ಶಾಸಕ ದಿನೇಶ್‌ ಗುಂಡೂರಾವ್‌ ಕಾಣೆಯಾಗಿದ್ದಾರೆ: ಆಮ್ ಆದ್ಮಿ

Prasthutha|

ಬೆಂಗಳೂರು: ಬೆಂಗಳೂರಿನ ಗಾಂಧಿನಗರ ಕ್ಷೇತ್ರದ ರಸ್ತೆಗಳು ಗುಂಡಿಗಳು ಬಿದ್ದು ಜನರು ಪರದಾಡುತ್ತಿದ್ದರೆ, ಶಾಸಕ ದಿನೇಶ್‌ ಗುಂಡೂರಾವ್‌ರವರು ಜನರ ಸಮಸ್ಯೆ ಆಲಿಸಿ ಪರಿಹರಿಸುವ ಬದಲು ಕಾಣೆಯಾಗಿದ್ದಾರೆ ಎಂದು ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ ಹೇಳಿದ್ದಾರೆ.

- Advertisement -

ಅವರು ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ “ಗಾಂಧಿನಗರ ವಿಧಾನಸಭಾ ಕ್ಷೇತ್ರದ ಜನರು ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್‌ರವರನ್ನು ನೆನಪಿಸಿಕೊಂಡು ದಿನೇಶ್‌ ಗುಂಡೂರಾವ್‌ರವರನ್ನು ಶಾಸಕ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಆದರೆ ಕ್ಷೇತ್ರದ ಮೇಲೆ ಅವರಿಗಿರುವ ಅಸಡ್ಡೆಯಿಂದಾಗಿ ಅವರ ತಂದೆಯ ಹೆಸರಿಗೆ ಧಕ್ಕೆಯಾಗುತ್ತಿದೆ. ಕ್ಷೇತ್ರದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳನ್ನು ಸಂಪೂರ್ಣ ಕಡೆಗಣಿಸಿ ಹೊರರಾಜ್ಯಗಳಲ್ಲೇ ಠಿಕಾಣಿ ಹೂಡುತ್ತಿದ್ದಾರೆ. ಗಾಂಧಿನಗರದ ಶಾಸಕ ಸ್ಥಾನಕ್ಕಿಂತ ಗೋವಾ ಮತ್ತು ತಮಿಳುನಾಡಿನ ಕಾಂಗ್ರೆಸ್‌ ಉಸ್ತುವಾರಿಯೇ ಅವರಿಗೆ ಮುಖ್ಯವಾಗಿದೆ. ಪರಿಣಾಮವಾಗಿ ಮತ ನೀಡಿದ ಜನರು ತೊಂದರೆ ಅನುಭವಿಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಶಾಸಕರಾಗಿ ಕ್ಷೇತ್ರದ ಅಭಿವೃದ್ಧಿಯ ಜವಾಬ್ದಾರಿ ಹೊತ್ತಿರುವ ದಿನೇಶ್‌ ಗುಂಡೂರಾವ್‌ರವರನ್ನು ಸಾಮಾಜಿಕ ತಾಣಗಳಲ್ಲಿ ಪ್ರಶ್ನಿಸಿದರೆ, ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಚುನಾವಣೆ ವೇಳೆ ಆಶ್ವಾಸನೆಗಳನ್ನು ನೀಡಿ ಗೆದ್ದು, ಅಧಿಕಾರ ಸಿಕ್ಕ ನಂತರ ಅಸಹಾಯಕತೆ ವ್ಯಕ್ತಪಡಿಸುವ ಅವರಿಗೆ ನಾಚಿಕೆಯಾಗಬೇಕು. ಇದು ಜವಾಬ್ದಾರಿಯಿಂದ ನುಣುಚಿಕೊಳ್ಳುವ ಪ್ರಯತ್ನವೇ ಹೊರತು ಬೇರೇನೂ ಅಲ್ಲ. ನೆರೆ ರಾಜ್ಯಗಳಿಗೆ ಪಲಾಯನ ಮಾಡಿರುವ ಅವರು ಇನ್ನಾದರೂ ವಾಪಸ್‌ ಬಂದು ಜನರ ಸಮಸ್ಯೆಗಳಿಗೆ ಸ್ಪಂದಿಸಲಿ. ಸಾಧ್ಯವಾಗದಿದ್ದರೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ನಂತರ ಏನಾದರೂ ಮಾಡಿಕೊಳ್ಳಲಿ” ಎಂದು ಮೋಹನ್‌ ದಾಸರಿಯವರು ದಿನೇಶ್‌ ಗುಂಡೂರಾವ್‌ರವರನ್ನು ತರಾಟೆಗೆ ತೆಗೆದುಕೊಂಡರು.

- Advertisement -

ಗಾಂಧಿನಗರ ವಿಧಾನಸಭಾ ಕ್ಷೇತ್ರದ ಎಎಪಿ ಅಧ್ಯಕ್ಷ ರಾಜಶೇಖರ್ ದೊಡ್ಡಣ್ಣ ಮಾತನಾಡಿ, “ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಾರ್ಪೋರೇಟರ್‌ಗಳು ಹಾಗೂ ಕಾರ್ಯಕರ್ತರ ಆಟಾಟೋಪ ಮೀತಿಮೀರಿದ್ದು, ಕ್ಷೇತ್ರದ ಸಮಸ್ಯೆಗಳನ್ನು ಪ್ರಶ್ನಿಸುವ ಆಮ್‌ ಆದ್ಮಿ ಪಾರ್ಟಿ ಮುಖಂಡರಿಗೆ ಧಮಕಿ ಹಾಕುತ್ತಿದ್ದಾರೆ. ಅವರ ಗೂಂಡಾಗಿರಿ ಇದೇ ರೀತಿ ಮುಂದುವರಿದರೆ ʻದಿನೇಶ್‌ ಗುಂಡೂರಾವ್‌ ಹಠಾವೋʼ ಆಂದೋಲನದ ಮೂಲಕ ಜನರ ಬಳಿ ಹೋಗುತ್ತೇವೆ” ಎಂದು ಎಚ್ಚರಿಕೆ ನೀಡಿದರು.

“ದಿನೇಶ್‌ ಗುಂಡೂರಾವ್‌ರವರು 1999ರಿಂದಲೂ ಕ್ಷೇತ್ರ ಶಾಸಕರಾಗಿದ್ದು, ರಾಜಕೀಯ ಹೊಂದಾಣಿಕೆಯಿಂದ ಕಳೆದ ಐದು ಚುನಾವಣೆ ಗೆದ್ದಿದ್ದಾರೆ. ಸ್ವಲ್ಪವಾದರೂ ಸುಸ್ಥಿತಿಯಲ್ಲಿದ್ದ ಕ್ಷೇತ್ರವನ್ನು ಸಂಪೂರ್ಣ ಹಾಳುಗೆಡವಿರುವುದೇ ಅವರ 22 ವರ್ಷಗಳ ಸಾಧನೆ. ಶಾಲೆ, ಆಸ್ಪತ್ರೆ ಮುಂತಾದ ಮೂಲಸೌಕರ್ಯಗಳು ಸೂಕ್ತ ರೀತಿಯಲ್ಲಿ ಇಲ್ಲದ ಗಾಂಧಿನಗರ ಕ್ಷೇತ್ರವು ದೇಶದಲ್ಲೇ ಅತ್ಯಂತ ಹಿಂದುಳಿದ ಕ್ಷೇತ್ರವಾಗಿರಬಹುದು. ಕ್ಷೇತ್ರದ ಬಗ್ಗೆ ಹಾಗೂ ಮತದಾರರ ಬಗ್ಗೆ ಇಷ್ಟೊಂದು ನಿರ್ಲಕ್ಷ್ಯ ತೋರುವ ಶಾಸಕರು ಬಹುಶಃ ಮತ್ತೊಬ್ಬರು ಇರಲಿಕ್ಕಿಲ್ಲ. ಸಮಸ್ತ ಗಾಂಧಿನಗರ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಇಲ್ಲಿ ಆಮ್‌ ಆದ್ಮಿ ಪಾರ್ಟಿಯನ್ನು ಬಲಗೊಳಿಸಲಾಗುತ್ತಿದೆ” ಎಂದು ರಾಜಶೇಖರ್‌ ದೊಡ್ಡಣ್ಣ ಹೇಳಿದರು.

ಅಮ್ ಆದ್ಮಿ ಪಕ್ಷದ ನಾಯಕಿ ಉಷಾ ಮೋಹನ್‌ ಮಾತನಾಡಿ, “ಶಾಸಕ ದಿನೇಶ್‌ ಗುಂಡೂರಾವ್‌ರವರ ಅಧಿಕಾರದಲ್ಲಿ ಅವರ ಪತ್ನಿ ಟಬು ರಾವ್‌ರವರ ಹಸ್ತಕ್ಷೇಪ ಅತಿಯಾಗಿದೆ. ಶಾಸಕರು ಕ್ಷೇತ್ರದಲ್ಲಿ ದೀರ್ಘಕಾಲ ಇಲ್ಲದಿರುವುದರ ಲಾಭವನ್ನು ಟಬು ರಾವ್ ಪಡೆಯುತ್ತಿದ್ದಾರೆ. ಜನಪ್ರತಿನಿಧಿಯಂತೆ ಅಧಿಕಾರದಿಂದ ಮೆರೆಯುತ್ತಿದ್ದಾರೆ. ಇದು ಅಸಂವಿಧಾನಿಕವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡುವ ದ್ರೋಹವಾಗಿದೆ” ಎಂದು ಹೇಳಿದರು.

ಕಾನೂನು ಸಮರಕ್ಕೆ 57 ವಕೀಲರು:
ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರ ವಕೀಲರ ಘಟಕದ ಅಧ್ಯಕ್ಷ ಮಂಜುನಾಥ ಸ್ವಾಮಿಯವರು ಮಾತನಾಡಿ, “ರಸ್ತೆಗುಂಡಿಗಳಿಗೆ ಕಾರಣರಾದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಪ್ರಕರಣ ದಾಖಲಿಸಲು 57 ಅನುಭವಿ ವಕೀಲರ ತಂಡವನ್ನು ರಚಿಸಲಾಗಿದೆ. ಸದ್ಯದಲ್ಲೇ 150ಕ್ಕೂ ಹೆಚ್ಚು ವಕೀಲರು ನಮ್ಮೊಂದಿಗೆ ಕೈಜೋಡಿಸುವ ಸಾಧ್ಯತೆಯಿದೆ. ಕರ್ತವ್ಯದಲ್ಲಿ ಲೋಪ ಎಸಗಿದ ಹಾಗೂ ಅಕ್ರಮದಲ್ಲಿ ಭಾಗಿಯಾದವರು ತಕ್ಕ ಬೆಲೆ ತೆರುವಂತೆ ಮಾಡುತ್ತೇವೆ” ಎಂದು ಹೇಳಿದರು.

ಗೋಷ್ಠಿಯಲ್ಲಿ ಕ್ಷೇತ್ರದ ಮುಖಂಡರಾದ ಪುಷ್ಪ ಕೇಶವ್‌, ಗೋಪಿನಾಥ್ ಮತ್ತಿತರು ಉಪಸ್ಥಿತರಿದ್ದರು.

Join Whatsapp