Home ಟಾಪ್ ಸುದ್ದಿಗಳು ದಲಿತರಿಂದ ಬೌದ್ಧ ಧರ್ಮಕ್ಕೆ ಮತಾಂತರ: ದೆಹಲಿ ಮುಖ್ಯಮಂತ್ರಿ, ಸಚಿವರ ವಿರುದ್ಧ ಬಿಜೆಪಿ ದೂರು ದಾಖಲು

ದಲಿತರಿಂದ ಬೌದ್ಧ ಧರ್ಮಕ್ಕೆ ಮತಾಂತರ: ದೆಹಲಿ ಮುಖ್ಯಮಂತ್ರಿ, ಸಚಿವರ ವಿರುದ್ಧ ಬಿಜೆಪಿ ದೂರು ದಾಖಲು

ನವದೆಹಲಿ: ದಲಿತರ ಬೌದ್ಧ ಧರ್ಮಕ್ಕೆ ಮತಾಂತರಗೊಂಡ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ದೆಹಲಿ ಘಟಕವು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಕ್ಯಾಬಿನೆಟ್ ಸಚಿವ ರಾಜೇಂದ್ರ ಪಾಲ್ ಗೌತಮ್ ವಿರುದ್ಧ ದೂರು ನೀಡಿದೆ.

ಘಟನೆಗೆ ಸಂಬಂಧಿಸಿದಂತೆ ದೆಹಲಿಯ ಬಿಜೆಪಿ ಅಧ್ಯಕ್ಷ ಆದೇಶ ಗುಪ್ತಾ ಅವರು ದೆಹಲಿ ಮುಖ್ಯಮಂತ್ರಿ ಮತ್ತು ಕ್ಯಾಬಿನೆಟ್ ಸಚಿವ ರಾಜೇಂದ್ರ ಪಾಲ್ ಗೌತಮ್ ವಿರುದ್ಧ ಹಿಂದೂ ದೇವರ ವಿರುದ್ಧ ಘೋಷಣೆ ಕೂಗಿದ ಆರೋಪದಲ್ಲಿ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ನಿಟ್ಟಿನಲ್ಲಿ ದೆಹಲಿ ಪೊಲೀಸರು ಐಪಿಸಿ ಸೆಕ್ಷನ್ 153ಎ, 153ಬಿ, 295ಎ, 298, 505, 506 ಅಡಿಯಲ್ಲಿ ಪ್ರಕರಣ ದಾಖಲಿಸುವಂತೆ ಗುಪ್ತಾ ಅವರು ದೆಹಲಿಗೆ ಪೊಲೀಸರನ್ನು ಆಗ್ರಹಿಸಿದ್ದಾರೆ.

ಇತ್ತೀಚೆಗೆ ದೆಹಲಿಯ ಅಂಬೇಡ್ಕರ್ ಭವನದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಎಎಪಿ ಸಚಿವ ರಾಜೇಂದ್ರ ಪಾಲ್ ಗೌತಮ್ ಅವರ ನೇತೃತ್ವದಲ್ಲಿ ಸುಮಾರು 10 ಸಾವಿರಕ್ಕೂ ಅಧಿಕ ದಲಿತರು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿದ್ದರು. ಈ ವೇಳೆ ಹಿಂದೂ ಧರ್ಮದ ದೇವರು, ದೇವತೆಗಳ ವಿರುದ್ಧ ಘೋಷಣೆ ಕೂಗಲಾಗಿತ್ತು ಎಂದು ಆರೋಪಿಸಿ ಬಿಜೆಪಿ ದೂರು ನೀಡಿದೆ.

ಘಟನೆಗೆ ಪ್ರತಿಕ್ರಿಯಿಸಿದ ದೆಹಲಿ ಪೊಲೀಸರು, ಬಿಜೆಪಿ ನೀಡಿದ ದೂರಿನ ಬಗ್ಗೆ ಪರಿಶೀಲನೆ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Join Whatsapp
Exit mobile version