ನಿರ್ಮಲಾನಂದನಾಥ ಸ್ವಾಮಿ ಬಗ್ಗೆ ಅವಹೇಳನಕಾರಿ ಹೇಳಿಕೆ: ಕ್ಷಮೆಯಾಚಿಸಿದ ಅಡ್ಡಂಡ ಕಾರ್ಯಪ್ಪ

Prasthutha|

ಮೈಸೂರು: ಉರಿ ಗೌಡ, ನಂಜೇ ಗೌಡ ವಿಚಾರಕ್ಕೆ ಸಂಬಂಧಿಸಿದಂತೆ ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿಲ್ಲ. ಮಾಧ್ಯಮವೊಂದಕ್ಕೆ ನೀಡಿದ್ದ ಹೇಳಿಕೆಯನ್ನು ತಿರುಚಿ ಪ್ರಸಾರ ಮಾಡಲಾಗಿದೆ ಎಂದು ಮೈಸೂರು ರಂಗಾಯಣ ನಿರ್ದೇಶಕ ಅಡ್ಡಂಡ ಸಿ ಕಾರ್ಯಪ್ಪ ಸ್ಪಷ್ಟನೆ ನೀಡಿದ್ದಾರೆ.

- Advertisement -

ಆದಿಚುಂಚನಗಿರಿ ಶ್ರೀಗಳನ್ನು ಅಪಾರವಾಗಿ ಗೌರವಿಸುತ್ತೇನೆ. ನಮ್ಮ ಸಮುದಾಯಕ್ಕೆ ಸ್ವಾಮೀಜಿಯಿಲ್ಲ, ನಮಗೆ ಅವರೇ ಸ್ವಾಮೀಜಿ.. ನನ್ನ ವಿಚಾರದಲ್ಲಿ ಯಾರಿಗಾದರೂ ನೋವಾಗಿದ್ದರೆ ವಿಷಾದಿಸುತ್ತೇನೆ. ನಿರ್ಮಲಾನಂದನಾಥ ಸ್ವಾಮೀಜಿ ಅವರ ಬಳಿ ಕ್ಷಮೆ ಯಾಚಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಜತೆಗೆ, ಈ ವಿಚಾರಕ್ಕೆ ಸಂಬಂಧಿಸಿ ನನ್ನ ವಿರುದ್ಧ ಪ್ರತಿಭಟನೆ ಮಾಡಲು ಬಂದಿದ್ದವರು ಜೆಡಿಎಸ್ ಕಡೆಯವರು ಎಂಬ ಮಾಹಿತಿ ಲಭ್ಯವಾಗಿದೆ.

- Advertisement -

ಚುನಾವಣೆ ಸಮೀಪಿಸುತ್ತಿರುವುದರಿಂದ ಎಲ್ಲವನ್ನೂ ರಾಜಕೀಯಗೊಳಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ನನಗೆ ಒಕ್ಕಲಿಗರ ಮೇಲೆ ಅಪಾರ ಪ್ರೀತಿ, ಗೌರವ ಇದೆ. ನಿರ್ಮಲಾನಂದನಾಥ ಶ್ರೀಗಳು ನಮ್ಮ ನಾಡಿನ ಹೆಮ್ಮೆಯ ಸಂತರು. ಅವರ ವಿರುದ್ಧ ಆಗಲೀ ಅವರನ್ನು ಅವಮಾನಿಸುವಂತಹ ಹೇಳಿಕೆಯನ್ನಾಗಲೀ ನೀಡಿಲ್ಲ. ನನ್ನ ಹೇಳಿಕೆಯನ್ನು ರಾಜಕೀಯಕ್ಕಾಗಿ ತಿರುಚಲಾಗಿದೆ ಎಂದು ಅಡ್ಡಂಡ ಕಾರ್ಯಪ್ಪ ಹೇಳಿದ್ದಾರೆ.

Join Whatsapp