ಬೆಂಗಳೂರು: ಗ್ಯಾಂಗ್ ವೊಂದು ಯುವಕನೋರ್ವನನ್ನು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಈ ಸಂಬಂಧ ಸೊಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೇಮಂತ್, ಯಶ್ವಂತ್, ಶಿವಶಂಕರ್, ಶಶಾಂಕ್ ಗೌಡ ಸೇರಿದಂತೆ ಎಂಟು ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಯುವಕನಿಗೆ ಥಳಿಸಿದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು.
ಘಟನೆ ಹಿನ್ನೆಲೆ: ಕುಶಾಲ್ ಎಂಬಾತ ಎರಡು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ, ಆದರೆ ಯುವತಿ ಬೇರೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಲವ್ ಬ್ರೇಕಪ್ ಮಾಡಿಕೊಂಡಿದ್ದಳು. ಇದರಿಂದ ಕೆರಳಿದ ಕುಶಾಲ್ ಆಕೆಗೆ ಅಶ್ಲೀಲ ಮೆಸೇಜ್ ಕಳುಹಿಸಿದ್ದ ಎಂಬ ಆರೋಪ ಕೇಳಿ ಬಂದಿದೆ.
ಇನ್ನು ಯುವತಿ ಈ ವಿಚಾರವನ್ನು ತನ್ನ ಸ್ನೇಹಿತರಿಗೆ ತಿಳಿಸಿದ್ದಳು. ನಂತರ ಮಾತುಕತೆಗೆಂದು ಕುಶಾಲ್ನನ್ನು ಕರೆಸಿಕೊಂಡ ಗ್ಯಾಂಗ್, ಆತನನ್ನ ಕಿಡ್ನಾಪ್ ಮಾಡಿ ಅಲೂರಿನ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಹಲ್ಲೆಯ ದೃಶ್ಯ ಮೊಬೈಲ್ನಲ್ಲಿ ಸೆರೆ ಹಿಡಿದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ.
ಕುಶಾಲ್ ಅಪಹರಣ ಸಂಬಂಧ ಪೋಷಕರು ಸೊಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಕಿಡ್ನಾಪ್ ಪ್ರಕರಣ ದಾಖಲು ಮಾಡಿದ್ದರು.
