ಕೃಷ್ಣಾ ಮೇಲ್ದಂಡೆ ಯೋಜನೆಗೆ ಹಣಕಾಸು ನೆರವು| ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯಿಂದ ಮಹತ್ವದ ಸಭೆ

Prasthutha|

ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತಕ್ಕೆ ಅಗತ್ಯದ ಹಣಕಾಸು ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಸಭೆ ನಡೆಸಿದರು. ಈ ವೇಳೆ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

- Advertisement -

ಈ ಕುರಿತು ಪ್ರತಿಕ್ರಿಯಿಸಿದ ಸಚಿವ ಗೋವಿಂದ ಕಾರಜೋಳ, ಹಲವಾರು ವರ್ಷಗಳಿಂದ ಸ್ಥಗಿತಗೊಂಡಿದ್ದ ಕೃಷ್ಣಾ ಮೇಲ್ದಂಡೆ ಯೋಜನೆಯ ಭೂಸ್ವಾಧೀನ ಮತ್ತು ಪುನರ್‌ವಸತಿ ಮತ್ತು ಪುನರ್‌ ನಿರ್ಮಾಣ ಕುರಿತು ಸರ್ಕಾರ ತೀರ್ಮಾನ ಕೈಗೊಂಡಿದೆ. ಅದರಂತೆ ಮುಳುಗಡೆಯಾಗುವ 20 ಗ್ರಾಮಗಳನ್ನು ಸ್ಥಳಾಂತರಿಸಲು ತೀರ್ಮಾನಿಸಿದ್ದು ಅದಕ್ಕೆ ಬೇಕಾಗುವ ಪುನರ್‌ ವಸತಿ ಕೇಂದ್ರ ಹಾಗೂ ಮೂಲಸೌಕರ್ಯಕ್ಕೆ ಅಗತ್ಯವಿರುವ ಅನುದಾನವನ್ನು ಪೂರೈಸಲು ತೀರ್ಮಾನಿಸಲಾಗಿದೆ ಎಂದರು.

20 ಗ್ರಾಮಗಳ ಕಟ್ಟಡಗಳನ್ನು ಹಾಗೂ ಆ ಗ್ರಾಮಗಳಿಗೆ ಸಂಬಂಧಿಸಿದಂತೆ ಮುಳುಗಡೆ ಜಮೀನು ಕೂಡ ಸ್ವಾಧೀನಪಡಿಸಿಕೊಂಡು ಪ್ರಸ್ತುತ ಸಾಲಿನಲ್ಲಿ 2,500 ಕೋಟಿ ಹೆಚ್ಚುವರಿ ಅನುದಾನ ಒದಗಿಸಲು ತೀರ್ಮಾನಿಸಲಾಗಿದೆ. ವಿವಿಧ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ತ್ವರಿತವಾಗಿ ವಿಲೇಗೊಳಿಸಲು ಅನುಕೂಲವಾಗುವಂತೆ ಕಾನೂನು ಸಲಹೆಗಾರರನ್ನು ಬೆಂಗಳೂರಿನಲ್ಲಿರುವ ಕೇಂದ್ರ ಕಾನೂನು ಕೋಶದಿಂದ ಬಾಲಕೋಟೆಯಲ್ಲಿರುವ ಕೃಷ್ಣಾ ಮೇಲ್ದಂಡೆ ಯೋಜನೆಗೆ ನೇಮಿಸಿ ಕಾನೂನು ಕೋಶವನ್ನು ಬಲಯುತಗೊಳಿಸಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

- Advertisement -

ಧಾರವಾಡ ಮತ್ತು ಕಲಬುರಗಿ ಹೈಕೋರ್ಟ್‌ ಪೀಠಗಳಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯ ವಿಚಾರಣೆ ಹಂತದಲ್ಲಿರುವ ಭೂಸ್ವಾಧೀನ ಮೇಲ್ಮನವಿ ಪ್ರಕರಣಗಳಲ್ಲಿ ವಾದಿಸಲು ವಿಶೇಷ ಸರ್ಕಾರಿ ವಕೀಲರನ್ನು ನೇಮಿಸಲು ತೀರ್ಮಾನಿಸಲಾಯಿತು. ಖಾಲಿ ಹುದ್ದೆಗಳನ್ನು ಆದ್ಯತೆಯ ಮೇಲೆ ಭರ್ತಿ ಮಾಡಲು ತೀರ್ಮಾನಿಸಲಾಯಿತು. ಕೆ.ಬಿ.ಜೆ.ಎನ್.ಎಲ್ ಕಚೇರಿಯನ್ನು ಆಲಮಟ್ಟಿಗೆ ವರ್ಗಾಯಿಸಲು ಸೂಚಿಸಲಾಗಿದೆ. ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಲು ಹೆಚ್ಚುವರಿ ಸಿಬ್ಬಂದಿ ಒದಗಿಸಲು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಡ್ರೋನ್ ಸರ್ವೇ ಮತ್ತು ಸರ್ವೇಯರುಗಳನ್ನು ಬಳಸಿ ಸರ್ವೇ ಮಾಡಲು ಸೂಚಿಸಲಾಯಿತು ಎಂದು ಸಚಿವರು ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಹಂತ 1 ಮತ್ತು 2ರಡಿ 6.22 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸಾಮರ್ಥ್ಯ ಕಲ್ಪಿಸಲಾಗಿದ್ದರೂ, ಕಾಲುವೆಯ ಕೊನೆಯ ಭಾಗಕ್ಕೆ ನೀರು ತಲುಪುತ್ತಿಲ್ಲ. ರೈತರ ಜಮೀನುಗಳಿಗೆ ನೀರು ಹರಿಯಬೇಕು. ಇದಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹಂತ ಮೂರರಲ್ಲಿ 9 ಯೋಜನೆಗಳ ಅನುಷ್ಠಾನದ ಮೂಲಕ 5.94 ಹೆಕ್ಟೇರ್‌ ಜಮೀನಿಗೆ ನೀರು ಒದಗಿಸುವ ಗುರಿ ಹೊಂದಲಾಗಿದೆ ಎಂದು ಅವರು ಮಾಹಿತಿ ನೀಡಿದರು.

Join Whatsapp