ಪಠ್ಯ ಪರಿಷ್ಕರಣೆ: ತನ್ನ ಪಾಠವನ್ನು ಕೈಬಿಡುವಂತೆ ದೇವನೂರು ಮಹಾದೇವ ಪತ್ರ

Prasthutha|

►► ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ

- Advertisement -

ಬೆಂಗಳೂರು: ರಾಜ್ಯ ಸರಕಾರದ ಪಠ್ಯ ಪರಿಷ್ಕರಣೆಗೆ ವಿರೋಧ ವ್ಯಕ್ತಪಡಿಸಿರುವ ಸಾಹಿತಿ ದೇವನೂರು ಮಹಾದೇವ ತನ್ನ ಪಾಠವನ್ನು ಕೈಬಿಡುವಂತೆ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಸಾಹಿತಿ ಮಹಾದೇವ, “ಹತ್ತನೆ ತರಗತಿ ಕನ್ನಡ ಪಠ್ಯಪುಸ್ತಕದಲ್ಲಿ ನನ್ನದೂ ಒಂದು ಕಥನ ಸೇರಿದೆ ಎನ್ನಲಾಗುತ್ತಿದೆ. ಪಠ್ಯದ ಪಿಡಿಎಫ್ ಬರಹಗಳನ್ನು ಇಲ್ಲ ಅಂತ, ಉಂಟು ಅಂತ, ಕೆಲವು ಸಲ ಸೇರಿದನ್ನು ಕೈ ಬಿಡುವುದು, ಮತ್ತೆ ಸೇರಿಸುವುದು ಇತ್ಯಾದಿ ಗಳಿಗೆ ಗಳಿಗೆಗೂ ಬದಲಾಗುತ್ತಿದೆ. ಇರಲಿ, ನನ್ನ ಕಥನದ ಭಾಗ ಪಠ್ಯದಲ್ಲಿ ಸೇರಿಸಿರದಿದ್ದರೆ ನನಗೆ ಹೆಚ್ಚು ಸಂತೋಷವಾಗುತ್ತದೆ. ಸೇರಿಸಿದರೆ ಅದಕ್ಕೆ ನನ್ನ ಒಪ್ಪಿಗೆ ಇಲ್ಲ ಎಂದು ಸ್ಪಷ್ಟಪಡಿಸುವುದಕ್ಕಾಗಿ ಈ ಪ್ರಕಟಣೆ ನೀಡುತ್ತಿದ್ದೇನೆ. ಈ ಹಿಂದೆ ಹಳೇ ಪಠ್ಯಕ್ಕೆ ನೀಡಿದ ಅನುಮತಿಯನ್ನು ಹಿಂದೆಗೆದುಕೊಂಡಿದ್ದೇನೆ” ಎಂದು ಬರೆದಿದ್ದಾರೆ.

- Advertisement -

“ಈ ಹಿಂದೆ ಪಠ್ಯಗಳಲ್ಲಿದ್ದ ಎಲ್.ಬಸವರಾಜು, ಎ.ಎನ್. ಮೂರ್ತಿರಾವ್, ಪಿ. ಲಂಕೇಶ್, ಸಾರಾ ಅಬೂಬಕರ್ ಮುಂತಾದವರ ಕತೆ, ಲೇಖನಗಳನ್ನು ಕೈ ಬಿಡಲಾಗಿದೆ ಎಂದರೆ, ಯಾರು ಕೈ ಬಿಟ್ಟಿದ್ದಾರೋ ಅವರಿಗೆ ಕನ್ನಡ ನಾಡು-ನುಡಿ-ಸಂಸ್ಕೃತಿ ಬಗ್ಗೆ ಏನೇನೂ ತಿಳಿದಿಲ್ಲ ಎಂತಲೇ ಅರ್ಥ” ಎಂದು ಮಹಾದೇವ ಹೇಳಿದ್ದಾರೆ.

“ಪಠ್ಯಪುಸ್ತಕ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಅವರು ತನಗೆ ಲೇಖಕರ ಜಾತಿ ತಿಳಿದಿಲ್ಲ ಎನ್ನುತ್ತಾರೆ! ಭಾರತದಂತಹ ಸಂಕೀರ್ಣ ದೇಶದಲ್ಲಿ ಪ್ರಜ್ಞಾಪೂರ್ವಕವಾಗಿ ಜಾತಿಯನ್ನು ಗುರುತಿಸದಿದ್ದರೆ ಅಲ್ಲಿ ಸಹಜವಾಗಿ ಶೇ.90ರಷ್ಟು ಅವರ ಜಾತಿಯವರೇ ತುಂಬಿಕೊಳ್ಳುತ್ತಾರೆ. ಅವರವರ ಅಡಿಗೆ ಮನೆ ವಾಸನೆ ಪ್ರಿಯವಾಗುವಂತೆ ಹೀಗಾಗಿ ಭಾರತದ ಬಹುತ್ವ, ಪಾರ್ಟಿಸಿಪೇಟರಿ ಪ್ರಜಾಪ್ರಭುತ್ವ ಕಣ್ಮರೆಯಾಗುತ್ತಿದೆ. ಇದು ಈಗಿನದ್ದಲ್ಲ. ಡಾ. ಮುರಳಿ ಮನೋಹರ ಜೋಷಿಯವರು ಕೇಂದ್ರ ಶಿಕ್ಷಣ ಸಚಿವರಾಗಿದ್ದ ಕಾಲದಿಂದಲೂ ನಡೆದುಕೊಂಡು ಬಂದಿದೆ. ಚಾತುವರ್ಣ ಹಿಂದೂ ಪ್ರಭೇದದ ಆರೆಸ್ಸೆಸ್ ಸಂತಾನವಾದ ಬಿಜೆಪಿ ಆಳ್ವಿಕೆಯಲ್ಲಿ ಮೊದಲು ಕೈಹಾಕುವುದೇ ಶಿಕ್ಷಣ ಮತ್ತು ಇತಿಹಾಸಗಳ ಕುತ್ತಿಗೆಗೆ. ಇಲ್ಲೂ ಇದೇ ಆಗಿದೆ” ಎಂದೂ ತೀವ್ರ ಅಸಮಾಧಾನ ಪತ್ರದಲ್ಲಿ ಹೊರಹಾಕಿದ್ದಾರೆ.

“ಈ ಪಠ್ಯಗಳಲ್ಲಾ ಪ್ರಕಟವಾದ ಮೇಲೆ ಅವುಗಳನ್ನು ಪರಿಶೀಲಿಸಿ, ಅಲ್ಲಿನ ತಪ್ಪು ಮತ್ತು ಕೊರತೆಗಳನ್ನು ತುಂಬಲು, ನಮ್ಮ ಶಾಲಾ ಮಕ್ಕಳಿಗೆ ಪರ್ಯಾಯ ಪಾಠಗಳನ್ನು, ಪೂರಕ ವಿಷಯಗಳನ್ನು ಮುಖ್ಯವಾಗಿ ಸಂವಿಧಾನವನ್ನು ಬಿತ್ತರಿಸುವ ವಾಟ್ಸಾಪ್, ಇ ಮೇಲ್ ಆನ್‌ಲೈನ್ ಕ್ಲಾಸ್ ಇತ್ಯಾದಿಗಳನ್ನು ರೂಪಿಸಲು ಆಲೋಚಿಸುತ್ತಿರುವ ನಾಡಿನ ಆರೋಗ್ಯವಂತ ಮನಸ್ಸುಗಳ ಜೊತೆ ನಾನಿರಲು ಬಯಸುತ್ತೇನೆ” ಎಂದು ಸಾಹಿತಿ ಮಹಾದೇವ ಪತ್ರದಲ್ಲಿ ತಿಳಿಸಿದ್ದಾರೆ.

Join Whatsapp