ಶೋಭಾ ಕರಂದ್ಲಾಜೆಯನ್ನು ತರಾಟೆಗೆ ತೆಗೆದುಕೊಂಡ ಮೀನುಗಾರ ಮುಖಂಡರು

Prasthutha|

ಉಡುಪಿ: ನಗರದ ಪ್ರವಾಸಿ ಮಂದಿರದಲ್ಲಿ ರಾಷ್ಟ್ರೀಯ ಹೆದ್ದಾರಿ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮೀನುಗಾರ ಮುಖಂಡರು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.

- Advertisement -

ಸಭೆ ಆರಂಭವಾಗುತ್ತಿದ್ದಂತೆ ಮಲ್ಪೆ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ವಿಳಂಬ ವಿಷಯವನ್ನು ಪ್ರಸ್ತಾಪಿಸಿದ ಮೀನುಗಾರ ಮುಖಂಡ ಕಿಶೋರ್ ಸುವರ್ಣ, ದಶಕಗಳು ಕಳೆದರೂ ಮಲ್ಪೆಯಿಂದ ಉಡುಪಿಯವರೆಗೆ ಕೇವಲ 3.5 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲು ಜನಪ್ರತಿನಿಧಿಗಳಿಗೆ ಸಾಧ್ಯವಾಗಿಲ್ಲ.ನಗರಸಭೆ ಸದಸ್ಯರು, ಶಾಸಕರು, ಸಂಸದರು ಬಿಜೆಪಿ ಪಕ್ಷಕ್ಕೆ ಸೇರಿದ್ದು, ಕೇಂದ್ರದಲ್ಲೂ ಬಿಜೆಪಿ ಸರ್ಕಾರವೇ ಇದ್ದರೂ ರಸ್ತೆ ನಿರ್ಮಾಣ ಸಾಧ್ಯವಾಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಧಿಕಾರಿಗಳು, ಶಾಸಕರು, ಸಂಸದರು ಐಶಾರಾಮಿ ವಾಹನಗಳಲ್ಲಿ ಉಡುಪಿಯಿಂದ ಮಲ್ಪೆ ಬರುವುದರಿಂದ ಗುಂಡಿಗಳ ಸಮಸ್ಯೆ ಅರಿವಿಗೆ ಬರುವುದಿಲ್ಲ. ಮಲ್ಪೆಯಿಂದ ಪ್ರತಿದಿನ ಮಕ್ಕಳನ್ನು ಶಾಲೆಗೆ ಕರೆದೊಯ್ಯುವ ಪೋಷಕರಿಗೆ, ಮೀನು ಖರೀದಿಸಿ ದ್ವಿಚಕ್ರ ವಾಹನದಲ್ಲಿ ತೆರಳುವ ವ್ಯಾಪಾರಿಗಳಿಗೆ, ರಸ್ತೆ ಬದಿ ನಡೆದುಕೊಂಡು ಹೋಗುವ ಪಾದಚಾರಿಗಳು ಜೀವ ಭಯದಲ್ಲಿ ಓಡಾಡಬೇಕಿದೆ. ಕಣ್ಣೆದುರಿಗೆ ಹಲವರು ಅಪಘಾತಗಳಿಗೆ ತುತ್ತಾಗಿ ಜೀವನ ಕಳೆದುಕೊಳ್ಳುತ್ತಿದ್ದಾರೆ ಎಂದು ಸಮಸ್ಯೆ ಬಿಚ್ಚಿಟ್ಟು ಆಕ್ರೋಶ ಹೊರಹಾಕಿದ್ದಾರೆ.

- Advertisement -

ಹೆದ್ದಾರಿ ನಿರ್ಮಾಣಕ್ಕೆ ಸಮರ್ಪಕವಾಗಿ ಸರ್ವೆ ಕಾರ್ಯ ನಡೆದಿಲ್ಲ, ಭೂಮಿ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡಿಲ್ಲ. ಮಲ್ಪೆಯ ಹೃದಯ ಭಾಗದಲ್ಲಿರುವ 900 ಚದರಡಿ ಕಟ್ಟಡಕ್ಕೆ ಕೇವಲ ₹61,904 ಪರಿಹಾರ ನಿಗದಿಪಡಿಸಲಾಗಿದೆ. ಕಲ್ಮಾಡಿಯಲ್ಲಿ ಭೂಮಾಲೀಕರಿಗೆ ಪರಿಹಾರದ ನೋಟಿಸ್‌ ಅನ್ನೇ ನೀಡಿಲ್ಲ. ಅಧಿಕಾರಿಗಳು ಬೇಜವಾಬ್ದಾರಿಯುತವಾಗಿ ಭೂ ಪರಿಹಾರ ನಿಗದಿ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.‌

ಚುನಾವಣೆ ಹತ್ತಿರ ಬರುತ್ತಿದ್ದಂತೆ ನಾಲ್ಕೈದು ಮರಗಳನ್ನು ಕಡಿಯುವ ನಾಟಕವಾಡುವ ಅಧಿಕಾರಿಗಳು ಚುನಾವಣೆ ಮುಗಿಯುತ್ತಿದ್ದಂತೆ ಕಾಮಗಾರಿ ನಿಲ್ಲಿಸುತ್ತಾರೆ. ದಶಕಗಳಿಂದಲೂ ಮಲ್ಪೆ ಜನರನ್ನು ಹಾಗೂ ಮೀನುಗಾರರನ್ನು ಮೂರ್ಖರನ್ನಾಗಿ ಮಾಡಲಾಗುತ್ತಿದೆ. ಈ ಬಾರಿಯ ಚುನಾವಣೆಯಲ್ಲಿ ರಾಜಕಾರಣಿಗಳ ಆಟ ನಡೆಯುವುದಿಲ್ಲ. ಜನರು ರೊಚ್ಚಿಗೇಳಲಿದ್ದಾರೆ ಎಂದು ಎಚ್ಚರಿಕೆ ನೀಡಿದ್ದಾರೆ‌

ಕೊನೆಗೆ ಸಚಿವೆ ಶೋಭಾ ಕರಂದ್ಲಾಜೆ, ಯಾವುದೇ ಯೋಜನೆಗಳ ಜಾರಿಗೆ ಸ್ಥಳೀಯರ ಸಹಕಾರ ಅಗತ್ಯ. ಜನಪ್ರತಿನಿಧಿಗಳು ನಿಂತು ಕಾಮಗಾರಿ ಮಾಡಲಾಗುವುದಿಲ್ಲ. ಅಧಿಕಾರಿಗಳು ಇಚ್ಛಾಶಕ್ತಿಯಿಂದ ಕೆಲಸ ಮಾಡಬೇಕು. ಉಡುಪಿ-ಮಲ್ಪೆ ಹೆದ್ದಾರಿ ನಿರ್ಮಾಣ ಕಾಮಗಾರಿ ನಿರ್ಮಾಣ ಶೀಘ್ರ ಮುಗಿಸಲು ಈಗಲೂ ಬದ್ಧವಾಗಿದ್ದೇನೆ ಎಂದು ಭರವಸೆ ನೀಡಿದರು.

Join Whatsapp