ಹಳಿತಪ್ಪಿದ ಎಕ್ಸ್ ಪ್ರೆಸ್ ರೈಲು ದುರಂತ: ಮೃತರ ಸಂಖ್ಯೆ 7ಕ್ಕೆ ಏರಿಕೆ

Prasthutha|

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಜಲಪೈಗುರಿ ಜಿಲ್ಲೆಯ ದೊಮೊಹನಿ ಬಳಿ ನಿನ್ನೆ ಬಿಕಾನೇರ್-ಗುವಾಹಟಿ ಎಕ್ಸ್ ಪ್ರೆಸ್ ರೈಲಿನ 12 ಬೋಗಿಗಳು ಹಳಿತಪ್ಪಿ ಪಲ್ಟಿಯಾದ ದುರ್ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೇರಿದೆ. ಈ ಘಟನೆಯಲ್ಲಿ 45 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಕನಿಷ್ಠ 50 ಗಾಯಾಳುಗಳನ್ನು ರಕ್ಷಿಸಲಾಗಿದೆ ಮತ್ತು 10 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಗಾಯಗೊಂಡವರಲ್ಲಿ 24 ಮಂದಿಯನ್ನು ಜಲಪೈಗುರಿ ಜಿಲ್ಲಾ ಆಸ್ಪತ್ರೆಗೆ ಮತ್ತು 16 ಮಂದಿಯನ್ನು ಮೊಯ್ನಗುರಿ ಸರ್ಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ರೈಲ್ವೆ ಮೂಲಗಳು ತಿಳಿಸಿವೆ.
ಹಳಿ ತಪ್ಪಿದ ಕೋಚ್ ಗಳಲ್ಲಿ ಹಲವು ಪ್ರಯಾಣಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ಗ್ಯಾಸ್ ಕಟ್ಟರ್ ಗಳನ್ನು ಬಳಸಿ ಕೋಚ್ ಗಳನ್ನು ಕಟ್ ಮಾಡಿ ಪ್ರಯಾಣಿಕರನ್ನು ರಕ್ಷಿಸಲಾಗಿದೆ.
ಘಟನೆಯಲ್ಲಿ ಮೃತಪಟ್ಟವರಿಗೆ 5 ಲಕ್ಷ, ಗಂಭೀರವಾಗಿ ಗಾಯಗೊಂಡವರಿಗೆ 1 ಲಕ್ಷ, ಸಣ್ಣ ಪುಟ್ಟ ಗಾಯಗೊಂಡವರಿಗೆ 25,000 ರೂ. ಪರಿಹಾರ ಘೋಷಿಸಲಾಗಿದೆ.

Join Whatsapp