Home ಟಾಪ್ ಸುದ್ದಿಗಳು ಕಾಂಗ್ರೆಸ್ ತತ್ವ, ಸಿದ್ಧಾಂತ, ಕೊಡುಗೆಯ ಬಗ್ಗೆ ಅರಿವು ಮೂಡಿಸಲು ಸೆ.26ರಿಂದ ಗಾಂಧಿ ನಡಿಗೆ ಕಾರ್ಯಕ್ರಮ

ಕಾಂಗ್ರೆಸ್ ತತ್ವ, ಸಿದ್ಧಾಂತ, ಕೊಡುಗೆಯ ಬಗ್ಗೆ ಅರಿವು ಮೂಡಿಸಲು ಸೆ.26ರಿಂದ ಗಾಂಧಿ ನಡಿಗೆ ಕಾರ್ಯಕ್ರಮ

ಬೆಂಗಳೂರು: ಈ ತಿಂಗಳು 26ರಂದು ದೇವನಹಳ್ಳಿಯಲ್ಲಿ ಹಾಗೂ 29ರಂದು ಯಲಹಂಕ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ‘ಗಾಂಧಿ ನಡಿಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮುಂದಿನ ತಿಂಗಳು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿನ ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಈ ಕಾರ್ಯಕ್ರಮ ನಡೆಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನವೆಂಬರ್ ನಲ್ಲಿ ಚಿಕ್ಕಬಳ್ಳಾಪುರ ವ್ಯಾಪ್ತಿಯ ಬಾಗೇಪಲ್ಲಿ, ಗೌರಿಬಿದನೂರಿನಲ್ಲಿ 10ರಿಂದ ಸಂಜೆ 6ರವರೆಗೂ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಸಿಎಲ್ ಪಿ ನಾಯಕರಾದ ಸಿದ್ದರಾಮಯ್ಯ, ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹ್ಮದ್ ಅವರು ಭಾಗವಹಿಸಲಿದ್ದಾರೆ. ಇದರಲ್ಲಿ ವಾರ್ಡ್, ತಾಲೂಕು, ಜಿಲ್ಲಾ ಮಟ್ಟದ ನಾಯಕರು, ಅಭ್ಯರ್ಥಿಗಳು ಭಾಗವಹಿಸಲಿದ್ದು, ಕಾರ್ಯಕರ್ತರಲ್ಲಿ ಹುರುಪು ತುಂಬಲು ಈ ಕಾರ್ಯಕ್ರಮ ನಡೆಸುತ್ತಿದ್ದೇವೆ ಎಂದರು.
ದೇವರಾಜ ಅರಸು ಅವರ ಕಾಲದಲ್ಲಿ ಹಾಗೂ ಇಂದಿರಾ ಅವರು ಸೋತ ನಂತರ ಈ ರೀತಿ ಕಾರ್ಯಕ್ರಮ ಮಾಡಿ ಪಕ್ಷ ಸಂಘಟನೆ ಮಾಡಿದ್ದೆವು. ಆಗ ಪಕ್ಷ ವಿಧಾಸಭೆ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಗೆಲುವು ಸಾಧಿಸಿತ್ತು. ಈಗ ಹಣ ಹಾಗೂ ಜಾತಿ ಚುನಾವಣೆಯಲ್ಲಿ ಪ್ರಾಧಾನ್ಯತೆ ಪಡೆದ ವಿಕೃತ ರಾಜಕಾರಣ ಬೆಳೆದಿವೆ. ಇದಕ್ಕೆ ಕಾರಣ ಬಿಜೆಪಿ. ಅವರು ಬ್ರಿಟೀಷರಂತೆ ಮತಗಳು, ಧರ್ಮಗಳ ನಡುವೆ ಒಡೆದು ಆಳುವ ನೀತಿ ಅನುಸರಿಸುತ್ತಿವೆ. ಇದು ಯಾವಾಗಲೂ ಯಶಸ್ವಿಯಾಗುವುದಿಲ್ಲ. ಪ್ರಧಾನಿ ಖ್ಯಾತಿ ಕುಸಿತವೇ ಇದಕ್ಕೆ ಸಾಕ್ಷಿ. ಜಿಎಸ್ ಟಿ, ನೋಟು ರದ್ಧತಿ ಮೂಲಕ ಸರ್ಕಾರ ಜನರ ಮೇಲೆ ಬರೆ ಎಳೆದಿದೆ. ರಾಷ್ಟ್ರದ ಸಂಪಟ್ಟಿನಲ್ಲಿ ಶೇ.50ರಷ್ಟು ದೇಶದ ಶೇ.10ರಷ್ಟು ಶ್ರೀಮಂತರ ಕೈಯಲ್ಲಿದೆ. ಜಿಡಿಪಿ ಋಣಾತ್ಮಕ ಹಂತ ತಲುಪಿದೆ, ನಿರುದ್ಯೋಗ ಹೆಚ್ಚಾಗಿದೆ. ಆದರೆ 14 ಕೋಟಿ ಉದ್ಯೋಗ ಕಳೆದುಕೊಂಡಿದ್ದೇವೆ. ಕಪ್ಪು ಹಣ ತಂದು 15 ಲಕ್ಷ ಖಾತೆಗೆ ಹಾಕುತ್ತೇವೆ ಎಂದು ಜನರನ್ನು ಅಪಹಾಸ್ಯ ಮಾಡಿದ್ದಾರೆ.

ಭ್ರಷ್ಟಾಚಾರ ನಿರ್ಮೂಲನೆ ಮಾಡಲು ನಾನು ಕಾನೂನು ಸಚಿವ ಆಗಿದ್ದಾಗ ಒಂದು ಸಮಿತಿ ಮಾಡಿದ್ದೆವು. ನಂತರ 2014ರಲ್ಲಿ ಲೋಕಪಾಲ ಮಸೂದೆ ಜಾರಿಗೆ ತಂದಿದ್ದೆವು. ನಾವು ಅದಕ್ಕೆ ಬದ್ಧವಾಗಿದ್ದೆವು. ಆದರೆ 2017ರವರೆಗೆ ಲೋಕಪಾಲರ ನೇಮಕ ಮಾಡಿಲ್ಲ ಎಂದು ಸುಪ್ರೀಂ ಕೋರ್ಟ್ ಸರ್ಕಾರವನ್ನು ಪ್ರಶ್ನಿಸಿತ್ತು. ನಂತರ ಲೋಕಪಾಲರನ್ನು ನೇಮಕ ಮಾಡಿತ್ತು. ರಾಜ್ಯದಲ್ಲೂ ಲೋಕಾಯುಕ್ತರು ಇಲ್ಲ, ಕೇಂದ್ರದಲ್ಲಿ ಲೋಕಪಾಲರೂ ಇಲ್ಲ. ಭ್ರಷ್ಟಾಚಾರ ಲಾಭ ಪಡೆದು ಅಧಿಕಾರಕ್ಕೆ ಬಂದ ಮೋದಿ, ಕೇಜ್ರಿವಾಲ್ ಇಂದು ಭ್ರಷ್ಟಾಚಾರ ನಡೆಯುತ್ತಿದ್ದರೂ ಮೌನವಾಗಿದ್ದಾರೆ ಎಂದು ಆಪಾದಿಸಿದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಮಾತನಾಡಿ, ದೇಶಕ್ಕೆ ಸ್ವಾತಂತ್ರ್ಯ ತಂದವರನ್ನು ಮೂಲೆಗುಂಪು ಮಾಡುವ ಪ್ರಯತ್ನ ನಡೆಯುತ್ತಿದೆ. ಬಿಜೆಪಿಯವರು ಅಧಿಕಾರಕ್ಕೆ ಬಂದ ನಂತರ, ಅಪಪ್ರಚಾರ ಮಾಡುತ್ತಿದೆ. ಕಾಂಗ್ರೆಸ್, ಗಾಂಧಿ, ನೆಹರು, ಇಂದಿರಾಗಾಂಧಿ ಅವರ ವಿರುದ್ಧ ಅಪಪ್ರಚಾರ ನಡೆಸುತ್ತಿದ್ದಾರೆ. ಬಿಜೆಪಿಯ ಸುಳ್ಳುಗಳು ಜನರಿಗೆ ಮನದಟ್ಟಾಗುತ್ತದೆ. ಹಾಗಂತ ನಾವು ಸುಮ್ಮನೆ ಕೂರದೆ, ಜನರಲ್ಲಿ ಅರಿವು ಮೂಡಿಸಲು ನಾವು ಕೂಡ ಪ್ರಯತ್ನ ಮಾಡಲು ಈ ಕಾರ್ಯಕ್ರಮ ಮಾಡುತ್ತಿದ್ದೇವೆ ಎಂದು ಹೇಳಿದರು.
ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಮಾತನಾಡಿ, ಮಾಜಿ ಮುಖ್ಯಮಂತ್ರಿಗಳು ‘ಗಾಂಧಿ ನಡಿಗೆ’ ವಿಶೇಷ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇಲ್ಲಿ ಕಾಂಗ್ರೆಸ್ ತತ್ವ, ಸಿದ್ಧಾಂತ, ಕೊಡುಗೆ, ವಿಚಾರಧಾರೆ ವಿವರಿಸಲಾಗುವುದು. ಆಮೂಲಕ ಅವರು ಜನರಿಗೆ, ಯುವ ಪೀಳಿಗೆಗೆ ಮಾರ್ಗದರ್ಶನ ನೀಡುವ ಪ್ರಯತ್ನ ಮಾಡಲಾಗುತ್ತದೆ. ಕಾಂಗ್ರೆಸ್ ವತಿಯಿಂದ ಮುಂದಿನ ತಿಂಗಳು ಗಾಂಧಿ ಗ್ರಾಮ ಸ್ವರಾಜ್ಯ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಎಲ್ಲ ಪಂಚಾಯಿತಿ, ಬ್ಲಾಕ್ ಹಾಗೂ ಗಾಂಧೀಜಿ ಕೊಡುಗೆ, ಹೋರಾಟ ಎಲ್ಲವನ್ನು ಜನರಿಗೆ ವಿವರಿಸಲಾಗುವುದು ಎಂದರು.

Join Whatsapp
Exit mobile version