ಮಂಗಳೂರು: ಬಿಸಿಲ ಧಗೆಯಿಂದ ಬೇಸತ್ತು ಹೋಗಿದ್ದ ಮಂಗಳೂರಿನಲ್ಲಿ ಕೊನೆಗೂ ಮಳೆಯಾಗಿದೆ.
ಮಂಗಳೂರು ನಗರದಲ್ಲಿ ಗಾಳಿಯ ಅಬ್ಬರ ಜೋರಾಗಿತ್ತು. ದಿನವಿಡೀ ಮೋಡ ಕವಿದ ವಾತಾವರಣವಿತ್ತು. ಆದರೆ ಸಂಜೆ ಹೊತ್ತಿಗೆ ಭಾರೀ ಮಳೆ ಸುರಿದಿದೆ. ಶಾಲಾ ಕಾಲೇಜು ಬಿಡುವ ಸಮಯದಲ್ಲೇ ಮಳೆಯಾದ ಕಾರಣ ವಿದ್ಯಾರ್ಥಿಗಳು ಕೊಡೆಯಿಲ್ಲದೆ ಮಳೆಯಲ್ಲಿ ನೆನೆದರು.
ಅಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಪುತ್ತೂರು, ಸುಳ್ಯ, ಬಂಟ್ವಾಳ, ಕಡಬ ತಾಲೂಕಿನ ವಿವಿಧೆಡೆ ಇಂದು ಸಂಜೆ ಉತ್ತಮ ಮಳೆಯಾಗಿದೆ.
ಚಂಡಮಾರುತ ಪ್ರಭಾವದಿಂದಾಗಿ ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ಕಡಿಮೆ ಒತ್ತಡ ರೂಪುಗೊಂಡಿದೆ. ಇದರ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಹಲವು ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಭರ್ಜರಿ ಮಳೆ ಇರಲಿದೆ ಎಂದು ಐಎಂಡಿ ತಿಳಿಸಿದೆ. ಮುಂದಿನ ಐದು ದಿನಗಳ ವರೆಗೆ ಗರಿಷ್ಠ ತಾಪಮಾನದಲ್ಲಿ ಯಾವುದೇ ಬದಲಾವಣೆ ಇಲ್ಲ. ಕಳೆದ ಮೂರ್ನಾಲ್ಕು ದಿನಗಳಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇದೆ. ಮುಂದಿನ ದಿನಗಳಲ್ಲಿ ಭರ್ಜರಿ ಮಳೆ ಇರಲಿದೆ.