ಟಿಪ್ಪು ಜಯಂತಿ ಕುರಿತ ಟ್ವೀಟ್ | ಅನಂತ್ ಕುಮಾರ್ ಹೆಗಡೆ, ಸಿ.ಟಿ.ರವಿ ವಿರುದ್ಧ ದೂರು ಪರಿಗಣಿಸಲು ಹೈಕೋರ್ಟ್ ಸೂಚನೆ

Prasthutha|

- Advertisement -

- Advertisement -

ಟಿಪ್ಪು ಸುಲ್ತಾನ್ ಜಯಂತಿ ಕುರಿತು ವಿವಾದಾತ್ಮಕ ಟ್ವೀಟ್‌ ಮಾಡಿದ್ದ ಸಂಸದ ಅನಂತ್ ಕುಮಾರ್ ಹೆಗಡೆ ಮತ್ತು ಬಿಜೆ‍ಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರ ವಿರುದ್ಧದ ದೂರನ್ನು ಹೊಸದಾಗಿ ಪರಿಗಣಿಸುವಂತೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

2017ರಲ್ಲಿ ರಾಜ್ಯ ಸರ್ಕಾರ ಆಯೋಜಿಸಿದ್ದ ಟಿಪ್ಪು ಜಯಂತಿ ಸಂದರ್ಭದಲ್ಲಿ ಆಚರಣೆಯನ್ನು ಬಹಿಷ್ಕರಿಸುವ ವಿವಾದಾತ್ಮಕ ಟ್ವೀಟ್‌ಗಳನ್ನು ಮಾಡಿದ್ದರು. ಜೊತೆಗೆ 18 ನೇ ಶತಮಾನದ ಮೈಸೂರು ರಾಜ ಟಿಪ್ಪು ಸುಲ್ತಾನ್ ವಿರುದ್ಧ ಮಾಡಿದ ಆರೋಪಗಳಿಗೆ ಸಂಬಂಧಿಸಿದ್ದ ದೂರನ್ನು ಕೆಳ ನ್ಯಾಯಾಲಯವು ಈ ಹಿಂದೆ ವಜಾಗೊಳಿಸಿತ್ತು.

ಈ ಸಂಬಂಧ ಆರ್‌ಟಿಐ ಕಾರ್ಯಕರ್ತ ಎ.ಆಲಂ ಪಾಷಾ, ಶಾಸಕರ ವಿರುದ್ಧ ಖಾಸಗಿ ದೂರು ದಾಖಲಿಸಿದ್ದರು. ದೂರಿಗೆ ಸಾಕ್ಷಿಯಾಗಿ ನವೆಂಬರ್ 10, 2017 ರಂದು ನಿಗದಿಯಾಗಿದ್ದ ಟಿಪ್ಪು ಜಯಂತಿ ಆಚರಣೆ ಬಗ್ಗೆ ಅಕ್ಟೋಬರ್ 22, 2017 ರಂದು ಹೆಗಡೆ ಮತ್ತು ಸಿ.ಟಿ ರವಿ ಅವರ ವಿವಾದಾತ್ಮಕ ಟ್ವೀಟ್‌ಗಳನ್ನು ಒಳಗೊಂಡಿರುವ ಸುದ್ದಿ ವರದಿಯನ್ನು ಉಲ್ಲೇಖಿಸಿದ್ದಾರೆ.

ಧರ್ಮಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಈ ಹೇಳಿಕೆಗಳು ಭಾರತೀಯ ದಂಡ ಸಂಹಿತೆಯ ವಿವಿಧ ನಿಬಂಧನೆಗಳ ಅಡಿಯಲ್ಲಿ ಅಪರಾಧಗಳಾಗಿವೆ ಎಂದು ಪಾಷಾ ತನಿಖೆಗೆ ಕೋರಿದ್ದರು. ಆದರೆ, 10 ನೇ ಎಸಿಎಂ ನ್ಯಾಯಾಲಯ ನವೆಂಬರ್ 4, 2017 ರಂದು ದೂರನ್ನು ತಳ್ಳಿಹಾಕಿತ್ತು.

ಆ ಸಮಯದಲ್ಲಿ ಹೆಗಡೆ ಕೇಂದ್ರ ಸಚಿವರಾಗಿದ್ದರು. ಪಿಸಿಆರ್ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್, ಅರ್ಜಿದಾರರು ದೂರು ದಾಖಲಿಸುವ ಮುನ್ನ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ಹೀಗಾಗಿ, ದೂರು ವಿಚಾರಣೆಗೆ ಅರ್ಹವಲ್ಲ ಎಂದು ಅರ್ಜಿ ತಿರಸ್ಕರಿಸಿತ್ತು. ‘ಅಪರಾಧ ದಂಡ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 156 (ಸಿ) ಪ್ರಕಾರ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ. ಈ ವಿಷಯವನ್ನು ಸಂಬಂಧಿಸಿದ ನ್ಯಾಯಾಲಯಕ್ಕೆ ರವಾನಿಸಲಾಗಿದೆ. ಕಾನೂನಿನ ಪ್ರಕಾರ ಹೊಸ ದೂರನ್ನು ಪರಿಗಣಿಸುವಂತೆ ತಿಳಿಸಿದೆ ಎಂದು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಅವರ ಪೀಠ ತಿಳಿಸಿದೆ.

Join Whatsapp