Home ಟಾಪ್ ಸುದ್ದಿಗಳು ಈದ್ ಮಿಲಾದ್ ರ‍್ಯಾಲಿ ವೇಳೆ ವಿದ್ಯುತ್ ಸ್ಪರ್ಶ: ಐವರು ಬಲಿ; ಹಲವರು ಗಂಭೀರ

ಈದ್ ಮಿಲಾದ್ ರ‍್ಯಾಲಿ ವೇಳೆ ವಿದ್ಯುತ್ ಸ್ಪರ್ಶ: ಐವರು ಬಲಿ; ಹಲವರು ಗಂಭೀರ

ಬಹ್ರೈಚ್ (ಉತ್ತರ ಪ್ರದೇಶ): ಈದ್ ಮಿಲಾದ್ ರ‍್ಯಾಲಿ ವೇಳೆ ಹೈ ಟೆನ್ಷನ್ ವಿದ್ಯುತ್ ತಂತಿ ಸ್ಪರ್ಶಿಸಿ ಐವರು ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬಹ್ರೈಚ್ ಎಂಬಲ್ಲಿ ನಡೆದಿದೆ. ಈ ದುರ್ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ಐದು ಮಂದಿ ಗಂಭೀರವಾದ ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉತ್ತರ ಪ್ರದೇಶದ ನನ್ಪಾರ ಪ್ರದೇಶದ ಮಸುಪುರ್ ಗ್ರಾಮದಲ್ಲಿ ಭಾನುವಾರ ಮುಂಜಾನೆ ಸುಮಾರು 4 ಗಂಟೆಗೆ ಈ ದುರ್ಘಟನೆ ನಡೆದಿದ್ದು, ಗ್ರಾಮಸ್ಥರು ಮೆರವಣಿಗೆ ನಡೆಸುತ್ತಿದ್ದಾಗ ಗಾಡಿಯಲ್ಲಿ ಇರಿಸಲಾಗಿದ್ದ ಕಬ್ಬಿಣದ ರಾಡ್ ಹೈ ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ದುರ್ಘಟನೆಯಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಗ್ರಾಮಾಂತರ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಗಾಯಾಳುಗಳ ಪೈಕಿ ಒಬ್ಬನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ಅವರು ತಿಳಿಸಿದ್ದಾರೆ.

ಘಟನೆಯ ಕುರಿತು ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಆದಿತ್ಯನಾಥ್, ಘಟನೆಯಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸಾಂತ್ವಾನ ಹೇಳಿದ್ದಾರೆ ಮತ್ತು ಗಾಯಾಳುಗಳಿಗೆ ಉತ್ತಮವಾದ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Join Whatsapp
Exit mobile version