Home ಟಾಪ್ ಸುದ್ದಿಗಳು ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೇವೇಗೌಡರಿಂದ CM ಬೊಮ್ಮಾಯಿಗೆ ಪತ್ರ

ಪರಿಷ್ಕೃತ ಪಠ್ಯಪುಸ್ತಕಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ದೇವೇಗೌಡರಿಂದ CM ಬೊಮ್ಮಾಯಿಗೆ ಪತ್ರ

ಬೆಂಗಳೂರು: ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಪ್ರಸಕ್ತ ಸಾಲಿನ ಪಠ್ಯ ಪುಸ್ತಕದ ಪರಿಷ್ಕರಣೆಯಲ್ಲಿ ಎದ್ದಿರುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ಮರು ಪರಿಷ್ಕರಣೆಗೊಂಡಿರುವ ಪಠ್ಯಪುಸ್ತಕಗಳನ್ನು ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ.

ಪಠ್ಯಪುಸ್ತಕಗಳ ಮರು ಪರಿಷ್ಕರಣೆಗೆ ನೇಮಿಸಿದ ಸಮಿತಿಯ ಅಧ್ಯಕ್ಷರು ರಾಷ್ಟ್ರಕವಿ ಕುವೆಂಪು ವಿರಚಿತ ನಾಡಗೀತೆಗೆ ಅವಮಾನ ಮಾಡಿರುತ್ತಾರೆ. ನಾಡಗೀತೆಯನ್ನು ಅಸಭ್ಯವಾಗಿ ತಿರುಚಿದವರಿಗೆ ಬಹುಮಾನ ನೀಡುತ್ತೇನೆಂದು ಕೂಡ ಹೇಳಿದ್ದಾರೆ. ಇದು ಕುವೆಂಪು ಅವರಿಗೆ ಮಾಡಿದ ದೊಡ್ಡ ಅವಮಾನವೇ ಆಗಿದೆ.

ಅಲ್ಲದೆ, ನಾಡಧ್ವಜವನ್ನು ಒಳ ಉಡುಪಿಗೆ ಹೋಲಿಸಿದ್ದೂ ನಾಡ ಅಸ್ಮಿತೆಗೆ ಮಾಡಿದ ಅವಮಾನವಾಗಿದೆ ಎಂದು ದೇವೇಗೌಡರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಪಠ್ಯಪುಸ್ತಕಗಳ ಮರು ಪರಿಷ್ಕರಣೆಯಲ್ಲಿ ಆಗಿರುವ ಅನ್ಯಾಯಗಳನ್ನು ಖಂಡಿಸಿ ಜೂನ್ 18ರಂದು ಬೆಂಗಳೂರಿನಲ್ಲಿ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಭಾಗವಹಿಸಿರುವ ಕುರಿತು ಉಲ್ಲೇಖಿಸಿರುವ ಅವರು, ʻʻವಿಶ್ವಮಾನವ ಕುವೆಂಪು ಹೋರಾಟ ಸಮಿತಿʼʼ ಮಂಡಿಸಿದ ಹಕ್ಕೊತ್ತಾಯಗಳನ್ನು ಬೆಂಬಲಿಸಿ, ಈ ಕೂಡಲೇ ಕ್ರಮಕೈಗೊಳ್ಳಬೇಕೆಂದು  ಆಗ್ರಹಿಸಿದ್ದಾರೆ.

ಕುವೆಂಪು ಅವರೊಂದಿಗೆ, ಡಾ.ಅಂಬೇಡ್ಕರ್ ಅವರನ್ನೂ ಹಂಗಿಸಿದವರನ್ನು ಪಠ್ಯಪುಸ್ತಕ ಪರಿಷ್ಕರಣೆ ಅಧ್ಯಕ್ಷರನ್ನಾಗಿ ಸರ್ಕಾರ ನೇಮಿಸಿದ್ದು ಮೊದಲ ತಪ್ಪಾಗಿದೆ. ಮರು ಪರಿಷ್ಕರಣೆಯಲ್ಲಿ ಮಾಡಿರುವ ತಪ್ಪುಗಳಂತೂ ಅಸಂಖ್ಯಾತ ಎಂದು ಮಾಜಿ ಪ್ರಧಾನಿ ದೇವೇಗೌಡ ಟೀಕಿಸಿದ್ದಾರೆ.

ಸಮಾಜ ವಿಜ್ಞಾನ ಪಠ್ಯಪುಸ್ತಕದ ಬಸವಣ್ಣನವರ ಚಳವಳಿಯ ಆಶಯವುಳ್ಳ ಭಾಗಗಳನ್ನು ಕೈಬಿಡಲಾಗಿದೆ.  ಏಕೀಕರಣದ ಪಾಠದಿಂದ ಕುವೆಂಪು ಅವರ ಭಾವಚಿತ್ರ ತೆಗೆಯಲಾಗಿದೆ. ಸಿದ್ಧಗಂಗಾ ಮತ್ತು ಆದಿಚುಂಚನಗಿರಿ ಶ್ರೀಗಳ ಸೇವೆಯ ವಿವರಗಳನ್ನು ತೆಗೆಯಲಾಗಿದೆ. ಅಂಬೇಡ್ಕರ್ ಅವರಿಗೆ ʻಸಂವಿಧಾನ ಶಿಲ್ಪಿʼ ಎಂದಿದ್ದ ವಿಶೇಷಣವನ್ನು ತೆಗೆಯಲಾಗಿದೆ. ಅಕ್ಕ, ಕನಕ, ಪುರಂದರ, ಶರೀಫರಂತಹ ಮಹಾನ್ ದಾರ್ಶನಿಕ ಸಂತರ ಪಠ್ಯಗಳನ್ನು ತೆಗೆದಯಲಾಗಿದೆ.  ಈ ಬಗ್ಗೆ ಹೆಚ್.ಡಿ.ದೇವೇಗೌಡ ಅವರು ಪತ್ರದಲ್ಲಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version