ಮದ್ರಸ ಶಿಕ್ಷಣವನ್ನು ಸರಕಾರದ ಅಧೀನಕ್ಕೆ ತರಲು ಯತ್ನ: ಮಹತ್ವದ ಸಭೆ ನಡೆಸಿದ ಬಿ.ಸಿ ನಾಗೇಶ್

Prasthutha|

- Advertisement -

ಬೆಂಗಳೂರು: ಮದರಸಾಗಳಿಗೆ ಹೋಗುವ ಮಕ್ಕಳಿಗೆ ನೀಡಲಾಗುತ್ತಿರುವ ಔಪಚಾರಿಕ ಶಿಕ್ಷಣದ ಕುರಿತು ಪ್ರಗತಿ ಪರಿಶೀಲನೆ ನಡೆಸಲಾಗಿದ್ದು, ಮದರಸಾಗಳಲ್ಲಿ ಹಾಲಿ ನೀಡಲಾಗುತ್ತಿರುವ ಶಿಕ್ಷಣದ ಸ್ವರೂಪದ ಕುರಿತು ವರದಿ ಪಡೆದುಕೊಳ್ಳಲಾಗುತ್ತದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಹಾಗೂ ಸಕಾಲ ಸಚಿವ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ನಾಗೇಶ್ ತಿಳಿಸಿದರು.

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯಲ್ಲಿ ಬುಧವಾರ ಶಿಕ್ಷಣ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಸಚಿವರು ಮಾತನಾಡಿದರು.

- Advertisement -

ಮದರಸಾಗಳಲ್ಲಿ ಧಾರ್ಮಿಕ ಶಿಕ್ಷಣ ಪಡೆದ ಬಳಿಕ ವಿಜ್ಞಾನ ಮತ್ತು ಗಣಿತ ಕುರಿತು ಔಪಚಾರಿಕ ಶಿಕ್ಷಣ ಪಡೆಯಲು ಹತ್ತಿರದ ಶಾಲೆಗಳಿಗೆ ವಿದ್ಯಾರ್ಥಿಗಳು ಹಾಜರಾಗಬೇಕು ಎಂಬ ನಿಯಮವಿದೆ. ಆದರೆ, ಮದರಸಾದಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳು, ಯಾವ ಪ್ರಮಾಣದಲ್ಲಿ ಔಪಚಾರಿಕ ಶಿಕ್ಷಣ ಪಡೆಯುತ್ತಿದ್ದಾರೆಂಬ ಸ್ಪಷ್ಟ ಮತ್ತು ನಿಖರ ಮಾಹಿತಿ ಲಭ್ಯವಿಲ್ಲ. ಈ ಹಿನ್ನೆಲೆಯಲ್ಲಿ ಮದರಸಾಗಳಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ರಾಜ್ಯದಲ್ಲಿರುವ ಮದರಸಾಗಳಲ್ಲಿನ ಶಿಕ್ಷಣದ ಸ್ವರೂಪ ತಿಳಿಯುವ ಅಗತ್ಯವಿದೆ’ ಎಂದು ಸಚಿವರು ತಿಳಿಸಿದರು.

ಮದರಸಾಗಳಿಗೆ ಹೋಗುವ ಮಕ್ಕಳಿಗೆ ಔಪಚಾರಿಕ ಶಿಕ್ಷಣ ಸಿಗುತ್ತಿಲ್ಲ. ಮುಖ್ಯವಾಗಿ ಗಣಿತ ಮತ್ತು ವಿಜ್ಞಾನದ ಕುರಿತು ಬೋಧನೆ ದೊರೆಯುವಂತೆ ಮಾಡಬೇಕು ಎಂದು ಪಾಲಕರು ಒತ್ತಾಯಿಸಿದ್ದರು. ಹೀಗಾಗಿ, ಮದರಸಾಗಳಲ್ಲಿ ನೀಡುತ್ತಿರುವ ಶಿಕ್ಷಣದ ವ್ಯವಸ್ಥೆ ಕುರಿತು ಪರಿಶೀಲಿಸಲು ಮೊದಲ ಸಭೆಯನ್ನು ಇಂದು ನಡೆಸಲಾಗಿದೆ. ಅನುದಾನಿತ, ಅನುದಾನರಹಿತ ಹಾಗೂ ಖಾಸಗಿ ಮದರಸಾಗಳಲ್ಲಿ ‘ಶಿಕ್ಷಣ ಹಕ್ಕು ಕಾಯ್ದೆ’ ಪ್ರಕಾರ ಸಿಗಬೇಕಾಗ ಶಿಕ್ಷಣ ಸಿಗುತ್ತಿದೆಯೇ ? ಇಲ್ಲವಾದರೆ ಯಾವ ರೀತಿಯ ಶಿಕ್ಷಣ ನೀಡಲಾಗುತ್ತಿದೆ ? ಎಂಬ ಕುರಿತು ಮದರಾಸಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಸಚಿವ ನಾಗೇಶ್ ಹೇಳಿದರು.

ಶಿಕ್ಷಣ ಇಲಾಖೆ ಅಧಿಕಾರಿಗಳು ಪರಿಶೀಲನೆಗೆಂದು ಮದರಸಾಗಳಿಗೆ ತೆರಳಿದಾಗ ಸಹಕರಿಸುವುದಿಲ್ಲ ಎಂಬ ದೂರುಗಳು ಇಲಾಖೆಗೆ ಬಂದಿವೆ. ಹೀಗಾಗಿ, ಕೆಲವು ಮದರಸಾಗಳಿಗೆ ತೆರಳಿ ಪರಿಶೀಲನೆ ನಡೆಸಿ ವರದಿ ನೀಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸ್ಥಿತಿ ಗತಿ ಬಗ್ಗೆ ಮಾಹಿತಿ ತೆಗೆದುಕೊಂಡ ನಂತರ ಶಿಕ್ಷಣ ತಜ್ಞರು, ಮದರಸಾ ನಡೆಸುತ್ತಿರುವವರ ಜೊತೆ ಸಭೆ ನಡೆಸಲಾಗುತ್ತದೆ. ಆರ್‌ ಟಿಇ ಪ್ರಕಾರ, ಎಲ್ಲ ಮಕ್ಕಳಿಗೆ ಗುಣಮಟ್ಟದ ಔಪಚಾರಿಕ ಶಿಕ್ಷಣ ನೀಡಬೇಕಾದ ಜವಾಬ್ದಾರಿ ಸರ್ಕಾರದ ಮೇಲಿದ್ದು, ಅದನ್ನು ನಿರ್ವಹಿಸಲು ಪ್ರಯತ್ನಿಸಲಾಗುತ್ತದೆ. ಒಟ್ಟಾರೆಯಾಗಿ ಎಲ್ಲ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡಬೇಕು ಎಂಬುದು ಸರ್ಕಾರದ ಆಶಯವಾಗಿದೆ ಎಂದು ಸಚಿವ ನಾಗೇಶ್ ನುಡಿದರು.

ಸಭೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ಡಾ. ಎಸ್. ಸೆಲ್ವಕುಮಾರ್, ಪದವಿಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶರಾದ ಆರ್. ರಾಮಚಂದ್ರನ್ ಸೇರಿದಂತೆ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Join Whatsapp