ಸಂಘಿಗಳ ಪಿತೂರಿಗೆ ನಾವು ಹೆದರಲ್ಲ ಎಂದು ಎಚ್ಚರಿಸಿದ ರೈತ ನಾಯಕ ರಾಕೇಶ್ ಟಿಕಾಯತ್

Prasthutha|

ದೆಹಲಿ: ಸಂಘಿಗಳ ಯಾವುದೇ ಪಿತೂರಿಗೆ ನಾವು ಹೆದರುವವರಲ್ಲ ಎಂದು ದೆಹಲಿ ರೈತ ಹೋರಾಟದ ಮುಂಚೂಣಿ ನಾಯಕ, ಸಂಯುಕ್ತ ಕಿಸಾನ್ ಮೋರ್ಚಾದ ರಾಷ್ಟ್ರೀಯ ನಾಯಕ ರಾಕೇಶ್ ಟಿಕಾಯತ್ ಎಚ್ಚರಿಕೆಯ ಸಂದೇಶ ನೀಡಿದ್ದಲ್ಲದೆ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರ ಮೇಲೆ ಇದೇ ರೀತಿಯ ದಾಳಿ ಮುಂದುವರೆಸಿದ್ದಲ್ಲಿ ಬಿಜೆಪಿ ಸಂಸದರು ಮತ್ತು ಶಾಸಕರು ರಸ್ತೆಯಲ್ಲಿ ಓಡಾಡಲು ಕೂಡಾ ಸಾರ್ವಜನಿಕರು ಬಿಡುವುದಿಲ್ಲ ಎಂದು ಹೇಳಿದ್ದಾರೆ.

- Advertisement -

ನಿನ್ನೆ ರಾಜಸ್ಥಾನದ ಅಲ್ವಾರ್‌ನಲ್ಲಿ ರೈತ ಮುಖಂಡ ರಾಕೇಶ್ ಟಿಕಾಯತ್ ಬೆಂಗಾವಲು ವಾಹನದ ಮೇಲೆ ದಾಳಿ ನಡೆದಿದ್ದು, ಘಟನೆಗೆ ಬಿಜೆಪಿಯೇ ನೇರ ಕಾರಣ ಎಂದು ರಾಕೇಶ್ ಟಿಕಾಯತ್ ಹೇಳಿದ್ದಾರೆ.

ದಾಳಿಕೋರರು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ)ಯ ಸಕ್ರಿಯ ಸದಸ್ಯರಾಗಿದ್ದಾರೆ ಮತ್ತು ಸ್ಥಳೀಯ ಸಂಸದ ಬಾಲಕ್ ನಾಥ್ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸತೀಶ್ ಪುನಿಯಾ ಅವರ ಆಪ್ತರಾಗಿದ್ದಾರೆ ಎಂದು ಟಿಕಾಯತ್ ಹೇಳಿದ್ದಾರೆ.
ವಾಹನದ ಮೇಲೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳೀಯ ವಿಶ್ವವಿದ್ಯಾಲಯದ ವಿದ್ಯಾರ್ಥಿ ಮುಖಂಡ ಸೇರಿದಂತೆ ಇತರ ಮೂವರನ್ನು ಮುಂಜಾಗ್ರತ ಕ್ರಮವಾಗಿ ಪೊಲೀಸರು ಬಂಧಿಸಿದ್ದಾರೆ.

- Advertisement -

“ನಾವು ಮುಂದಿನ ಸಂಯುಕ್ತ ಕಿಸಾನ್ ಮೋರ್ಚಾ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸುತ್ತೇವೆ ಮತ್ತು ಮುಂದಿನ ಕ್ರಮವನ್ನು ನಿರ್ಧರಿಸುತ್ತೇವೆ. ಈ ಸಂಘಿ ಪಿತೂರಿಗೆ ನಾವು ಹೆದರುವುದಿಲ್ಲ ಮತ್ತು ನಮ್ಮ ಕಾರ್ಯಕ್ರಮಗಳು ಯೋಜಿಸಿದಂತೆ ಮುಂದುವರಿಯುತ್ತದೆ ಎಂದಿರುವ ಟಿಕಾಯತ್, ಈ ದಾಳಿಯ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಂತೆ” ಅವರು ಎಲ್ಲಾ ರೈತರಿಗೆ ಮನವಿ ಮಾಡಿದ್ದಾರೆ.

“ಭಾರತೀಯ ಕಿಸಾನ್ ಯೂನಿಯನ್ ವಕ್ತಾರ ರಾಕೇಶ್ ಟಿಕಾಯತ್‌ರವರ ಬೆಂಗಾವಲು ವಾಹನದ ಮೇಲಿನ ಬಿಜೆಪಿ ಗೂಂಡಾಗಳ ಹಲ್ಲೆ ಖಂಡನೀಯ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ರೈತ ಹೋರಾಟ ಆರಂಭವಾದಾಗಿನಿಂದಲೂ ಬಿಜೆಪಿಯು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುವುದರ ಮೂಲಕ ಹಿಂಸೆಗೆ ಪ್ರಚೋದನೆ ನೀಡುತ್ತಿದೆ. ರೈತರ ಹಕ್ಕುಗಳ ಪರವಾಗಿ ಹೋರಾಡುತ್ತಿರುವವರ ವಿರುದ್ಧ ಅಪ್ರಜಾತಾಂತ್ರಿಕ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ” ಎಂದು ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

Join Whatsapp