Home ಟಾಪ್ ಸುದ್ದಿಗಳು ಸಿಬಿಐ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಡಿ.ಕೆ.ಶಿ: ಕೇಂದ್ರ ಏಜೆನ್ಸಿಗೆ ನೋಟಿಸ್ ಜಾರಿ

ಸಿಬಿಐ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಡಿ.ಕೆ.ಶಿ: ಕೇಂದ್ರ ಏಜೆನ್ಸಿಗೆ ನೋಟಿಸ್ ಜಾರಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.

ಸೋಮವಾರ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ದಪ್ಪ ಸುನಿಲ್ ದತ್ ಯಾದವ್ ಅವರು ಸಿಬಿಐಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿದ್ದಾರೆ. ಶಿವಕುಮಾರ್ ಪರವಾಗಿ ವಾದಿಸಿದ ಹಿರಿಯ ವಕೀಲರಾದ ಬಿ.ವಿ.ಆಚಾರ್ಯ ಮತ್ತು ಸಿ.ಎಚ್.ಜಾಧವ್ ಅವರು ಅಕ್ಟೋಬರ್ 3, 2020 ರಂದು ಡಿ.ಕೆ.ಶಿ ವಿರುದ್ಧ ದಾಖಲಿಸಲಾದ ಎಫ್ಐಆರ್ ಕಾನೂನುಬಾಹಿರವಾಗಿದೆ ಎಂದು ಹೇಳಿದರು.

ಈ ಪ್ರಕರಣದಲ್ಲಿ ಶಿವಕುಮಾರ್ ಏಕೈಕ ಆರೋಪಿಯಾಗಿದ್ದರೂ, ಅವರ ಕುಟುಂಬದ ಎಲ್ಲಾ ಆಸ್ತಿಗಳನ್ನು ಅವರ ಆಸ್ತಿ ಎಂದು ತೋರಿಸಲಾಗಿದೆ. ‘ಕುಟುಂಬ ಸದಸ್ಯರು’ ಎಂಬ ಪದವು ಅಸ್ಪಷ್ಟ ಪದವಾಗಿದೆ. ಪ್ರಸ್ತುತ ಪ್ರಕರಣದಲ್ಲಿ, ಕುಟುಂಬ ಸದಸ್ಯರ ಸಂಖ್ಯೆಯನ್ನು ಉಲ್ಲೇಖಿಸಲಾಗಿಲ್ಲ ಅಥವಾ ಅವರ ಗುರುತನ್ನು ಬಹಿರಂಗಪಡಿಸಲಾಗಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳ ತನಿಖೆಗಾಗಿ ಸಿಬಿಐ ಕೈಪಿಡಿಯಲ್ಲಿ ಉಲ್ಲೇಖಿಸಿರುವ ಕಾರ್ಯವಿಧಾನವನ್ನು ಅನುಸರಿಸುವಲ್ಲಿ ಸಿಬಿಐ ವಿಫಲವಾಗಿದೆ. ಸದರಿ ಚೆಕ್ ಅವಧಿಗೆ ಅರ್ಜಿದಾರರ ಆದಾಯ, ಆಸ್ತಿ ಮತ್ತು ವೆಚ್ಚವನ್ನು ನಿರ್ಧರಿಸಲು ಎಫ್ಐಆರ್ನಲ್ಲಿ ಉಲ್ಲೇಖಿಸಲಾದ ಎ-ಬಿ-ಸಿ-ಡಿ ಹೇಳಿಕೆಯನ್ನು ಉಲ್ಲೇಖಿಸಲಾಗಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಆದಾಯ ತೆರಿಗೆ ಇಲಾಖೆ ಆಗಸ್ಟ್ 2, 2017 ರಂದು ಕರ್ನಾಟಕ ಮತ್ತು ದೆಹಲಿಯಲ್ಲಿ ಶಿವಕುಮಾರ್ ಅವರ ಆಸ್ತಿಗಳ ಮೇಲೆ ಶೋಧ ನಡೆಸಿತ್ತು. ಈ ಪ್ರಕರಣ ಬೆಂಗಳೂರಿನ ವಿಶೇಷ ನ್ಯಾಯಾಲಯದಲ್ಲಿ ಬಾಕಿ ಇದೆ. ಆಗಸ್ಟ್ 2018 ರಲ್ಲಿ, ಜಾರಿ ನಿರ್ದೇಶನಾಲಯವು ಐಟಿ ಇಲಾಖೆಯ ಹುಡುಕಾಟದ ಆಧಾರದ ಮೇಲೆ ಪ್ರಕರಣ ದಾಖಲಿಸಿತು. ಈ ಪ್ರಕರಣದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲಾಗಿತ್ತು.

2019 ರ ಸೆಪ್ಟೆಂಬರ್ ನಲ್ಲಿ, ಅಕ್ರಮ ಹಣ ವರ್ಗಾವಣೆಗಾಗಿ ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಡಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿತ್ತು. ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳಲು 2019ರ ಸೆಪ್ಟೆಂಬರ್ 25ರಂದು ರಾಜ್ಯ ಸರ್ಕಾರ ಸಿಬಿಐಗೆ ಅನುಮತಿ ನೀಡಿತ್ತು. ಪ್ರಾಥಮಿಕ ತನಿಖೆಯ ನಂತರ, ಸಿಬಿಐ ಅಕ್ಟೋಬರ್ 3, 2020 ರಂದು ಎಫ್ಐಆರ್ ದಾಖಲಿಸಿದೆ.

ಇದನ್ನು ಶಿವಕುಮಾರ್ ಈಗ ಹೈಕೋರ್ಟ್ ನಲ್ಲಿ ಪ್ರಶ್ನಿಸಿ, ತಮ್ಮ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಕೇಂದ್ರೀಯ ತನಿಖಾ ದಳ (ಸಿಬಿಐ) ದಾಖಲಿಸಿರುವ ಎಫ್ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿದ್ದಾರೆ.

Join Whatsapp
Exit mobile version