ಲಖಿಂಪುರ ಹಿಂಸಾಚಾರ ಪ್ರಕರಣ: ತನಿಖೆಯ ಮೇಲ್ವಿಚಾರಣೆಗೆ ಮಾಜಿ ನ್ಯಾಯಾಧೀಶ ರಾಕೇಶ್ ಕುಮಾರ್ ಜೈನ್ ನೇಮಕ

Prasthutha|

ನವದೆಹಲಿ: ಲಖಿಂಪುರ ಖೇರಿ ಹಿಂಸಾಚಾರದ ತನಿಖೆಯನ್ನು ಮೇಲ್ವಿಚಾರಣೆ ನಡೆಸಲು ಮತ್ತು ತನಿಖೆಯಲ್ಲಿ ನಿಷ್ಪಕ್ಷಪಾತ, ನ್ಯಾಯಸಮ್ಮತ ಮತ್ತು ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಲು ಪಂಜಾಬ್, ಹರ್ಯಾಣ ಹೈಕೋರ್ಟ್ ನ ಮಾಜಿ ನ್ಯಾಯಾಧೀಶ ರಾಕೇಶ್ ಕುಮಾರ್ ಜೈನ್ ಅವರನ್ನು ಸುಪ್ರೀಮ್ ಕೋರ್ಟ್ ನೇಮಿಸಿದೆ.

- Advertisement -

ಮುಖ್ಯ ನ್ಯಾಯಮೂರ್ತಿ ಎನ್.ವಿ ರಮಣ ನೇತೃತ್ವದ ಪೀಠವು ಮೂವರು ಹಿರಿಯ ಐಪಿಎಸ್ ಅಧಿಕಾರಿಗಳಾದ ಎಸ್.ಬಿ ಶಿರೋಡ್ಕರ್, ದೀಪಿಂದರ್ ಸಿಂಗ್ ಮತ್ತು ಪದ್ಮಜಾ ಚೌಹಾಣ್ ಅವರನ್ನು ವಿಶೇಷ ತನಿಖಾ ತಂಡಕ್ಕೆ ಸೇರಿಸುವಂತೆ ಉತ್ತರ ಪ್ರದೇಶಕ್ಕೆ ಆದೇಶ ನೀಡಿದೆ.

ನಿವೃತ್ತ ನ್ಯಾಯಾಧೀಶರಿಂದ ವರದಿ ಬಂದ ನಂತರ ಪ್ರಕರಣದ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ತಿಳಿಸಿದೆ.
ಲಖಿಂಪುರ ಖೇರಿ ಹಿಂಸಾಚಾರ ಘಟನೆಯ ದೈನಂದಿನ ತನಿಖೆಯ ಮೇಲ್ವಿಚಾರಣೆಗಾಗಿ ಕೆಲವು ನಿವೃತ್ತ ಸುಪ್ರೀಮ್ ಕೋರ್ಟ್ ನ್ಯಾಯಾಧೀಶ ಅಥವಾ ಹೈಕೋರ್ಟ್ ನ್ಯಾಯಾಧೀಶರ ಹೆಸರನ್ನು ಪರಿಗಣಿಸುವುದಾಗಿ ನ್ಯಾಯಾಲಯ ನವೆಂಬರ್ 15 ರಂದು ಹೇಳಿತ್ತು.

- Advertisement -

ನವೆಂಬರ್ 8 ರಂದು ನಡೆದ ವಿಚಾರಣೆಯ ವೇಳೆ ನ್ಯಾಯಾಲಯವು ಪ್ರಕರಣದ ತನಿಖೆಯ ನಿರ್ವಹಣೆಯ ಕುರಿತು ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು. ಮಾತ್ರವಲ್ಲ ತನಿಖೆಯ ಮೇಲ್ವಿಚಾರಣೆಗೆ ಪಂಜಾಬ್, ಹರ್ಯಾಣ ಹೈಕೋರ್ಟ್ ನ ಮಾಜಿ ನ್ಯಾಯಾಧೀಶರನ್ನು ನೇಮಿಸಲು ಪ್ರಸ್ತಾಪವನ್ನು ಮುಂದಿರಿಸಿತ್ತು.

Join Whatsapp
Exit mobile version