ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಚಾಮುಂಡೇಶ್ವರಿ ಶಾಸಕ ಜಿ.ಟಿ ದೇವೇಗೌಡ ಆಗ್ರಹ
ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿ ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗಳು ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಭೇಟಿ ನೀಡಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ ಅವರು ಬೆಂಬಲ ಸೂಚಿಸಿದರು.
ಈ ವೇಳೆ ಮಾತನಾಡಿದ ಅವರು, ಪರಿಶಿಷ್ಟ ಪಂಗಡಕ್ಕೆ ನ್ಯಾಯಯುತವಾದ ಮೀಸಲಾತಿ ಕೊಡಲು ಸಾಧ್ಯವಾಗದಿದ್ದರೆ ಎಲ್ಲ ವರ್ಗದ ಮೀಸಲಾತಿಯನ್ನು ರದ್ದುಗೊಳಿಸಿ, ಅನ್ಯಾಯಕ್ಕೆ ಒಳಗಾಗಿರುವ ಬಡತನ ರೇಖೆಯಡಿಯಲ್ಲಿ ಬರುವ ಎಲ್ಲಾ ವರ್ಗದವರಿಗೂ ಮೀಸಲಾತಿ ಕಲ್ಪಿಸುವಂತೆ ಆಗ್ರಹಿಸಿದರು.
ಸ್ವಾಮೀಜಿ ಅವರ ಈ ಹೋರಾಟ ನ್ಯಾಯಯುತವಾಗಿದೆ. ಪರಿಶಿಷ್ಟ ಪಂಗಡದವರಿಗೆ ಅನ್ಯಾಯವಾಗಿದೆ. ಅದನ್ನು ವಿರೋಧಿಸಿ ಸ್ವಾಮೀಜಿಗಳು 6 ತಿಂಗಳಿಂದ ನಿರಂತವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವುದೇ ಅವರ ಶಕ್ತಿ. ಸಮುದಾಯದವರಿಗೆ ಸಾಮಾಜಿಕ ನ್ಯಾಯ, ಶಿಕ್ಷಣ, ಉದ್ಯೋಗ್ಯ ಹಾಗೂ ಸಮಾನತೆಗಾಗಿ ಸ್ವಾಮೀಜಿಗಳು ಮಾಡುತ್ತಿರುವ ಹೋರಾಟವನ್ನು ಯಾರೂ ನಿರ್ಲಕ್ಷ್ಯ ಮಾಡುವಂತಿಲ್ಲ. ಪಕ್ಷಾತೀತವಾಗಿ ಈ ಹೋರಾಟಕ್ಕೆ ಬೆಂಬಲ ಸೂಚಿಸುವ ಮೂಲಕ ಹೋರಾಟಕ್ಕೆ ನಮ್ಮ ಅಳಿಲು ಸೇವೆ ಸಲ್ಲಿಸಬೇಕು. ಶೇ.7.5ರಷ್ಟು ಮೀಸಲಾತಿ ಸಿಗುವವರೆಗೂ ಹೋರಾಟ ಮಾಡಲೇಬೇಕು, ಸರ್ಕಾರ ಮೀಸಲಾತಿಯನ್ನು ಜಾರಿಗೊಳಿಸಲೇಬೇಕು. ಇದು ಜಾರಿಯಾಗುತ್ತದೆ ಎಂಬ ನಂಬಿಕೆ, ಅಚಲವಾದ ವಿಶ್ವಾಸ ನನಗಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಮಾಡಿದ್ದರು, ಅವರ ನೀಡಿರುವ ವರದಿಯನ್ನು ಪರಿಶೀಲಿಸುವ ಅವಶ್ಯಕತೆಯಿಲ್ಲ. ಅವರು ಸಂವಿಧಾನವನ್ನು ಅಧ್ಯಯನ ಮಾಡಿದ್ದಾರೆ. ಸಂಶೋಧನೆ ಮಾಡಿದ್ದಾರೆ. ಹೀಗಾಗಿ ಅವರ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಆದರೆ ಆ ವರದಿಯನ್ನು ಜಾರಿಗೊಳಿಸುವಲ್ಲಿ ವೈಫಲ್ಯತೆ ಕಾಣುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಮೀಸಲಾತಿ ಕೊಡದಿದ್ದರೆ ಮುಂದಿನ ದಿನಗಳಲ್ಲಿ ಪರಿಶಿಷ್ಟ ಜಾತಿ ಸೇರಿದಂತೆ ಎಲ್ಲ ಸಮುದಾಯವರು ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ. ಈ ಕೂಡಲೇ ಮೀಸಲಾತಿ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ನಾನು ಜಿಲ್ಲಾ ಪರಿಷತ್ ನಲ್ಲಿದ್ದ ಸಂದರ್ಭದಲ್ಲಿ ದೆಹಲಿಗೆ ನಿಯೋಗದೊಂದಿಗೆ ತೆರಳಿ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರಿಗೆ ಮನವಿ ಸಲ್ಲಿಸಿದ್ದೆ. ದೇವೇಗೌಡರು ಸಹ ಅಂದಿನ ಪ್ರಧಾನಿಯಾಗಿದ್ದ ಚಂದ್ರಶೇಖರ್ ಅವರೊಂದಿಗೆ ಮಾತನಾಡಿ ಅದನ್ನು ಜಾರಿಗೊಳಿಸಿದರು. ಆದರೆ ಸಂಪೂರ್ಣವಾಗಿ ರಾಜ್ಯಾದ್ಯಂತ ಜಾರಿಗೆ ಬರದಿದ್ದ ಸಂದರ್ಭದಲ್ಲಿ ಇತ್ತೀಚೆಗೆ ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಶ್ರೀರಾಮುಲು ಸೇರಿದಂತೆ ಹಲವಾರು ಮುಖಂಡರು ಹೋರಾಟ ಮಾಡಿ ತಳವಾರ ಹಾಗೂ ಪರಿವಾರದಲ್ಲಿದ್ದ ತಾರತಮ್ಯವನ್ನು ಸರಿಪಡಿಸಿರುವುದನ್ನು ಇದೇ ಸಂದರ್ಭದಲ್ಲಿ ಸ್ಮರಿಸಿ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದರು..
ನಾಗಮೋಹನ್ ದಾಸ್ ವರದಿ ಯಥಾವತ್ತಾಗಿ ಜಾರಿಗೆ ಜಿ.ಟಿ.ದೇವೇಗೌಡ ಆಗ್ರಹ
Prasthutha|
![WhatsApp-Image-2022-08-08-at-6.37.22-PM](https://prasthutha.com/wp-content/uploads/2022/08/WhatsApp-Image-2022-08-08-at-6.37.22-PM-e1659964077231.jpeg)
![](https://prasthutha.com/wp-content/uploads/2022/10/Screenshot-from-2022-10-25-23-10-04.png)