಲ್ಲೆ ಅವರು ಗರ್ಭಿಣಿಯರು ಹಾಗೂ ಮಕ್ಕಳ ಪೌಷ್ಠಿಕತೆ ಹೆಚ್ಚಿಸಲು ನೀಡಲಾಗುವ ಮೊಟ್ಟೆಯಲ್ಲಿ ಹಣ ಮಾಡಲು ಮುಂದಾಗಿರುವುದು ರಾಜ್ಯವೇ ತಲೆತಗ್ಗಿಸುವಂತೆ ಮಾಡಿರುವುದು ದುರಂತ’ ಎಂದರು.

Join Whatsapp