ದಕ್ಷಿಣ ಕನ್ನಡ ಲೋಕಸಭೆ | ಜನಾರ್ದನ ಪೂಜಾರಿ ಶಿಷ್ಯ ಪದ್ಮರಾಜ್ ರಾಮಯ್ಯ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಖಚಿತ

Prasthutha|

►ಜನಾರ್ದನ ಪೂಜಾರಿಯಿಂದ ಕಳೆದುಕೊಂಡ ಕ್ಷೇತ್ರವನ್ನು ಅವರ ಶಿಷ್ಯನ ಮೂಲಕ ಪಡೆದುಕೊಳ್ಳಬೇಕೆಂಬ ಹಂಬಲ

- Advertisement -

►ಬಿಜೆಪಿಯ ಭದ್ರಕೋಟೆಯಲ್ಲಿ ಬಿಲ್ಲವ-ಮುಸ್ಲಿಂ ಮತಮೈತ್ರಿ ಸಾಧಿಸಲು ಕಾಂಗ್ರೆಸ್ ಪ್ಲ್ಯಾನ್

►ನಾಳೆ ಮಂಗಳೂರು ಕಾಂಗ್ರೆಸ್ ಸಮಾವೇಶದಲ್ಲೇ ಪದ್ಮರಾಜ್ ರಾಮಯ್ಯ ಹೆಸರು ಘೋಷಣೆಯಾಗುವ ಸಾಧ್ಯತೆ

- Advertisement -

ಮಂಗಳೂರು : ಮುಂದಿನ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಹೆಚ್ಚು ಕ್ಷೇತ್ರಗಳನ್ನು ಗೆಲ್ಲಬೇಕೆಂದು ಪಣತೊಟ್ಟಿರುವ ಕಾಂಗ್ರೆಸ್ ಪಕ್ಷ 28 ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಬಿರುಸುಗೊಳಿಸಿದೆ. ಬಿಜೆಪಿ ಹಿಡಿತದಲ್ಲಿರುವ ಪ್ರಮುಖ ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿರುವ ಕಾಂಗ್ರೆಸ್, ದಕ್ಷಿಣ ಕನ್ನಡ ಸೇರಿದಂತೆ ಕೆಲ ಕ್ಷೇತ್ರಗಳಲ್ಲಿ ಹೊಸ ಪ್ರಯೋಗಕ್ಕೂ ಮುಂದಾಗಿದೆ. ಅದರ ಭಾಗವಾಗಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ಹೊಸ ಮುಖವನ್ನು ಕಣಕ್ಕಿಳಿಸಲು ಕಾಂಗ್ರೆಸ್ ಹೈಕಮಾಂಡ್ ಮತ್ತು ಕೆಪಿಸಿಸಿ ತೀರ್ಮಾನಿಸಿದೆ ಎಂದು ತಿಳಿದುಬಂದಿದೆ. ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರ ಶಿಷ್ಯ ಪದ್ಮರಾಜ್ ರಾಮಯ್ಯ ಅವರು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗುವುದು ಬಹುತೇಕ ಖಚಿತ ಎಂದು ಪ್ರಸ್ತುತ ನ್ಯೂಸ್ ಗೆ ಮೂಲಗಳಿಂದ ಮಾಹಿತಿ ಸಿಕ್ಕಿದೆ.

ಜನಾರ್ದನ ಪೂಜಾರಿಯವರ ಪ್ರೀತಿಯ ಶಿಷ್ಯನಾಗಿರುವ ಪದ್ಮರಾಜ್ ಅವರು ವೃತ್ತಿಯಲ್ಲಿ ವಕೀಲರಾಗಿದ್ದು ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ ಮತ್ತು ರಾಜಕೀಯ ರಂಗದಲ್ಲಿ ತೊಡಗಿಸಿಕೊಂಡಿದ್ದಾರೆ. ಮಂಗಳೂರಿನ ಪ್ರಸಿದ್ಧ ಕುದ್ರೋಳಿ ಗೋಕರ್ಣನಾಥ ದೇವಾಲಯದ ಆಡಳಿತ ಸಮಿತಿಯ ಖಜಾಂಚಿ ಆಗಿರುವ ಅವರು ಮಂಗಳೂರಿನ ಪ್ರಸಿದ್ಧ ದಸರಾ ಕೂಟದ ರೂವಾರಿ ಎನಿಸಿಕೊಂಡಿದ್ದಾರೆ. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಜಿಲ್ಲೆಯಲ್ಲಿ ಪಕ್ಷವನ್ನು ಸಂಘಟಿಸುತ್ತಿದ್ದಾರೆ. ದ.ಕ ಜಿಲ್ಲೆಯ ಬಹುಸಂಖ್ಯಾತ ಬಿಲ್ಲದ ಸಮುದಾಯದ ನಂಬಿಕಸ್ಥ ಮುಖವಾಗಿರುವ ಪದ್ಮರಾಜ್ ರಾಮಯ್ಯ, ಎಲ್ಲಾ ಜಾತಿ ಧರ್ಮಗಳ ಜನರ ಜೊತೆ ಉತ್ತಮ ಬಾಂಧವ್ಯ, ಒಡನಾಟ ಇಟ್ಟುಕೊಂಡಿದ್ದಾರೆ. ಜಿಲ್ಲೆಯನ್ನು ಕೋಮು ಸಾಮರಸ್ಯದ ಕಡೆಗೆ ತರಲು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ.  ಈ ಎಲ್ಲಾ ಮಾನದಂಡ, ಅರ್ಹತೆ ಪರಿಗಣಿಸಿ ಪದ್ಮರಾಜ್ ಅವರ ಹೆಸರು ಆಕಾಂಕ್ಷಿಗಳ ಪಟ್ಟಿಯಲ್ಲಿ ಹೈಕಮಾಂಡ್ ಗೆ ರವಾನೆಯಾಗಿತ್ತು. ಮಾಜಿ ಸಚಿವ ರಮನಾಥ ರೈ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ನಾಯಕರು ಪದ್ಮರಾಜ್ ಅವರನ್ನು ಬೆಂಬಲಿಸಿದ್ದರು.

ಕಾಂಗ್ರೆಸ್ ವೀಕ್ಷಕರ ವರದಿಯಂತೆ ಕೆಪಿಸಿಸಿಯಿಂದ ಪದ್ಮರಾಜ್ ಮತ್ತು ವಿನಯ್ ಕುಮಾರ್ ಸೊರಕೆ ಹೆಸರು ಹೈಕಮಾಂಡ್ ಗೆ ರವಾನಿಸಿದ್ದು, ಹೈಕಮಾಂಡ್ ನಾಯಕರು ಪದ್ಮರಾಜ್ ಪರ ಒಲವು ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಚುನಾವಣೆಗೆ ಸ್ಪರ್ಧಿಸಲು ಸಜ್ಜಾಗುವಂತೆ ಕ್ಷೇತ್ರದಲ್ಲಿ ತಯಾರಿ ಆರಂಭಿಸುವಂತೆ ಹೈಕಮಾಂಡ್ ನಾಯಕರು ಮತ್ತು ಕೆಪಿಸಿಸಿ ಅಧ್ಯಕ್ಷರು ಪದ್ಮರಾಜ್ ಪದ್ಮರಾಜ್ ಅವರಿಗೆ ಸೂಚನೆ ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಾಳೆ ಮಂಗಳೂರು ಹೊರವಲಯದ ಅಡ್ಯಾರ್ ನಲ್ಲಿ ನಡೆಯಲಿರುವ ಕಾಂಗ್ರೆಸ್ ಸಮಾವೇಶದಲ್ಲೇ ಪದ್ಮರಾಜ್ ರಾಮಯ್ಯ ಹೆಸರು ಘೋಷಣೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಒಂದು ಕಾಲದಲ್ಲಿ ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿತ್ತು. ಜನಾರ್ದನ ಪೂಜಾರಿಯವರ ಹಿಡಿತದಲ್ಲಿದ್ದ ಈ ಕ್ಷೇತ್ರ ಬದಲಾದ ಕಾಲಘಟ್ಟದಲ್ಲಿ ಕಾಂಗ್ರೆಸ್ ಕೈತಪ್ಪಿ ಹೋಗಿತ್ತು. ಮತೀಯ ರಾಜಕಾರಣದಿಂದಾಗಿ ಕಳೆದ 3 ದಶಕದಿಂದ ಬಿಜೆಪಿ ಹಿಡಿತದಲ್ಲಿರುವ ಈ ಕ್ಷೇತ್ರ ಬಿಜೆಪಿಯ ಭದ್ರಕೋಟೆ ಎಂದು ಕರೆಸಿಕೊಳ್ಳುತ್ತಿದೆ. ಬಿಜೆಪಿಯ ಈ ಭದ್ರಕೋಟೆಯನ್ನು ಭೇದಿಸುವ ಪ್ರಯತ್ನದಲ್ಲಿರುವ ಕಾಂಗ್ರೆಸ್ ಪಕ್ಷ, ಜನಾರ್ದನ ಪೂಜಾರಿ ಅವರ ಕೈಯಿಂದ ಕಳೆದುಕೊಂಡಿರುವ ಕ್ಷೇತ್ರವನ್ನು ಅವರ ಪ್ರೀತಿಯ ಶಿಷ್ಯನ ಮೂಲಕವೇ ಪಡೆದುಕೊಳ್ಳಲು ಪ್ಲ್ಯಾನ್ ಮಾಡಿಕೊಂಡಿದೆ ಎಂದು ತಿಳಿದುಬಂದಿದೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯನ್ನು ಸೋಲಿಸಬೇಕಾದರೆ ಜಿಲ್ಲೆಯಲ್ಲಿ ಬಹುಸಂಖ್ಯಾತರಾಗಿರುವ ಬಿಲ್ಲವರು ಮತಗಳನ್ನು ಸೆಳೆಯಬೇಕು. ಬಿಜೆಪಿ ಕಡೆ ವಾಲಿರುವ ಬಿಲ್ಲವರ ಮತಗಳನ್ನು ಕಾಂಗ್ರೆಸ್ ಕಡೆ ಸೆಳೆಯಬೇಕಾದರೆ ಅದಕ್ಕೆ ಸೂಕ್ತ ಅಭ್ಯರ್ಥಿ ಪದ್ಮರಾಜ್ ಎಂದು ಕಾಂಗ್ರೆಸ್ ಹೈಕಮಾಂಡ್ ಮನಗಂಡಿದೆ ಎನ್ನಲಾಗ್ತಿದೆ. ಬಿಲ್ಲವ-ಮುಸ್ಲಿಂ ಮತಗಳು ಒಂದುಗೂಡಿದರೆ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರವನ್ನು ಗೆಲ್ಲಬಹುದು ಎಂದು ಕಾಂಗ್ರೆಸ್ ಪದ್ಮರಾಜ್ ಅವರಿಗೆ ಮಣೆ ಹಾಕಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಪ್ರಸ್ತುತ ನ್ಯೂಸ್ ಪದ್ಮರಾಜ್ ಅವರನ್ನು ಸಂಪರ್ಕಿಸಿದಾಗ ಅವರು ಟಿಕೆಟ್ ಖಚಿತ ಆಗಿರುವ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. `ನಾನು ಕೂಡ ಆಕಾಂಕ್ಷಿ, ಪಕ್ಷ ಅವಕಾಶ ಕೊಟ್ಟರೆ ಸ್ಪರ್ಧಿಸಲು ತಯಾರಿದ್ದೇನೆ, ಪಕ್ಷ ಏನೇ ಆದೇಶ ಮಾಡಿದರೂ ಪಾಲಿಸುತ್ತೇನೆ’ ಎಂದರು. ರಾಜಕೀಯ ಸ್ಥಾನಮಾನ ಪಡೆಯುವುದಕ್ಕಿಂತ ಹೆಚ್ಚಾಗಿ ಮತೀಯ ಸೂಕ್ಷ್ಮ ಜಿಲ್ಲೆಯಾಗಿರುವ ದಕ್ಷಿಣ ಕನ್ನಡದಲ್ಲಿ ಕೋಮು ಸಾಮರಸ್ಯ ಮೂಡಿಸುವ ಕೆಲಸಗಳಿಗೆ ನನ್ನ ಮೊದಲ ಆದ್ಯತೆ ಎಂದು ಹೇಳಿದರು.

Join Whatsapp